ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳ ಕಲ್ಯಾಣ ಸಮಿತಿಯಲ್ಲಿನ ಮಕ್ಕಳಿಗೆ ಮತ್ತು ಪೋಷಕರಿಗಾಗಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಉಚಿತ ಕಾನೂನು ಸಲಹಾ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರ ಜೀವನದಲ್ಲಿ ಬಾಲ್ಯ ಅತಿ ಮುಖ್ಯ ಪಾತ್ರ ವಹಿಸುತ್ತದೆ. ಅದು ಮನುಷ್ಯನ ಜೀವನವನ್ನೇ ನಿರ್ಧರಿಸುತ್ತದೆಯಾದ್ದರಿಂದ ಮಕ್ಕಳಿಗೆ ಉತ್ತಮ ಬಾಲ್ಯ ಒದಗಿಸುವುದು ಅವಶ್ಯವಾಗಿದೆ. ಉತ್ತಮ ಬಾಲ್ಯ ಪಡೆದ ಮಕ್ಕಳು ಸರ್ವಾಂಗೀಣ ಅಭಿವೃದ್ದಿ ಹೊಂದಿ, ದೇಶದ ಪ್ರಗತಿಯಲ್ಲಿ ಕೊಡುಗೆ ನೀಡುವವರಾಗುತ್ತಾರೆ.ಹಲವಾರು ಕಾರಣಗಳಿಂದ ಪೋಷಕರಿಂದ, ಕುಟುಂಬಗಳಿಂದ ದೂರ ಉಳಿಯುವ ಪ್ರಸಂಗ ಒದಗಿ ಬರುವ ಮಕ್ಕಳಿಗೆ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಮಾರ್ಗದರ್ಶನ, ಕಾನೂನಿನ ನೆರವು ಒದಗಿಸುವ ಉದ್ದೇಶದಿಂದ ಉಚಿತ ಕಾನೂನು ಸಲಹಾ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದ್ದು, ಸಮಿತಿ ಮುಂದೆ ಬರುವ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಅವರ ಕಾನೂನುಬದ್ಧ ಹಕ್ಕುಗಳ ಬಗ್ಗೆ ಉಚಿತವಾಗಿ ಸಲಹೆ ನೀಡಲಾಗುವುದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಮಾತನಾಡಿ, ಮನೆ ಮನೆಗೆ ನ್ಯಾಯ ಒದಗಿಸಬೇಕು ಹಾಗೂ ಎಲ್ಲ ಜನರನ್ನು ತಲುಪಬೇಕೆಂಬ ಉದ್ದೇಶದಿಂದ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ. ಪ್ರಾಧಿಕಾರವು ಮಕ್ಕಳ ಸ್ನೇಹಿ ಕಾನೂನು ಸೇವೆ 2024 ನ್ನು ಸಹ ಒದಗಿಸಿದ್ದು ಆರೈಕೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಗೆ ಸಲಹೆ, ಸಲವತ್ತುಗಳು ಮತ್ತು ಉಚಿತವಾಗಿ ಕಾನೂನು ನೆರವು ನೀಡಲಾಗುತ್ತದೆ ಎಂದರು.
ಕೇಂದ್ರವು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಬರುವ ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಅವರ ಕಾನೂನುಬದ್ಧ ಹಕ್ಕುಗಳ ಬಗ್ಗೆ ಉಚಿತವಾಗಿ ಸಲಹೆ ನೀಡುವುದು. ನ್ಯಾಯಾಲಯಗಳಲ್ಲಿ ಅಥವಾ ಇತರ ಪ್ರಾಧಿಕಾರಗಳ ಮುಂದೆ ಮಕ್ಕಳ ಪರವಾಗಿ ವಾದಿಸಲು ಉಚಿತ ಸರ್ಕಾರಿ ವಕೀಲರನ್ನು ನಿಯೋಜಿಸಲಾಗುವುದು. ಪೋಕ್ಸೋ ಪ್ರಕರಣದಲ್ಲಿ ನೆರವು, ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ತಕ್ಷಣದ ಕಾನೂನು ರಕ್ಷಣೆ, ಪರಿಹಾರ ಮತ್ತು ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ವಿಶೇಷ ಕಾಳಜಿಯೊಂದಿಗೆ ಸಹಾಯ ಮಾಡುವುದು ಸೇರಿದಂತೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ನೆರವಾಗಲಿದೆ. ರಾಷ್ಟ್ರೀಯ ಕಾನೂನು ಸೇವಾ ಸಹಾಯವಾಣಿ ಸಂಖ್ಯೆ 15100 ಅನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶಶಿರೇಖಾ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ಪ್ರತಿ ದಿನ ಜಿಲ್ಲೆಯಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರು ಮತ್ತು ಮಕ್ಕಳನ್ನು ಎಲ್ಲರೂ ಗೌರವಯುತವಾಗಿ ಕಂಡಲ್ಲಿ ಅಪರಾಧಗಳೇ ಕಡಿಮೆಯಾಗುತ್ತವೆ ಎಂದ ಅವರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯಲ್ಲಿ ಸದಾ ಬೆಂಬಲವಾಗಿ, ಸಹಕಾರ ನೀಡುತ್ತಾ ಬಂದಿದೆ ಎಂದರು.
------------------
ಶಿವಮೊಗ್ಗದ ಮಕ್ಕಳ ಕಲ್ಯಾಣ ಸಮಿತಿಯಲ್ಲಿನ ಮಕ್ಕಳಿಗೆ ಮತ್ತು ಪೋಷಕರಿಗಾಗಿ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಉಚಿತ ಕಾನೂನು ಸಲಹಾ ಕೇಂದ್ರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ.ಮಂಜುನಾಥ ಗುರುವಾರ ಉದ್ಘಾಟಿಸಿದರು.