ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಆಯೋಜಿಸಿದ್ದ “ಟೆಲಿವಿಷನ್ ನಿರೂಪಣೆ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ ಇದೆ. ಇದಕ್ಕಾಗಿ ಭಾಷಾ ಪಾಂಡಿತ್ಯ, ವಿಷಯದ ಬಗ್ಗೆ ಸಮಗ್ರ ಅರಿವು ಹಾಗೂ ಸಮಾಜವನ್ನು ತೆರೆದ ಕಣ್ಣಿನಿಂದ ನೋಡುವ ಮನೋಭಾವ ಅಗತ್ಯ ಎಂದು ಹೇಳಿದರು.
ಪತ್ರಿಕೋದ್ಯಮದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದರು.ಪತ್ರಕರ್ತ ಸುಬ್ರಹ್ಮಣ್ಯ ಎಸ್. ಹಂಡಿಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು.
ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, ತಮ್ಮದೇ ವೇದಿಕೆಯನ್ನು ನಿರ್ಮಿಸಿಕೊಳ್ಳಬಹುದಾಗಿದೆ. ಆದರೆ ನೈತಿಕತೆಯಿಂದ ಸಮಾಜದಲ್ಲಾಗಿರುವ ಗಾಯಗಳಿಗೆ ಔಷಧಿಯನ್ನು ಹಚ್ಚುವ ಕೆಲಸಗಳನ್ನು ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅವರು ಮಾತನಾಡಿ, ಟಿಆರ್ಪಿ ಹಂಬಲದಲ್ಲಿ ಮಾಧ್ಯಮಗಳು ವಸ್ತುನಿಷ್ಠತೆಯನ್ನು ಕಳೆದುಕೊಳ್ಳುತ್ತಿದ್ದು, ನೈತಿಕ ಮೌಲ್ಯಗಳನ್ನು ಮರೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪ್ರಗತಿ ಡಿ.ಡಿ ನಿರ್ವಹಿಸಿ, ಪ್ರಾರ್ಥನೆಯನ್ನು ಭಾರ್ಗವಿ ನೆರವೇರಿಸಿದರು. ಮನೋಜ್ ವಂದನಾರ್ಪಣೆ ಸಲ್ಲಿಸಿದರು.