
ಕನ್ನಡಪ್ರಭ ವಾರ್ತೆ ತುಮಕೂರು
ಸೋಮವಾರ ಬೆಳಗ್ಗೆ 7 ಗಂಟೆಗೆ ಗಾಜಿನ ಮನೆ ಆವರಣದಲ್ಲಿ ತುಮಕೂರು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಬೆಳಿಗ್ಗೆ 9 ಗಂಟೆಗೆ ತುಮಕೂರು ಮಹಾನಗರಪಾಲಿಕೆ ಆವರಣದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ: ಕರೀಗೌಡ ಬೀಚನಹಳ್ಳಿ, ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರಪಾಲಿಕೆ ಆಯುಕ್ತ ಯೋಗಾನಂದ್ ಸೇರಿದಂತೆ ಅಪಾರ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಾಡ ದೇವಿ ಕನ್ನಡಾಂಬೆ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಕರೀಗೌಡ ಬೀಚನಹಳ್ಳಿ ದಂಪತಿಯನ್ನು ಬೆಳ್ಳಿ ಸಾರೋಟಿನಲ್ಲಿ ಮೆರವಣಿಗೆಗೆ ಅಣಿಗೊಳಿಸಲಾಯಿತು.ಡೊಳ್ಳು, ನಂದಿಧ್ವಜ, ಕೋಲಾಟ, ವೀರಗಾಸೆ, ಸೋಮನಕುಣಿತ, ತಮಟೆ, ಅರೆವಾದ್ಯ, ಚಿಟ್ಟಿಮೇಳ, ಕೊಂಬುಕಹಳೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳ ಅದ್ದೂರಿ ಮೆರವಣಿಗೆಯೊಂದಿಗೆ ಟೌನ್ಹಾಲ್ ವೃತ್ತದಿಂದ ಎಂ.ಜಿ.ರಸ್ತೆ, ಗುಂಚಿಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಡಾ: ಅಂಬೇಡ್ಕರ್ ರಸ್ತೆ ಮಾರ್ಗವಾಗಿ ಗಾಜಿನಮನೆಯ ವೇದಿಕೆಗೆ ಮೆರವಣಿಗೆ ಸಾಗಿತು.
ಈ ರೀತಿ ಅಕ್ಷರ, ಕಲೆ, ಸಂಸ್ಕೃತಿ, ಭಾವನೆ, ಭಕ್ತಿ ಎಲ್ಲವನ್ನೂ ಒಂದೇ ವೇದಿಕೆಯಲ್ಲಿ ಒಂದಾಗಿಸಿದ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆ, ಕೇವಲ ಕಾರ್ಯಕ್ರಮವಲ್ಲ, ಇದು ಕನ್ನಡಿಗರ ಆತ್ಮಸಾಕ್ಷಿಯ ಸಂಭ್ರಮ, ಭಾಷೆಯ ಗೌರವದ ಹಬ್ಬ ಮತ್ತು ಸಂಸ್ಕೃತಿಯ ಜೀವಂತ ರಂಗೋಲಿ ಎಂಬುದಾಗಿ ಸಮ್ಮೇಳನದ ಉತ್ಸವ ನೆನಪಿನಲ್ಲಿ ಸದಾಕಾಲ ಉಳಿಯುವಂತಾಯಿತು.