ಕನ್ನಡಪ್ರಭ ವಾರ್ತೆ ಯಲ್ಲಾಪುರ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ೧೭ ಕಾಂಗ್ರೆಸ್ ಶಾಸಕರನ್ನು ಹಣ ನೀಡಿ ಖರೀದಿಸಲಾಗಿತ್ತು ಎಂಬ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ಸಂಪೂರ್ಣ ಆಧಾರ ರಹಿತ, ಬಾಲಿಶ. ಅವರ ತಲೆ ಸರಿಯಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.
ಒಂದು ವೇಳೆ ಅವರ ಹೇಳಿಕೆಯಲ್ಲಿ ಸತ್ಯಾಂಶವಿದ್ದರೆ, ಯಾರು ಹಣ ನೀಡಿದರು? ಯಾರು ಹಣ ಪಡೆದವರು? ಎಷ್ಟು ಹಣ ನೀಡಲಾಯಿತು? ಎಲ್ಲಿ ವ್ಯವಹಾರ ನಡೆಯಿತು? ಎಂಬುದರ ಕುರಿತು ದಾಖಲೆ ಸಮೇತ ರಾಜ್ಯದ ಜನತೆಯ ಮುಂದೆ ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.ಸಾಕ್ಷ್ಯಾಧಾರಗಳಿಲ್ಲದೆ ಇಂತಹ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಈಶ್ವರಪ್ಪ ತಮ್ಮ ರಾಜಕೀಯ ಹತಾಶೆ ಹಾಗೂ ಮಾನಸಿಕ ಅಸ್ಥಿರತೆಯನ್ನು ಪ್ರದರ್ಶಿಸುತ್ತಿದ್ದಾರೆ. ತಮ್ಮ ಆರೋಪಗಳನ್ನು ಸಾಬೀತುಪಡಿಸಲು ವಿಫಲರಾದರೆ ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕು ಅವರಿಗೆ ಉಳಿಯುವುದಿಲ್ಲ. ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜನರ ವಿಶ್ವಾಸ ಕಳೆದುಕೊಂಡಿರುವ ಅವರು ಮೊದಲು ತಮ್ಮ ರಾಜಕೀಯದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ, ನಂತರ ಇತರರ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಶಿವರಾಮ ಹೆಬ್ಬಾರ ಈಶ್ವರಪ್ಪ ಅವರಿಗೆ ಕಿವಿಮಾತು ಹೇಳಿದ್ದಾರೆ.