JGM's work is completely shoddy: Demand for investigation
- ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರವೇ ಸಿದ್ದು ನಾಯಕ್ ಒತ್ತಾಯ
---
ಕನ್ನಡಪ್ರಭ ವಾರ್ತೆ ವಡಗೇರಾ
ತಾಲೂಕಿನಾದ್ಯಂತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅಡಿಯಲ್ಲಿ ಬರುವ ಜೆಜಿಎಂ ಕಾಮಗಾರಿಯು ಸಂಪೂರ್ಣ ಕಳಪೆ ಮಟ್ಟದ್ದಾಗಿದೆ. ತಕ್ಷಣ ಸೂಕ್ತವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ನಾಯಕ್ ಹತ್ತಿಕುಣಿ ಒತ್ತಾಯಿಸಿದ್ದಾರೆ.
ಜೆಜೆಎಂ ಯೋಜನೆ ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಸರಕಾರದ ಹಣವು ಗುತ್ತಿಗೆದಾರರ ಪಾಲಾಗಿದ್ದು, ಇದರಲ್ಲಿ ನೇರವಾಗಿ ಅಧಿಕಾರಿಗಳು ಶಾಮಿಯಲಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈಗಾಗಲೇ ಬೇಸಿಗೆಯು ಆರಂಭವಾಗಿದ್ದು, ತಾಲೂಕಿನ ಜನರಿಗೆ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಜೆಜಿಎಂ ಕಾಮಗಾರಿಯು ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಆರೋಪಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕಾಮಗಾರಿ ಸಂಪೂರ್ಣವಾಗಿ ಮುಗಿಯದಿದ್ದರೂ ಕೂಡ ಅಧಿಕಾರಿಗಳು ಮುಂಚಿತವಾಗಿಯೇ ಬಿಲ್ ಪಾವತಿಸಿದ್ದಾರೆ. ಹಲವು ಗ್ರಾಮಗಳಲ್ಲಿ ಕಾಮಗಾರಿ ಮುಗಿದಿದ್ದರೂ ಮನೆಗಳಿಗೆ ಹನಿ ನೀರು ಸರಬರಾಜು ಆಗುತ್ತಿಲ್ಲ. ಆದರೆ, ಸರಕಾರದ ಹಣ ಮಾತ್ರ ನೀರಿನಂತೆ ಪೋಲಾಗಿದೆ. ಕುಡಿಯಲು ಮಾತ್ರ ನೀರು ಸಿಗುತ್ತಿಲ್ಲ. ಮೇಲಾಧಿಕಾರಿಗಳು ಮಾತ್ರ ಹವಾ ನಿಯಂತ್ರಣ ಕೊಠಡಿಯಲ್ಲಿ ಕುಳಿತು ಮಜಾ ಮಾಡುತ್ತಿದ್ದಾರೆ. ಕೂಡಲೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅವರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ತನಿಖೆ ಮಾಡಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
-
20ವೈಡಿಆರ್6: ಸಿದ್ದು ನಾಯಕ್ ಹತ್ತಿಕುಣಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಯಾದಗಿರಿ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.