ಕಳಸೂರು ಸೇತುವೆ ಮುಳುಗಡೆ, ಸಂಪರ್ಕ ಕಡಿತ

KannadaprabhaNewsNetwork | Published : Jun 28, 2025 12:18 AM

ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ 37 ಮನೆಗಳಿಗೆ ಹಾನಿಯಾಗಿದ್ದು, ಎರಡು ದನದ ಕೊಟ್ಟಿಗೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 9.67 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಸಂಭವಿಸಿದೆ.

ಹಾವೇರಿ: ಜಿಲ್ಲೆಯಲ್ಲಿ ಮಳೆ ತಗ್ಗಿದ್ದರೂ ಮಲೆನಾಡು ಭಾಗದಲ್ಲಿ ಆಗುತ್ತಿರುವ ಮಳೆಯಿಂದಾಗಿ ವರದಾ ನದಿ ಮೈದುಂಬಿ ಹರಿಯುತ್ತಿದೆ. ಹಾನಗಲ್ಲ ತಾಲೂಕಿನ ಕೂಡಲ- ನಾಗನೂರು ಹಾಗೂ ಸವಣೂರು ತಾಲೂಕಿನ ಕಳಸೂರು ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.ಸದ್ಯ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದರೂ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ವರದಾ ನದಿ ಹರಿವು ಹೆಚ್ಚಿದೆ. ಇದರಿಂದಾಗಿ ತಾಲೂಕಿನ ಕೂಡಲ- ನಾಗನೂರು, ಸವಣೂರು ತಾಲೂಕಿನ ಕಳಸೂರು ಬ್ರಿಜ್ ಕಂ ಬ್ಯಾರೇಜ್ ಮೇಲಿನಿಂದ ನೀರು ಹರಿಯುತ್ತಿದೆ. ಕಳಸೂರು ಗ್ರಾಮ ಮತ್ತು ಹಾವೇರಿ ನಡುವಿನ ಸಂಪರ್ಕ ಕಡಿತಗೊಂಡಿದೆ. ಅಲ್ಲದೇ ಕೂಡಲ ಗ್ರಾಮಸ್ಥರು ವರ್ದಿ, ಸಂಗೂರ ಮೂಲಕ ಹಾವೇರಿ ತಲುಪುವಂತಾಗಿದ್ದು, ಜನರು ಸಮಸ್ಯೆ ಎದುರಿಸುವಂತಾಗಿದೆ. ಕಳಸೂರು ಬ್ರಿಡ್ಜ್‌ ಕಂ ಬ್ಯಾರೇಜ್ ಮುಳುಗಡೆ ಆಗಿದ್ದರಿಂದ ರೈತರು ಸಮಸ್ಯೆ ಎದುರಿಸುವಂತಾಗಿದೆ. ಗ್ರಾಮದ ಬಹುತೇಕ ರೈತರು ತಮ್ಮ ಜಮೀನುಗಳಿಗೆ ತೆರಳಲು ಈ ಬ್ರಿಡ್ಜ್‌ ಕಂ ಬ್ಯಾರೇಜ್ ಅವಲಂಬಿಸಿದ್ದು, ಬ್ಯಾರೇಜ್ ಮುಳುಗಡೆಯಾಗಿದ್ದರಿಂದ ರೈತರು ಸುಮಾರು 25 ಕಿಮೀ ಸುತ್ತಿ ಬಳಸಿ ಜಮೀನು ತಲುಪುವಂತ ಸ್ಥಿತಿ ನಿರ್ಮಾಣಗೊಂಡಿದೆ.

ಪ್ರತಿ ಮಳೆಗಾಲದಲ್ಲಿಯೂ ರೈತರಿಗೆ ಈ ಸಮಸ್ಯೆ ಎದುರಾಗುತ್ತಿದ್ದು, ಮೇಲ್ಸೇತುವೆ ನಿರ್ಮಿಸುವಂತೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಗ್ರಾಮಸ್ಥರು ದೂರಿದರು.ಮಳೆಯಿಂದಾಗಿ ಜಿಲ್ಲೆಯಲ್ಲಿ ಈವರೆಗೆ 37 ಮನೆಗಳಿಗೆ ಹಾನಿಯಾಗಿದ್ದು, ಎರಡು ದನದ ಕೊಟ್ಟಿಗೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 9.67 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಸಂಭವಿಸಿದೆ. ಹಾನಗಲ್ಲ ತಾಲೂಕಿನ ಕೂಡಲ- ನಾಗನೂರು ಬ್ರಿಡ್ಜ್‌ ಕಂ ಬ್ಯಾರೇಜ್ ಮುಳುಗಡೆಯಾಗಿದ್ದರಿಂದ ಗ್ರಾಮಸ್ಥರಿಗೆ ಪರ್ಯಾಯ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.