ಕನ್ನಡಪ್ರಭ ವಾರ್ತೆ ಹಾಸನ
ಸೂರಜ್ ರೇವಣ್ಣ ಅವರು ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವು ಕೇವಲ ಕುಟುಂಬದ ಅಥವಾ ಪಕ್ಷದ ಆಚರಣೆ ಮಾತ್ರವಲ್ಲ, ಅದು ಲಕ್ಷಾಂತರ ಕಾರ್ಯಕರ್ತರ ಹಬ್ಬವಾಗಿದೆ. ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ಈ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಪಕ್ಷದ ೨೫ನೇ ವರ್ಷದ ರಜತ ಮಹೋತ್ಸವವೂ ಇದೇ ಸಂದರ್ಭದಲ್ಲಿ ನಡೆಯುತ್ತಿರುವುದರಿಂದ ಜೆಡಿಎಸ್ ಕಾರ್ಯಕರ್ತರಿಗೆ ಮತ್ತಷ್ಟು ಉತ್ಸಾಹ ಬಂದಿದೆ. ಕೇವಲ ಸಭೆ- ಸಮಾವೇಶಗಳಿಗೆ ಸೀಮಿತವಾಗದೇ, ಯುವಕರಿಗೆ ಕ್ರೀಡಾ ವೇದಿಕೆ ಕಲ್ಪಿಸುವ ಮೂಲಕ ಸಂಘಟನೆಯನ್ನು ಬಲಪಡಿಸುವ ಪ್ರಯತ್ನ ಇದು ಎಂದು ಅವರು ತಿಳಿಸಿದರು.
ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಜೆಡಿಎಸ್ ಕಾರ್ಯಕರ್ತರು, ಯುವ ಮುಖಂಡರು, ಕ್ರೀಡಾಪಟುಗಳು ಹಾಗೂ ಅಭಿಮಾನಿಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲಾ ತಾಲೂಕು ಮತ್ತು ಕೇಂದ್ರ ಮಟ್ಟದ ಪ್ರತಿಭಾವಂತ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ಟೂರ್ನಿಯನ್ನು ರೂಪಿಸಲಾಗಿದೆ ಎಂದು ಹೇಳಿದರು.ಕ್ರೀಡೆ ಯುವಕರಲ್ಲಿ ಶಿಸ್ತು, ನಾಯಕತ್ವ, ತಂಡದ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೂ ಈ ಗುಣಗಳು ಅಗತ್ಯ, ಆದ್ದರಿಂದ ಕ್ರೀಡೆ ಮತ್ತು ರಾಜಕೀಯ ಎರಡನ್ನೂ ಸಮನಾಗಿ ಪ್ರೋತ್ಸಾಹಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಅಭಿಪ್ರಾಯಪಟ್ಟರು.
ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್ ಮಾತನಾಡಿ, ಹಾಸನ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ. ಈ ಜಿಲ್ಲೆಯ ಯುವಕರಲ್ಲಿ ಅಪಾರ ಪ್ರತಿಭೆ ಇದೆ, ಅವರನ್ನು ಕ್ರೀಡಾ ಕ್ಷೇತ್ರದ ಮೂಲಕ ಒಗ್ಗೂಡಿಸಿ ಒಂದು ಶಕ್ತಿಶಾಲಿ ತಂಡವಾಗಿ ರೂಪಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಈ ಪಂದ್ಯಾವಳಿಯ ಮೂಲಕ ಕೇವಲ ಕ್ರಿಕೆಟ್ ಮಾತ್ರವಲ್ಲ, ಪಕ್ಷದ ಸಂಘಟನೆಯೂ ಇನ್ನಷ್ಟು ಬಲವಾಗಲಿದೆ. ಯುವಕರನ್ನು ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಗಳತ್ತ ಸೆಳೆಯಲು ಇಂತಹ ಕಾರ್ಯಕ್ರಮಗಳು ಬಹಳ ಅಗತ್ಯ ಎಂದು ತಿಳಿಸಿದರು.
ಹೊಯ್ಸಳ ವಾರಿಯರ್ಸ್ ತಂಡದ ಲೋಗೋ ಬಿಡುಗಡೆ ಕಾರ್ಯಕ್ರಮವು ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಪಕ್ಷದ ಮುಖಂಡರು, ಕಾರ್ಯಕರ್ತರು, ಯುವ ಜನತಾದಳದ ಪದಾಧಿಕಾರಿಗಳು ಹಾಗೂ ಅನೇಕ ಅಭಿಮಾನಿಗಳು ಭಾಗವಹಿಸಿ ತಂಡಕ್ಕೆ ಶುಭ ಹಾರೈಸಿದರು.