ಮಾಜಿ ಶಾಸಕ ಹಾಲಾಡಿ ಭೇಟಿ ಮಾಡಿದ ಜೆಪಿ ಹೆಗ್ಡೆ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

KannadaprabhaNewsNetwork | Published : Mar 22, 2024 1:07 AM

ಸಾರಾಂಶ

ಹಾಲಾಡಿಯವರ ಮನೆಯಲ್ಲಿ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಆರೋಗ್ಯ ವಿಚಾರಿಸಿ ಈರ್ವರು ನಾಯಕರು ಕೆಲ ಹೊತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು. ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕನ್ನಡಪ್ರಭ ವಾರ್ತೆ ಕುಂದಾಪುರಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ನ ನಿಯೋಜಿತ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಗುರುವಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿ ಮಾಡಿದರು.ಹಾಲಾಡಿಯವರ ಮನೆಯಲ್ಲಿ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಆರೋಗ್ಯ ವಿಚಾರಿಸಿ ಈರ್ವರು ನಾಯಕರು ಕೆಲ ಹೊತ್ತು ಜಿಲ್ಲೆಯ ಸಮಸ್ಯೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು ಎನ್ನಲಾಗಿದೆ. ಈ ಬಗ್ಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಕನ್ನಡಪ್ರಭ ದೂರವಾಣಿ ಮೂಲಕ ಸಂಪರ್ಕಿಸಿದಾಗ, ವೈಯಕ್ತಿಕ ನೆಲೆಯಲ್ಲಿ ಸೌಹಾರ್ದ ಭೇಟಿ ಮಾಡಿ ಹಾಲಾಡಿಯವರ ಆರೋಗ್ಯ ವಿಚಾರಿಸಿದ್ದೇನೆ ಎಂದಿದ್ದು, ಭೇಟಿಯ ಪೂರ್ಣ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.ಕೆ. ಜಯಪ್ರಕಾಶ್ ಹೆಗ್ಡೆಯವರು ಬಿಜೆಪಿ ನಾಯಕ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಬ್ರಹ್ಮಾವರ ವಿಧಾನಸಭಾ ಕ್ಷೇತ್ರ ಪುನರ್ ವಿಂಗಣೆಯ ಬಳಿಕ ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಜಯಪ್ರಕಾಶ್ ಹೆಗ್ಡೆಯವರು ಅಂದಿನ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಪರಾಭವಗೊಂಡಿದ್ದರು. ಸಹೋದರ ಸಂಬಂಧಿಗಳಾದರೂ ರಾಜಕೀಯವಾಗಿ ಎದುರಾಳಿಗಳಾಗಿದ್ದ ಇವರಿಬ್ಬರ ಸೌಹಾರ್ದ ಭೇಟಿ ಕುಂದಾಪುರದ ರಾಜಕೀಯ ವಲಯದಲ್ಲಿ ಬಹುದೊಡ್ಡ ಬಿರುಗಾಳಿ ಎಬ್ಬಿಸಿದೆ.ಭೇಟಿ ವೇಳೆ ಕೊರ್ಗಿ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಗೌರೀಶ್ ಹೆಗ್ಡೆ, ರಂಜಿತ್ ಕುಮಾರ್ ಶೆಟ್ಟಿ, ಮುಖಂಡರಾದ ಸಚಿನ್ ಶೆಟ್ಟಿ, ಮಲ್ಯಾಡಿ ಸುಧೀರ್ ಶೆಟ್ಟಿ, ಉಮಾನಾಥ್ ಹೆಗ್ಡೆ ಮತ್ತಿತರರು ಇದ್ದರು.

ಕೋಟ ಬಳಿಕ ಹೆಗ್ಡೆ ಭೇಟಿ:

ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿಯ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಬಿಜೆಪಿ ಹಿರಿಯ ಮುಖಂಡರನ್ನು ಭೇಟಿ ಮಾಡುತ್ತಿದ್ದು, ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನೂ ಇತ್ತೀಚೆಗಷ್ಟೇ ಭೇಟಿ ಮಾಡಿ ಅವರಿಂದ ಆಶೀರ್ವಾದ ಪಡೆದಿದ್ದರು. ಇದೀಗ ಕಾಂಗ್ರೆಸ್‌ನ ನಿಯೋಜಿತ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

Share this article