)
ಉಡುಪಿ: ಕೊರಗ ಸಮುದಾಯದ ಸುಶಿಕ್ಷಿತ ಯುವಕ-ಯುವತಿಯರಿಗೆ ಉದ್ಯೋಗಾವಕಾಶಕ್ಕೆ ಪೂರಕ ಮತ್ತು ಅಗತ್ಯ ತರಬೇತಿ ನೀಡಿ, ಅವರಿಗೆ ಜಿಲ್ಲೆಯ ಸಣ್ಣ ಕೈಗಾರಿಕೆಗಳಲ್ಲಿ ಉದ್ಯೋಗಕ್ಕೆ ವ್ಯವಸ್ಥೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ತಾಪಂ ಸಭಾಂಗಣದಲ್ಲಿ ನಡೆದ ಕೊರಗ ಸಮುದಾಯದ ಕುಂದು ಕೊರತೆಗಳ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿರುವ ಎಲ್ಲ ಕೊರಗ ಸಮುದಾಯದ ಕುಟುಂಬಗಳ ನಿಖರ ವಿವರಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಶಾಸಕರು, ಮಣಿಪಾಲ ಕೆಎಂಸಿ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಸಿ, ವಿಶಿಷ್ಟ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.ಸಭೆಯಲ್ಲಿ ಮಾತನಾಡಿದ ಕೊರಗ ಸಮುದಾಯದ ಮುಖಂಡ ಗಣೇಶ್ ಕುಂಭಾಶಿ, ಈ ಹಿಂದೆ ಕೊರಗ ಸಮುದಾಯಕ್ಕೆ ಐಟಿಡಿಪಿ ಮೂಲಕ ಮನೆಗಳನ್ನು ನಿರ್ಮಿಸಲಾಗುತ್ತಿತ್ತು. ಈಗ ಅದನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲಾಗಿದೆ. ನಿಗಮದ ನಿಯಮಗಳಿಂದಾಗಿ ಕೊರಗ ಸಮುದಾಯದ ಅನೇಕರು ವಸತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಪುನಃ ಐಟಿಡಿಪಿ ಮೂಲಕವೇ ಮನೆ ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿದರು.