ಕನ್ನಡಪ್ರಭ ವಾರ್ತೆ ಕುಶಾಲನಗರ
ಮಂಡ್ಯ ನಗರದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಕ್ಕೆ ಕುಶಾಲನಗರದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.ಕುಶಾಲನಗರ ತಾಲೂಕು ಆಡಳಿತ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ವಿವಿಧ ಸಂಘ- ಸಂಸ್ಥೆಗಳು, ಕನ್ನಡಾಭಿಮಾನಿಗಳು, ಶಾಲಾ- ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ನಾಗರಿಕರ ಸಮ್ಮುಖದಲ್ಲಿ ಕನ್ನಡ ರಥವನ್ನು ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಮತ್ತಿತರರು ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಸ್ಥಾನ ಬಳಿ ಅದ್ದೂರಿಯಾಗಿ ಬರಮಾಡಿಕೊಂಡರು.
ಶಾಸಕ ಡಾ ಮಂತರ್ ಗೌಡ ರಥದಲ್ಲಿನ ಕನ್ನಡ ಭುವನೇಶ್ವರಿ ಪುತ್ಥಳಿಗೆ ಪುಷ್ಪ ಅರ್ಪಿಸುವ ಮೂಲಕ ಕನ್ನಡ ಜ್ಯೋತಿ ರಥವನ್ನು ಸ್ವಾಗತಿಸಿದರು.ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು, ಮಹಿಳಾ ಸಂಘಟನೆಗಳು, ಕನ್ನಡಾಭಿಮಾನಿಗಳು ಹಾಗೂ ನಾಗರಿಕರು ರಥವನ್ನು ಬರಮಾಡಿಕೊಂಡು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿದರು.
ರಥದೊಂದಿಗೆ ಸಾಗಿದ ವಿದ್ಯಾರ್ಥಿಗಳು, ವಿವಿಧ ಸಮಾಜಗಳು ಹಾಗೂ ಸಂಘ- ಸಂಸ್ಥೆಗಳು ರಥಕ್ಕೆ ಸ್ವಾಗತ ಕೋರುವ ಬ್ಯಾನರ್ ಹಿಡಿದು ಕನ್ನಡ ನಾಡು- ನುಡಿ , ಸಂಸ್ಕೃತಿ ಕುರಿತ ಘೋಷಣೆಗಳನ್ನು ಮೊಳಗಿಸಿದರು.ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ತಹಸೀಲ್ದಾರ್ ಕಿರಣ್ ಗೌರಯ್ಯ, ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಕುಮಾರ್, ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಐ.ಮುನೀರ್ ಅಹ್ಮದ್, ರೇವತಿ ರಮೇಶ್, ಡಿಡಿಪಿಐ ಸಿ.ರಂಗಧಾಮಪ್ಪ, ಡಿವೈಎಸ್ಪಿ ಗಂಗಾಧರಪ್ಪ, ಪ್ರಭಾರ ಬಿಇಓ ಜಿ.ಎಂ.ಹೇಮಂತ್, ಕುಶಾಲನಗರ ತಾಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್, ಕಾರ್ಯದರ್ಶಿಗಳಾದ ಎಸ್.ನಾಗರಾಜ್, ಟಿ.ವಿ.ಶೈಲಾ, ಕೋಶಾಧಿಕಾರಿ ಕೆ.ವಿ.ಉಮೇಶ್, ಪುರಸಭೆಯ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ವಿವಿಧ ಸಂಘಟನೆಗಳ ಪ್ರಮುಖರು ಮತ್ತು ಶಾಲಾ ಶಿಕ್ಷಕರ ವೃಂದ ಉಪನ್ಯಾಸಕ ಬಂದ ವಿದ್ಯಾರ್ಥಿಗಳು ಇದ್ದರು.