ದೊಡ್ಡಬಳ್ಳಾಪುರ: ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನ.3ರಿಂದ 11ರವರೆಗೆ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ 2025-26ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗ ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕಿವಿಮಾತು ಹೇಳಿದರು.ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆಯಿಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 20 ಸಕ್ರಿಯ ಪ್ರಕರಣಗಳು:ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕುಷ್ಠರೋಗವು ಮೈಕೊಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಮುಂದೆ ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆರಂಭದಲ್ಲಿ ಚರ್ಮದ ಮೇಲೆ ಮಚ್ಚೆಗಳು ಉಲ್ಬಣವಾಗುವುದು, ಚರ್ಮದ ಬಣ್ಣ ತಿಳಿ ಬಿಳಿ ಅಥವಾ ತಾಮ್ರ ಬಣ್ಣಕ್ಕೆ ತಿರುಗುವುದು ಇತ್ಯಾದಿಯಾಗಿ ರೋಗ ಚಿಹ್ನೆಗಳನ್ನು ಗುರುತಿಸಬಹುದಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ನಾಗರಾಜು ಎಂ.ಜಿ, ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞರಾದ ಡಾ. ಶಾಲಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಗೋವಿಂದ್ ರಾಜು, ನಾಲ್ಕು ತಾಲೂಕಿನ ಹಿರಿಯ ನಿರೀಕ್ಷಣ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.23ಕೆಡಿಬಿಪಿ1-
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ 2025-26ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನ ಕುರಿತು ನಡೆದ ಸಭೆ ಬಳಿಕ ಅಪರ ಜಿಲ್ಲಾಧಿಕಾರಿ ಸೈಯದಾ ಆಯಿಷಾ ಅಭಿಯಾನದ ಭಿತ್ತಿಪತ್ರ ಬಿಡುಗಡೆ ಮಾಡಿದರು.