ಗರ್ಭಕಂಠ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ: ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ

KannadaprabhaNewsNetwork |  
Published : Feb 11, 2026, 02:00 AM IST
ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಕೊಡುವ ಜತೆಗೆ ಆರೋಗ್ಯ, ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸ ಯೋಜನೆಗಳನ್ನು ಪರಿಚಯಿಸುತ್ತಿದೆ.

ಕನ್ನಡಪ್ರಭವಾರ್ತೆ ನಾಗಮಂಗಲ

ದೇಶದಲ್ಲಿ ಗರ್ಭಕಂಠ ಕ್ಯಾನ್ಸರ್‌ನಿಂದ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಕಾಲಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡು ವ್ಯಾಕ್ಸಿನ್ ಪಡೆಯುವ ಮೂಲಕ ಗರ್ಭಕಂಠ ಕ್ಯಾನ್ಸರ್‌ಅನ್ನು ತಡೆಗಟ್ಟಬಹುದಾಗಿದೆ. ಆ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆ ಮೊದಲಿಗೆ ಗರ್ಭಕಂಠ ಕ್ಯಾನ್ಸರ್‌ ಮುಕ್ತ ಜಿಲ್ಲೆಯಾಗಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಹಾಗೂ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಕೊಡುವ ಜತೆಗೆ ಆರೋಗ್ಯ, ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸ ಯೋಜನೆಗಳನ್ನು ಪರಿಚಯಿಸುತ್ತಿದೆ. ಪ್ರತಿಯೊಬ್ಬರ ಜೀವನ ಸ್ಥಿರತೆಯಿಂದಿರಲು ಆರೋಗ್ಯ ಇಲಾಖೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಜಿಲ್ಲೆಯ 56 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಂಗಳೂರಿನ ಖಾಸಗಿ ಕಂಪನಿಯ ಸಿಎಸ್‌ಆರ್ ನಿಧಿಯಡಿ ಇಸಿಜಿ ಯಂತ್ರಗಳನ್ನು ನೀಡಲಾಗಿದೆ ಎಂದರು.

ಜೆಡಿಎಸ್‌ನವರು ಸಿಎಸ್‌ಆರ್ ಅನುದಾನ ಕೊಟ್ಟಿದ್ದೇವೆ ಎಂದು ಪ್ರಚಾರ ಪಡೆಯುತ್ತಾರೆ. ಆದರೆ ನಾವು ಮಾಡಿರೋದನ್ನು ಎಲ್ಲಿಯೂ ಹೇಳೋದಿಕ್ಕೆ ಹೋಗಲ್ಲ. ನಮಗೆ ಪ್ರಚಾರಕ್ಕಿಂತ ಜಿಲ್ಲೆಯ ಅಭಿವೃದ್ದಿ ಮುಖ್ಯವಷ್ಟೇ. ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಪ್ರತಿಯೊಬ್ಬ ಮಹಿಳೆಯು ಮೂರು ವರ್ಷಕ್ಕೊಮ್ಮೆ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಈ ರೋಗವನ್ನು ತಡೆಗಟ್ಟಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ. ಆದ್ದರಿಂದ ನಮ್ಮ ಜಿಲ್ಲೆಯನ್ನು ಗರ್ಭಕಂಠ ಕ್ಯಾನ್ಸರ್ ಮುಕ್ತ ಜಿಲ್ಲೆಯನ್ನಾಗಿಸಲು ವೈದ್ಯರು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಮಾತನಾಡಿ, ಪ್ರಾಥಮಿಕ ತಪಾಸಣೆ ಜೀವರಕ್ಷಕ ಸಂಜೀವಿನಿ ಎಂಬ ಘೋಷವಾಕ್ಯದೊಂದಿಗೆ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಹಾಗೂ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ. ಪ್ರತಿಯೊಬ್ಬ ಮಹಿಳೆಯರೂ ಕೂಡ ಗರ್ಭಕಂಠ ಕ್ಯಾನ್ಸರ್ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.

ಮಹಿಳೆಯರ ದೇಹದ ಯಾವುದೇ ಭಾಗದಲ್ಲಿ ಕ್ಯಾನ್ಸರ್ ಬಂದರೂ ಕೂಡ ಗರ್ಭಕೋಶದಲ್ಲಿ ಅತಿಹೆಚ್ಚು ಕ್ಯಾನ್ಸರ್ ರೋಗ ಬರುತ್ತದೆ. ಈ ಗರ್ಭಕೋಶ ಕ್ಯಾನ್ಸರ್‌ನಿಂದ ದೇಶದಲ್ಲಿ ಸಾವಿರಾರು ಮಂದಿ ಸಾವಿಗೀಡಾಗುತ್ತಿದ್ದಾರೆ. ಈ ರೋಗವನ್ನು ಸುಲಭವಾಗಿ ಕಂಡು ಹಿಡಿದು ಗುಣಪಡಿಸಬಹುದು. ನಿರ್ಲಕ್ಷ್ಯ ವಹಿಸಿದರೆ ಸಾವೂ ಕೂಡ ಸಂಭವಿಸಬಹುದು ಎಂದು ಎಚ್ಚರಿಸಿದರು.

ಈ ರೋಗವನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಮಾಡಿಸಿಕೊಂಡರೆ ಸಾವಿನಿಂದ ತಪ್ಪಿಸಿಕೊಳ್ಳಬಹುದು. ದೇಶದಲ್ಲಿ ಪ್ರತಿವರ್ಷ 1.23ಲಕ್ಷಕ್ಕೂ ಹೆಚ್ಚು ಹೊಸ ರೋಗಿಗಳು ಈ ರೋಗಕ್ಕೆ ಒಳಗಾಗುತ್ತಿದ್ದಾರೆ. ಈ ಪೈಕಿ ಸುಮಾರು 77,348ಮಂದಿ ಪ್ರತಿ ವರ್ಷ ಸಾವನ್ನಪ್ಪುತ್ತಿದ್ದಾರೆ. ವಾಸಿಯಾಗದಂತಹ ಹಲವು ಬಗೆಯ ಕ್ಯಾನ್ಸರ್‌ಗಳಿದ್ದರೂ ಕೂಡ ಎಚ್‌ಪಿವಿ ಎಂಬ ವೈರಸ್‌ನಿಂದ ಹರಡುವ ಗರ್ಭಕಂಠ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದರು.

ಬಾಲ್ಯ ವಿವಾಹ, ಹೆಚ್ಚು ಮಕ್ಕಳ ಜನನ, ಸ್ವಚ್ಛತೆಯ ಕೊರತೆಯಿಂದಾಗಿ ಈ ರೋಗ ಬರುವ ಸಾಧ್ಯತೆ ಇದೆ. ಇದೊಂದು ಲೈಂಗಿಕ ರೋಗವಾಗಿದ್ದು, ರೋಗ ಲಕ್ಷಣಗಳು ಕೆಲವೊಮ್ಮೆ ಕಂಡುಬರುವುದಿಲ್ಲ. ಆರೋಗ್ಯ ತಪಾಸಣೆಗೊಳಪಟ್ಟಾಗಷ್ಟೆ ಈ ರೋಗ ಪತ್ತೆಹಚ್ಚಲು ಸಾಧ್ಯವಾಗುತ್ತದೆ. ರೋಗ ಲಕ್ಷಣ ಕಂಡುಬರುವ ತನಕ ಕಾಯುವ ಬದಲು ವಿಐಎ ತಪಾಸಣೆ ಮೂಲಕ ಈ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು. ಇದೊಂದು ಸರಳ ರೀತಿಯ ಪರೀಕ್ಷೆಯಾಗಿದ್ದು ಯಾವುದೇ ನೋವಾಗುವುದಿಲ್ಲ. ಹಣದ ಅಗತ್ಯವೂ ಇರುವುದಿಲ್ಲ. ಹಾಗಾಗಿ 21ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಹೆಣ್ಣು ಮಕ್ಕಳೂ ಕೂಡ 3 ವರ್ಷಕ್ಕೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಡಿವೈಎಸ್ಪಿ ಬಿ.ಚಲುವರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ, ಜಿಲ್ಲಾ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರ ಸಂಘದ ಅಧ್ಯಕ್ಷೆ ಡಾ.ಎಚ್.ಸಿ.ಸವಿತಾ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಡಾ.ಶಿಲ್ಪಾ, ಡಾ.ಯಶಿಕಾ ಅನಿಲ್, ಡಾ.ಬಿ.ಎಸ್.ಶಶಿಕಲಾ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹನೀಯರ ಜಯಂತಿಗೆ ದೇಣಿಗೆ ನೀಡುವೆ ಎಂದು ಶಿವಲಿಂಗೇಗೌಡ
ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ವೇಳೆ ಬಾಲಕ ಮೇಲೆ ಚಿರತೆ ದಾಳಿ