ಕಲಬುರಗಿ ಲೋಕ ಕದನ: ಇಂದಿನ ಮತ ಎಣಿಕೆಗೆ ಸಕಲ ಸಿದ್ಧತೆ

KannadaprabhaNewsNetwork |  
Published : Jun 04, 2024, 12:30 AM IST
ಫೋಟೋ- ಸ್ಟ್ರಾಂಗ್‌ ರೂಮ್‌ ನಿಸಿಟ | Kannada Prabha

ಸಾರಾಂಶ

ಮತ ಎಣಿಕೆ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆ ಸುತ್ತಮುತ್ತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ

ಕನ್ನಡಪ್ರಭ ವಾರ್ತೆ ಕಲಬುರಗಿ

ಕಲಬುರಗಿ ಮೀಸಲು ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಜೂ.4ರಂದು ಬೆ.8 ಗಂಟೆಯಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಆರಂಭವಾಗಲಿದೆ.

ಅಂದು ಬೆ.6ರಿಂದ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆಯಲಿದೆ. ಇದಕ್ಕಾಗಿ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸಾರಥ್ಯದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಯಾವ ಅಸೆಂಬ್ಲಿ? ಎಲ್ಲಿ ಮತಗಳ ಎಣಿಕೆ:

ಗುಲ್ಬರ್ಗ ವಿ.ವಿ.ಯ ಗಣಿತ ವಿಭಾಗದ ಭಾಸ್ಕರ್ ಹಾಲ್‍ನಲ್ಲಿ ಅಫಜಲಪೂರ, ಪರೀಕ್ಷಾ ಕೇಂದ್ರದಲ್ಲಿ ಚಿತ್ತಾಪುರ, ಗುಲ್ಬರ್ಗ ಗ್ರಾಮೀಣ ಹಾಗೂ ಪರೀಕ್ಷಾ ಕೇಂದ್ರದ ಸೆಲುಲಾರ್ ಹಾಲ್‍ನಲ್ಲಿ ಜೇವರ್ಗಿ, ಇಂಡೋರ್ ಸ್ಟೇಡಿಯಂನಲ್ಲಿ ಗುರುಮಠಕಲ್ ಮತ್ತು ಗುಲ್ಬರ್ಗ ಉತ್ತರ, ಕನ್ನಡ ವಿಭಾಗದ ಹರಿಹರ ಸಭಾಂಗಣದಲ್ಲಿ ಸೇಡಂ ಹಾಗೂ ಸಸ್ಯಶಾಸ್ತ್ರ ವಿಭಾಗದ ಬೋಸ್ ಸಭಾಂಗಣದಲ್ಲಿ ಗುಲ್ಬರ್ಗ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 14 ಟೇಬಲ್‍ಗಳನ್ನು ಮತ ಎಣಿಕೆಗೆ ಹಾಕಲಾಗಿದೆ. ಪ್ರತಿ ಟೇಬಲ್‍ಗೆ ಓರ್ವ ಎಣಿಕೆ ಮೇಲ್ವಿಚಾರಕರು, ಓರ್ವ ಎಣಿಕೆ ಸಹಾಯಕರು ಹಾಗೂ ಓರ್ವ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ ಎಂದರು.

ಪ್ರತಿ ವಿದಾನಸಭಾ ಕ್ಷೇತ್ರವಾರು ಮತ ಎಣಿಕೆ 14 ಟೇಬಲ್‍ಗಳಿಗೆ 14 ಕೌಂಟಿಂಗ್ ಏಜೆಂಟ್‍ಗಳನ್ನು ಆಯಾ ಅಭ್ಯರ್ಥಿಗಳು ನೇಮಿಸಲು ಅವಕಾಶ ನೀಡಿದ್ದು, ಸದರಿ ಕೌಂಟಿಂಗ್ ಏಜೆಂಟ್‍ಗಳು ಪೆನ್, ಸಿಂಪಲ್ ಕ್ಯಾಲ್ಕುಲೇಟರ್ ಹಾಗೂ ಪೇಪರ್ ಮಾತ್ರ ತರಲು ಅವಕಾಶ ನೀಡಲಾಗಿದೆ.

ಮಾಧ್ಯಮದವರಿಗೆ ಕ್ಷಣ-ಕ್ಷಣಕ್ಕೆ ಮಾಹಿತಿ:

ಪ್ರತಿ ಸುತ್ತಿನ ಮತ ಎಣಿಕೆ ನಂತರ ಆಯಾ ಅಭ್ಯರ್ಥಿಗಳು ಪಡೆದ ಮತಗಳ ವಿವರವನ್ನು ಮಾಧ್ಯಮದವರಿಗೆ ಕ್ಷಣ-ಕ್ಷಣಕ್ಕೆ ಮಾಹಿತಿ ನೀಡಲು ವ್ಯವಸ್ಥೆ ಮಾಡಿದ್ದು, ಇದಕ್ಕಾಗಿ ಪ್ರಾಣಿಶಾಸ್ತ್ರ ಸಭಾಂಗಣದಲ್ಲಿ ಮಾಧ್ಯಮ ಕೇಂದ್ರ ಸ್ಥಾಪಿಸಿದೆ. ಇಲ್ಲಿ ಎನ್.ಐ.ಸಿ. ಸ್ಕ್ರೀನ್ ಮೂಲಕ ಎಣಿಕೆಯ ಸಂಪೂರ್ಣ ಅಪಡೇಟ್ ಮಾಹಿತಿ ಲಭ್ಯವಾಗಲಿದೆ

ಮೊಬೈಲ್ ಫೋನ್ ಬ್ಯಾನ್:

ಮತ ಎಣಿಕೆ ಕೇಂದ್ರಕ್ಕೆ ಹಾನಿಕಾರಕ ಸೇವನೆಗಳಾದ ವಿವಿಧ ರೀತಿಯ ತಂಬಾಕು, ಗುಟಕಾ, ಬೀಡಿ, ಸಿಗರೇಟ್, ಬೆಂಕಿ ಪೊಟ್ಟಣ, ಲೈಟರ್ ಹಾಗೂ ಮದ್ಯಪಾನಗಳು, ವಿದ್ಯುನ್ಮಾನ ಯಂತ್ರಗಳಾದ ಸ್ಮಾರ್ಟ್ ವಾಚ್, ಮೊಬೈಲ್‌ ಫೋನ್ ಹಾಗೂ ಲ್ಯಾಪಟಾಪ್ ಹಾಗೂ ಮಾರಕಾಸ್ತ್ರಗಳಾದ ಗನ್, ಖಡ್ಗ, ಚಾಕು, ಚೂರಿ ಇತರೆ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಎಣಿಕೆ ಕೇಂದ್ರ ಸುತ್ತ 144 ಜಾರಿ:

ಮತ ಎಣಿಕೆ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆ ಸುತ್ತಮುತ್ತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಜೂನ್ 3ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ಸಹ ನಿಷೇಧಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!