ವ್ಯಸನಮುಕ್ತ ಸಮಾಜಕ್ಕೆ ಕೈಜೋಡಿಸಿ: ಎಸ್.ವಿ. ಸಂಕನೂರ

KannadaprabhaNewsNetwork |  
Published : Aug 03, 2026, 02:30 AM IST
ಗದಗ ನಗರದ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಶನಿವಾರ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ವಿಪ ಸದಸ್ಯ ಎಸ್‌.ವಿ. ಸಂಕನೂರ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಾದಕ ದ್ರವ್ಯ ವ್ಯಸನ ದುಶ್ಚಟವಲ್ಲ, ಅದೊಂದು ಮೆದುಳಿನ ಕಾಯಿಲೆ.

ಗದಗ: ದೇಶದ ನಿಜವಾದ ಆಸ್ತಿ ಎಂದರೆ ಈಗಿನ ಯುವಕರು, ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ಹಾಗೂ ನಶಾಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.

ನಗರದ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆದರ್ಶ ಶಿಕ್ಷಣ ಸಮಿತಿಯ ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪಿಯು ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ನಡೆದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆ. 1ರಂದು ಮಹಾಂತ ಶಿವಯೋಗಿಗಳ ಜನ್ಮದಿನ. 1975ರಿಂದ ಸುಮಾರು 42 ವರ್ಷಗಳ ಕಾಲ ಮಹಾಂತ ಜೋಳಿಗೆ ಕಾರ್ಯಕ್ರಮದ ಮೂಲಕ ಮನೆ ಮನೆಗೆ ತೆರಳಿ, ಜನರ ಕೆಟ್ಟ ಅಭ್ಯಾಸಗಳನ್ನು (ಸಿಗರೇಟ್, ತಂಬಾಕು, ಮದ್ಯಪಾನ ಇತ್ಯಾದಿ) ಜೋಳಿಗೆಗೆ ಹಾಕಿಸಿಕೊಂಡು, ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ತಮ್ಮ ಇಡೀ ಜೀವನವನ್ನೇ ಅರ್ಪಿಸಿದ ಮಹಾನ್ ಚೇತನ ಮಹಾಂತ ಶಿವಯೋಗಿಗಳು. ಅವರ ಸೇವೆ ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಆ. 1ರಂದು ಕರ್ನಾಟಕ ಸರ್ಕಾರ ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸುತ್ತಿದೆ ಎಂದರು.

ಉಪನ್ಯಾಸಕ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವಿಜ್ಞಾನ ಸಹ ಪ್ರಾಧ್ಯಾಪಕ ಡಾ. ಫಕೀರಪ್ಪ ಗಾಣಿಗೇರ ಮಾತನಾಡಿ, ಮಾದಕ ದ್ರವ್ಯ ವ್ಯಸನ ದುಶ್ಚಟವಲ್ಲ, ಅದೊಂದು ಮೆದುಳಿನ ಕಾಯಿಲೆ ಎಂದು ಹೇಳಿದರು. ದೇಶದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ವ್ಯಸನದ ಭೀಕರತೆ ಹಾಗೂ ಅದರ ಹಿಂದಿನ ವೈಜ್ಞಾನಿಕ ಕಾರಣಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಆರ್.ಆರ್. ಕುಲಕರ್ಣಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ರಾಜ್ಯ ಪ್ರಶಸ್ತಿ ವಿಜೇತ ಜನಪದ ಕಲಾವಿದ ವೀರಣ್ಣ ಅಂಗಡಿ ದುಶ್ಚಟಗಳ ದುಷ್ಪರಿಣಾಮಗಳ ಕುರಿತು ಸ್ವರಚಿತ ಗೀತೆ ಪ್ರಸ್ತುತ ಪಡಿಸಿದರು. ಆದರ್ಶ ಶಿಕ್ಷಣ ಸಮಿತಿಯ ಕಾಲೇಜು ವಿದ್ಯಾರ್ಥಿಗಳಿಂದ ವ್ಯಸನಮುಕ್ತ ದಿನಾಚರಣೆಯ ಕುರಿತು ಕಿರುನಾಟಕ ಪ್ರದರ್ಶನ ನಡೆಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಕಿಂಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ, ಪಿಎಸ್‌ಐ ಲಕ್ಷ್ಮಣ ಅರಿ, ಪ್ರಾಧ್ಯಾಪಕ ಬಾಹುಬಲಿ ಜೈನರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡಿ: ರುದ್ರಪ್ಪ ಲಮಾಣಿ
ಗ್ರಾಪಂ ಡಿ ದರ್ಜೆ ನಿವೃತ್ತರಿಗೆ ಉಪಧನ ಮರೀಚಿಕೆ