ನಾಡು-ನುಡಿ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ

KannadaprabhaNewsNetwork |  
Published : Oct 19, 2025, 01:03 AM IST
ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ  | Kannada Prabha

ಸಾರಾಂಶ

ಬೆಳಗಾವಿಯಲ್ಲೂ ಪ್ರತಿ ವರ್ಷ ಒಂದು ತಿಂಗಳು ಅಧಿವೇಶನ ನಡೆಯಬೇಕು. ಸುವರ್ಣ ವಿಧಾನಸೌಧ ಇನ್ನಷ್ಟು ಕ್ರಿಯಾಶೀಲವಾಗಬೇಕು. ಇದರಿಂದಾಗಿ ಈ ಭಾಗದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕನ್ನಡ ಭಾಷೆ, ನಾಡು, ಸಂಸ್ಕೃತಿ ಉಳಿಸಿ, ಬೆಳೆಸುವುದು ಕೇವಲ ಸರ್ಕಾರದ ಕೆಲಸವಷ್ಟೇ ಅಲ್ಲ. ಕರ್ನಾಟಕದ ಪ್ರತಿಯೊಬ್ಬರು ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಕಾನೂನು ಮತ್ತು ಗಡಿ ಪ್ರದೇಶಗಳ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ನಾಗೂರು ಶ್ರೀ ರುದ್ರಾಕ್ಷಿಮಠದ ಸಹಯೋಗದಲ್ಲಿ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಶಿವಕುಮಾರ ಸಂಬರಗಿಮಠ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಭಾಷೆ ರಾಜ್ಯಾದ್ಯಂತ ಇಷ್ಟೊಂದು ಶಕ್ತಿಯುತವಾಗಲು ಕರ್ನಾಟಕ ವಿದ್ಯಾವರ್ಧಕ ಸಂಘ ಪಾತ್ರ ಪ್ರಮುಖವಾಗಿದೆ. ಅಲ್ಲದೇ ಕನ್ನಡಕ್ಕಾಗಿ ನಡೆದ ವಿವಿಧ ಹೋರಾಟಗಳಲ್ಲಿ ಕಿತ್ತೂರು ಕರ್ನಾಟಕದವರೇ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಎಲ್ಲ ಹೋರಾಟಗಾರರ ತ್ಯಾಗದ ಫಲವಾಗಿ ಕರ್ನಾಟಕ ಸ್ಥಾಪನೆಯಾಯಿತು ಎಂದು ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘ ಕನ್ನಡ ನಾಡಿನ ಜನರ ಸಾಕ್ಷಿಪ್ರಜ್ಞೆಯಾಗಿ ಕೆಲಸ ಮಾಡಬೇಕು. ಗಡಿ ಭಾಗದ ಪ್ರದೇಶ, ಭಾಷೆ, ಜನರು ಹಾಗೂ ರಾಜ್ಯದ ಸ್ಥಿತಿಗತಿಗಳ ಬಗ್ಗೆ ನಿಷ್ಪಕ್ಷವಾದ ವರದಿ ತಯಾರಿಸಿ ಪ್ರತಿ ಆರು ತಿಂಗಳಗೊಮ್ಮೆ ಅಂದರೆ ಅಕ್ಟೋಬರ್ 1ರೊಳಗಾಗಿ ಎರಡು ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವ ಮೂಲಕ ಸರ್ಕಾರವನ್ನು ಜಾಗೃತಗೊಳಿಸಬೇಕು ಎಂದು ಅವರು, ರಾಜ್ಯದಲ್ಲಿರುವ ಅನ್ಯ ಭಾಷಿಕರೆಲ್ಲರೂ ಕರ್ನಾಟಕ ರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ನಮ್ಮಲ್ಲಿ ಈಗ ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದವೇ ಇಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಈ ಪ್ರಕರಣ ಬಳಸಿಕೊಳ್ಳುವ ಮೂಲಕ ವಿವಾದ ಸೃಷ್ಟಿಸುವುದು ಸರಿಯಲ್ಲ. ಎಲ್ಲರೂ ಅನ್ಯೂನತೆಯಿಂದ ಜೀವನ ಸಾಗಿಸಬೇಕು. ನಮ್ಮ ನಾಡಿನ ಸಂಸ್ಕೃತಿ ಉಳಿಸಲು ಜಾಗೃತಿ ಕಾರ್ಯಕ್ರಮಗಳು ಆಗಬೇಕು. ಡಿ.ಜೆ ಬಳಕೆ ಕಡಿಮೆಯಾಗಬೇಕಿದೆ ಎಂದು ತಿಳಿಸಿದರು.

ಸಂಸದ ಜಗದೀಶ ಶೆಟ್ಟರ್ ಮಾತನಾಡಿ, ಕನ್ನಡದ ಬಗ್ಗೆ ಜಾಗೃತಿ ಮೂಡಿಸಿ, ಅದನ್ನು ಉಳಿಸಿ ಬೆಳೆಸುವ ಕಾರ್ಯ ಮೊದಲಿನಿಂದಲೂ ಕರ್ನಾಟಕ ವಿದ್ಯಾವರ್ಧಕ ಸಂಘ ಮಾಡಿಕೊಂಡು ಬಂದಿರುವುದು ಶ್ಲಾಘನೀಯ. ಕನ್ನಡ ಮತ್ತು ಮರಾಠ ಎರಡೂ ನಮ್ಮ ದೇಶದಲ್ಲಿ ಭಾಷೆಗಳೇ ಬೆಳಗಾವಿಯಲ್ಲಿ ಕನ್ನಡಿಗರು, ಮರಾಠಿಗರು ಭಾವೈಕ್ಯದಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ, ಕೆಲವು ಜನರು ಸ್ವಾರ್ಥ ರಾಜಕಾರಣಕ್ಕಾಗಿ ಎರಡು ಭಾಷಿಕರ ನಡುವೆ ಭಾಷಾ ದ್ವೇಷದ ಬೀಜ ಬಿತ್ತುತ್ತದ್ದಾರೆ. ಒಂದು ಸಣ್ಣ ವಿವಾದವು ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ. ಇದರಿಂದ ನಗರದ ಅಭಿವೃದ್ಧಿಯು ಕುಂಠಿತವಾಗುತ್ತದೆ. ಹೀಗಾಗಿ ಎರಡು ಭಾಷಿಕರ ಸಂಘ ಸಂಸ್ಥೆಗಳು ಕೂಡಿಕೊಂಡು ಚರ್ಚಿಸುವ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.

ಗದಗ-ಡಂಬಳ ತೋಂಟದಾರ್ಯ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಡಾ.ಸಿದ್ಧರಾಮ ಮಹಾಸ್ವಾಮೀಜಿ ಮಾತನಾಡಿ, ಗಡಿಭಾಗದಲ್ಲಿ ಕನ್ನಡ ಗಟ್ಟಿಗೊಳಿಸಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯ. ಕನ್ನಡ ಭಾಷೆ ಬಳಸುತ್ತ, ಬೆಳೆಸುತ್ತ ಗಟ್ಟಿಯಾಗಿಸಬೇಕಿದೆ. ಗಡಿ ಭಾಗದಲ್ಲಿ ಕನ್ನಡ ಭಾಷೆ ಬೆಳೆಸುವ ಕೆಲಸ ನಿರಂತವಾಗಿ ನಡೆಯಬೇಕು ಎಂದು ಹೇಳಿದರು. ಇಂಗ್ಲೀಷ ವ್ಯಾಮೋಹಕ್ಕೆ ಒಳಗಾದರೂ ಸರಿ, ಮಾತೃಭಾಷೆ ಮರೆಯಬಾರದು. ತಾಯಿಯನ್ನು ಮರೆತರೆ ಕುಟುಂಬ ಉದ್ಧಾರವಾಗದು, ಅದೇ ರೀತಿ ಮಾತೃಭಾಷೆ ಮರೆತರೆ ನಾಡಿಗೆ ಸೌಖ್ಯವಾಗದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಆಸೀಫ್ (ರಾಜು) ಸೇಠ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಮತ ಬೇಲದ, ವಿದ್ಯಾ ವರ್ಧಕ ಸಂಘದ ಕಾರ್ಯಾಧ್ಯಕ್ಷ ಬಸಪ್ರಭು ಹೊಸಕೇರಿ, ಧಾರವಾಡ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂತಿ ನಿರ್ದೇಶಕ ಕೆ.ಎಚ್. ಚೆನ್ನೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕರ್ನಾಟಕದಲ್ಲಿ ಅನೇಕ ಕನ್ನಡ ಶಾಲೆಗಳಲ್ಲಿ 20 ವರ್ಷದಿಂದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕವಾಗಿಲ್ಲ. ಅನುದಾನಿತ ಶಾಲೆಗಳು ಅನುದಾನ ರಹಿತವಾಗುತ್ತಿವೆ. ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಬಡವರು ಮಕ್ಕಳು ಆಂಗ್ಲ ಶಾಲೆಗೆ ಹೋಗಲು ಆರ್ಥಿಕ ಪರಿಸ್ಥಿತಿ ಸರಿಯಿರಲ್ಲ. ಹಾಗಾಗೀ ಕನ್ನಡ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿಕೊಂಡು ಕನ್ನಡ ಭಾಷೆಗೆ ಉತ್ತೇಜನ ನೀಡಬೇಕು. ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳುವ ಕಾರ್ಯ ನಾವು ಮಾಡಬೇಕಿದೆ ಎಂದು ಡಾ.ಸಿದ್ಧರಾಮ ಮಹಾಸ್ವಾಮೀಜಿ ಹೇಳಿದರು.ರಾಜ್ಯದ ಗಡಿಭಾಗದಲ್ಲಿ ಕನ್ನಡದ ಬಗ್ಗೆ ಇನ್ನಷ್ಟು ಜಾಗೃತಿ ಮೂಡಬೇಕಿದೆ. ಬೇಡಿಕೆ ಇರುವ ಕಡೆ ಕನ್ನಡ ಮಾಧ್ಯಮ ಶಾಲೆ ತಲೆಯತ್ತಬೇಕಿದೆ. ಹಾಗಾಗಿ 10 ದಿನಗಳ ಹಿಂದಷ್ಟೇ ಕನ್ನಡ ಸಂಘಟನೆಗಳು ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಬೆಳಗಾವಿ ಜಿಲ್ಲೆಯಲ್ಲಿ 10 ಕನ್ನಡ ಶಾಲೆಗಳನ್ನು ಶೀಘ್ರ ಆರಂಭಿಸಲು ನಿರ್ಣಯ ಕೈಗೊಂಡಿದ್ದೇವೆ. ಗಡಿಯಲ್ಲಿ ಕನ್ನಡ ಜಾಗೃತಿ ಮಾಡುವರ ಸಂಖ್ಯೆ ಕಡಿಮೆ ಇದೆ. ಇದು ಹೆಚ್ಚಾದರೆ ಸರ್ಕಾರದ ಮಟ್ಟದಲ್ಲಿ ನಮ್ಮ ಧ್ವನಿ ಗಟ್ಟಿಯಾಗುತ್ತದೆ ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಬೆಳಗಾವಿಯಲ್ಲೂ ಪ್ರತಿ ವರ್ಷ ಒಂದು ತಿಂಗಳು ಅಧಿವೇಶನ ನಡೆಯಬೇಕು. ಸುವರ್ಣ ವಿಧಾನಸೌಧ ಇನ್ನಷ್ಟು ಕ್ರಿಯಾಶೀಲವಾಗಬೇಕು. ಇದರಿಂದಾಗಿ ಈ ಭಾಗದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಿದ್ದು ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ
ಹುಟ್ಟು ಸಾವಿನ ಮಧ್ಯೆ ಸಾಧನೆ ಮಹತ್ವದ್ದು: ಡಾ.ಮುರುಗೇಶ ನಿರಾಣಿ