ಪತ್ರಕರ್ತರು ಬದ್ಧತೆಯಿಂದ ಕಾರ್ಯ ನಿರ್ವಹಿಸಲಿ: ಶಿವಾನಂದ ತಗಡೂರು

KannadaprabhaNewsNetwork |  
Published : Dec 30, 2025, 02:45 AM IST
29ಎಚ್‌ಪಿಟಿ2- ಹೊಸಪೇಟೆಯಲ್ಲಿ ಸೋಮವಾರ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು. | Kannada Prabha

ಸಾರಾಂಶ

ಪತ್ರಕರ್ತರಾದವರು ಸಾಮಾಜಿಕ ಕಳಕಳಿ ಜತೆ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು

ಹೊಸಪೇಟೆ: ಪತ್ರಕರ್ತರಾದವರು ಸಾಮಾಜಿಕ ಕಳಕಳಿ ಜತೆ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಸ್ಥಳೀಯ ವಿ.ಎಸ್. ರಾಯಲ್‌ಗಾರ್ಡನ್ ಹಾಲ್ ನಲ್ಲಿ ಸೋಮವಾರ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಕರ್ತರಿಗೆ ಸಮಾಜದಲ್ಲಿ ಉತ್ತಮ ಗೌರವವಿದೆ. ಪತ್ರಕರ್ತರನ್ನು ಸಮಾಜ ಗಮನಿಸುತ್ತಿರುತ್ತದೆ. ಪತ್ರಕರ್ತರು ಸಮಾಜದಲ್ಲಿ ತಮ್ಮ ವ್ಯಕ್ತಿತ್ವವನ್ನು ತಾವೇ ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದುವ ಮೂಲಕ ವೃತ್ತಿಗೆ ತಕ್ಕಂತೆ ಬರವಣಿಗೆ ಮೂಲಕ ಬೆಳವಣಿಗೆ ಹೊಂದಬೇಕು ಎಂದರು.

ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ತಮ್ಮ ಸ್ಥಾನಮಾನಗಳನ್ನು ಹುದ್ದೆ ಎಂದು ತಿಳಿಯದೆ, ಅದೊಂದು ಜವಾಬ್ದಾರಿ ಎಂದು ಅರಿತು ಕೆಲಸ ಮಾಡಬೇಕು. ಕೇವಲ ಒಬ್ಬರಿಂದ ಸಂಘ ಆಗುವುದಿಲ್ಲ. ಎಲ್ಲರಿಂದ ಸಂಘವಾಗಿದೆ. ಪದಾಧಿಕಾರಿಗಳಾದವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಮುಖ್ಯ. ಪ್ರತಿಯೊಬ್ಬ ಪತ್ರಕರ್ತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘ ಮಾಡಬೇಕು. ಸಂಘದ ನೀತಿ, ನಿಯಮಗಳಿಗೆ ಬದ್ಧರಾಗಿ ಕೆಲಸ ನಿರ್ವಹಿಸಬೇಕು ಎಂದರು.

ರಾಜ್ಯದಲ್ಲಿ ಇತ್ತೀಚೆಗೆ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಲೆಟರ್ ಹೆಡ್, ವಿಸಿಟಿಂಗ್ ಕಾರ್ಡ್ ಪತ್ರಕರ್ತರಿಗೆ ಕಡಿವಾಣ ಹಾಕುವ ಕೆಲಸವನ್ನು ಅಸಲಿ ಪತ್ರಕರ್ತರು ಮಾಡಬೇಕಿದೆ. ಅಂತಹ ನಕಲಿ ಪತ್ರಕರ್ತರನ್ನು ಗುರುತಿಸಿ ದೂರ ಇಡುವ ಕೆಲಸವನ್ನು ಸಂಘದ ಪದಾಧಿಕಾರಿಗಳು ಮಾಡಬೇಕು. ಶುದ್ಧಹಸ್ತರನ್ನು ಗುರುತಿಸಿ ಸಂಘಟಿಸುವ ಕೆಲಸವನ್ನು ನೂತನ ಪದಾಧಿಕಾರಿಗಳು ಮಾಡಬೇಕು ಎಂದರು.

ಮೂರು ದಶಕಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ನೀಡಿದೆ. ಅದರಲ್ಲಿನ ಕೆಲ ನ್ಯೂನತೆಗಳಿಂದ ಬಸ್‌ಪಾಸ್ ಸೌಲಭ್ಯ ಗ್ರಾಮೀಣ ಪತ್ರಕರ್ತರಿಗೆ ಸರಿಯಾಗಿ ದೊರೆಯುತ್ತಿಲ್ಲ. ಅದಕ್ಕಾಗಿ ಕೆಲ ಬದಲಾವಣೆಗಳಿಗೆ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ. ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿ ಕೂಡ ಕೆಲವೊಂದು ಮಾರ್ಪಾಡು ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನಮ್ಮ ಎಲ್ಲ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.

ಶಾಸಕ ಎಚ್.ಆರ್‌. ಗವಿಯಪ್ಪ ಮಾತನಾಡಿ, ಪತ್ರಕರ್ತರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ. ವಿಜಯನಗರ ಜಿಲ್ಲಾಸ್ಪತ್ರೆಯಲ್ಲಿ ಹಾರ್ಟ್‌ ಕೇರ್‌ ಸೆಂಟರ್‌ ಕೂಡ ಆರಂಭಿಸುತ್ತಿದ್ದೇವೆ. ಜಿಲ್ಲಾಸ್ಪತ್ರೆ ಆರಂಭಕ್ಕಾಗಿ ಸಕಲ ಸಿದ್ಧತೆಯೂ ನಡೆದಿದೆ. ಹೈದರಾಬಾದ್‌ಗೆ ತೆರಳಿ ವೈದ್ಯಕೀಯ ಯಂತ್ರೋಪಕರಣಗಳನ್ನು ಕೂಡ ಪರಿಶೀಲಿಸಲಾಗಿದೆ ಎಂದರು.

ಹುಡಾ ಅಧ್ಯಕ್ಷ ಎಚ್.ಎನ್. ಮೊಹಮ್ಮದ್‌ ಇಮಾಮ್ ನಿಯಾಜಿ ಮಾತನಾಡಿ, ಪತ್ರಕರ್ತರ ಸಂಘದ ಕಲ್ಯಾಣ ನಿಧಿಗೆ ₹2 ಲಕ್ಷ ವೈಯಕ್ತಿಕ ದೇಣಿಗೆ ನೀಡುವೆ ಎಂದು ಘೋಷಿಸಿದರು.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಪತ್ರಕರ್ತರಿಗೆ ನಿವೇಶನ ಹಂಚಿಕೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪತ್ರಿಕಾ ಭವನಕ್ಕೆ ನಿವೇಶನ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು. ನಗರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಎಸ್ಪಿ ಎಸ್.ಜಾಹ್ನವಿ ಮಾತನಾಡಿ, ಮಾಧ್ಯಮಗಳು ಸಮಾಜದ ಕನ್ನಡಿಯಿದ್ದಂತೆ. ಸಮಾಜದಲ್ಲಿನ ಹಾಗೂ ಆಡಳಿತದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಮಾಧ್ಯಮಗಳು ಸಹಕಾರಿ ಆಗಿವೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ ಮಾತನಾಡಿ, ನಕಲಿ ಪತ್ರಕರ್ತರ ಹಾವಳಿ ತಡೆಗೆ ಇಲಾಖೆಯೊಂದಿಗೆ ಕಾರ್ಯನಿರತ ಪತ್ರಕರ್ತರ ಸಂಘ ಕೈಜೋಡಿಸಬೇಕಿದೆ ಎಂದರು.

ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಮಾಣವಚನ ಬೋಧಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಲಕ್ಷ್ಮಣ ಪ್ರಾಸ್ತಾವಿಕ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸತ್ಯನಾರಾಯಣ ವಹಿಸಿದ್ದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಜ್ಯ ಕಾರ್ಯದರ್ಶಿ ಸೋಮಶೇಖರ್‌ ಕೆರೆಗೋಡು, ರಾಜ್ಯ ಸಮಿತಿ ಸದಸ್ಯ ಪಿ.ವೆಂಕೋಬ ನಾಯಕ, ವಿಕಾಸ ಬ್ಯಾಂಕ್‌ ಅಧ್ಯಕ್ಷ ವಿಶ್ವನಾಥ ಚ.ಹಿರೇಮಠ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಪತ್ರಕರ್ತರು ಭಾಗವಹಿಸಿದ್ದರು.

ಪತ್ರಕರ್ತರಾದ ಸುರೇಶ್‌ ಚವ್ಹಾಣ್, ಅನಂತ ಜೋಶಿ, ರೇಖಾ ಪ್ರಕಾಶ್, ಪೂರ್ಣಿಮಾ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಭೂಮಿ ಒತ್ತುವರಿಗೆ ಅವಕಾಶ ನೀಡಲ್ಲ: ಡಿಸಿಎಂ
ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ