ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ವಕೀಲರ ಸಂಘದ ಅಧ್ಯಕ್ಷ ಚಾಲನೆ
ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಎಲ್ಲರೂ ಮುಕ್ತ ಮನಸ್ಸಿನಿಂದ ಹೋರಾಟ ಮಾಡಿದಾಗ ನಿರ್ಮೂಲನೆ ಸಾಧ್ಯ ಎಂದು ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಬೇಲೇರಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ ವತಿಯಿಂದ ನಡೆದ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಬಡವರ ಮಕ್ಕಳನ್ನು ದೊಡ್ಡ ನಗರಗಳಿಗೆ ಕೆಲಸಕ್ಕೆ ಕರೆದುಕೊಂಡು ಹೋಗಿ ಅವರ ಮೇಲೆ ದೌರ್ಜನ್ಯಗಳು ನಡೆಸುತ್ತಿರುವುದು ಸಾಮಾನ್ಯವಾಗಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಾಯ್ದೆ ಕಾನೂನು ಜಾರಿಗೆ ತಂದಿದ್ದರೂ ಸಮರ್ಪಕ ಅನುಷ್ಠಾನ ಮಾಡುವಲ್ಲಿ ಅಧಿಕಾರಿ ವರ್ಗ ವಿಫಲವಾಗುತ್ತಿರುವುದು ಸರಿಯಲ್ಲ ಎಂದರು.
ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಿಸಿಮರ ಹಾಗೂ ಶಿಕ್ಷಣ ಸಂಯೋಜಕ ಬಸವರಾಜ ಅಂಗಡಿ ಮಾತನಾಡಿ, ಮಕ್ಕಳನ್ನು ಕಾನೂನು ಬಾಹಿರವಾಗಿ ಕೆಲಸಕ್ಕೆ ಕಳಿಸಿದರೆ ಅದು ಅಪರಾಧವಾಗುತ್ತದೆ. ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ವೇಶ್ಯಾವಾಟಿಕೆ, ಭಿಕ್ಷಾಟನೆ ಬಗ್ಗೆ ಸ್ಥಳೀಯ ಮಕ್ಕಳ ಸಹಾಯ ವಾಣಿ, ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.