ಹಾನಗಲ್ಲ: ತಾಲೂಕಿನ ಚಿಕ್ಕೇರಿಹೊಸಳ್ಳಿ ಗ್ರಾಮದಲ್ಲಿ ಹಿರಿಯ ಮುಖಂಡ ಶಂಭನಗೌಡ ಪಾಟೀಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಡರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲ ಬಡವರು, ಜನಸಾಮಾನ್ಯರ ಪರವಾಗಿ ಯೋಜನೆ, ಕಾರ್ಯಕ್ರಮ ರೂಪಿಸಿದೆ. ಎಲ್ಲ ಸಮಾಜಗಳನ್ನು ಒಟ್ಟಿಗೆ ಕರೆದೊಯ್ಯಬಲ್ಲ ಶಕ್ತಿ ಇರುವುದು ಕಾಂಗ್ರೆಸ್ಗೆ ಮಾತ್ರ. ದೇಶದಲ್ಲಿ ಉಳುವವನಿಗೆ ಭೂಮಿಕೊಟ್ಟ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು. ಇಂದಿಗೂ ಸಹ ನೀರಾವರಿ ಪಂಪಸೆಟ್ಗಳಿಗೆ ಉಚಿತವಾಗಿ ವಿದ್ಯುತ್ ಸಿಗುತ್ತಿದ್ದರೆ ಅದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. 30-40 ವರ್ಷಗಳಿಂದ ದಾಖಲೆ ಇಲ್ಲದೆ ಸರ್ಕಾರಿ ಮತ್ತು ಖಾಸಗಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಅತಂತ್ರವಾಗಿ ವಾಸಿಸುತ್ತಿದ್ದ ತಾಲೂಕಿ 13 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ಒದಗಿಸಿ ಸ್ವತಂತ್ರಗೊಳಿಸಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ 65 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆರ್ಥಿಕ ನೆರವು ಕಲ್ಪಿಸಲಾಗುತ್ತಿದೆ. ನೀರಾವರಿ ಯೋಜನೆಗಳ ಅನುಷ್ಠಾನ, ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ಸರ್ವತೋಮುಖ ಪ್ರಗತಿಗೆ ಮುನ್ನುಡಿ ಬರೆಯಲಾಗಿದ್ದು, ನಾಯಕತ್ವ, ತತ್ವ, ಸಿದ್ಧಾಂತ ಹಾಗೂ ಅಭಿವೃದ್ಧಿ ಮೆಚ್ಚಿ ಅನೇಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದಾರೆ ಎಂದು ಶಾಸಕ ಮಾನೆ ಈ ಸಂದರ್ಭದಲ್ಲಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ತಾಪಂ ಕೆಡಿಪಿ ಸದಸ್ಯ ರಾಜಕುಮಾರ ಜೋಗಪ್ಪನವರ, ಮುಖಂಡರಾದ ಸೋಮಣ್ಣ ದೊಡ್ಡಕುರುಬರ, ಅರ್ಜುನ ಮಂತಗಿ, ಪುಟ್ಟಪ್ಪ ಶಿಗ್ಲಿ, ಜಗದೀಶ ಜನಗೇರಿ, ಗುಡ್ಡಪ್ಪ ದೊಡ್ಡಕುರುಬರ, ಚಂದ್ರಪ್ಪ ಜನಗೇರಿ, ಸುರೇಶ ಕರೆಪ್ಪನವರ ಇದ್ದರು.