ನ.29ರಂದು ಭಾವೈಕ್ಯ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ
ಕಾಗಿನೆಲೆ ಕನಕ ಗುರುಪೀಠದಲ್ಲಿ ಕನಕ ಜಯಂತ್ಯುತ್ಸವದ ನಿಮಿತ್ತ ನ.28ರಿಂದ 30ರವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನ.29ರಂದು ಆಯೋಜಿಸಿರುವ ಭಾವೈಕ್ಯ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕನಕಗುರುಪೀಠದ ಆಡಳಿತಾಧಿಕಾರಿ ಎಸ್.ಎಫ್.ಎನ್. ಗಾಜೀಗೌಡ್ರ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದ ಅವರು, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ನ.೨೮ರಿಂದ ೩೦ರವರಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ನ.೨೮ರಂದು ಬೆಳಗ್ಗೆ ೧೦ಗಂಟೆಗೆ ಸಿದ್ದರಾಮನಂದಪೂರಿ ಸ್ವಾಮೀಜಿ ಹಾಗೂ ಸ್ವಾಮಿ ಅಮೋಘಸಿದ್ದೇಶ್ವರಾನಂದರ ಸಾನಿಧ್ಯದಲ್ಲಿ ಧ್ವಜಾರೋಹಣ ಮತ್ತು ಹೊಳೆಪೂಜೆ ನಡೆಯಲಿದೆ. ೧೧ ಗಂಟೆಗೆ ಜಿಲ್ಲೆಯ ವಿವಿಧಡೆಯಿಂದ ಆಗಮಿಸುವ ೧೦೮ ಬೀರದೇವರುಗಳ ಪಲ್ಲಕ್ಕಿ ಸ್ವಾಗತ ಕಾರ್ಯಕ್ರಮ, ನಂತರ ಮಧ್ಯಾಹ್ನ ೩.೩೦ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಶ್ರೀ ಕನಕ ರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ತಿಳಿಸಿದರು.ನ.೨೯ರಂದು ಬೆಳಗ್ಗೆ ೧೧.೩೦ಕ್ಕೆ ನಡೆಯುವ ಭಾವೈಕ್ಯ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ವಿಜಯಪುರ ಹಜರತ್ ಹಾಶಿಮ್ ಪೀರ್ ದರ್ಗಾದ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ಹಾಗೂ ಕ್ಯಾಥೋಲಿಕ್ ಧರ್ಮಗುರು ಡಾ. ಫಾ. ಅಲ್ಫೋನ್ಸ್ ಫರ್ನಾಂಡಿಸ್ ಯೇಸ್ ಸಾನಿಧ್ಯ ವಹಿಸಲಿದ್ದಾರೆ. ಕನಕಗುರುಪೀಠದ ಸಂಸ್ಥಾಪಕ ಅಧ್ಯಕ್ಷ ಎಚ್. ವಿಶ್ವನಾಥ್ ಭಾವೈಕ್ಯತೆ ನುಡಿಗಳನ್ನಾಡಲಿದ್ದು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಚಿವ ಎಚ್.ಎಂ. ರೇವಣ್ಣ, ಶಾಸಕರಾದ ಬಿ.ಜಿ. ಗೋವಿಂದಪ್ಪ, ಯು.ಬಿ. ಬಣಕಾರ, ಪ್ರಕಾಶ ಕೋಳಿವಾಡ, ಶ್ರೀನಿವಾಸ ಮಾನೆ, ಶಾಸಕ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ, ಭೈರತಿ ಬಸವರಾಜ, ಆರ್. ಶಂಕರ್, ಕಾಗಿನೆಲೆ ಗ್ರಾಪಂ ಅಧ್ಯಕ್ಷೆ ಗುತ್ಯೆವ್ವ ದುರಮುರಗಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ೯ ಗಂಟೆಗೆ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.
ಕನಕ ಜಯಂತ್ಯುತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ.೨೯ರಂದು ಬೆಳಗ್ಗೆ ೧೧.೩೦ಕ್ಕೆ ನಡೆಯುವ ಭಾವೈಕ್ಯತೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಕಾಗಿನೆಲೆಯ ಮಸೀದಿಗೆ ಭೇಟಿ ನೀಡಿ, ಮಧ್ಯಾಹ್ನ ಕದರಮಂಡಲಗಿ ಗ್ರಾಮದಲ್ಲಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಸೇರಿಕೊಂಡು ರು. ೧.೨೦ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ೬ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.