-ಶಾಸಕ ಟಿ.ರಘುಮೂರ್ತಿ ಮೆರವಣಿಗೆಗೆ ಚಾಲನೆ । ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಕೈಜೋಡಿಸಿ: ರೇಹಾನ್ ಪಾಷ
ಕನ್ನಡಪ್ರಭ ವಾರ್ತೆ ಚಳ್ಳಕೆರೆ: ಕರ್ನಾಟಕ ಸಂಭ್ರಮ - ೫೦ರಡಿಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗನವಾಗಿ ಕನ್ನಡ ಜ್ಯೋತಿ ರಥಯಾತ್ರೆ ಪುಣ್ಯ ಕ್ಷೇತ್ರ ನಾಯಕನಹಟ್ಟಿಯ ಮೂಲಕ ಜುಲೈ-೧೨ರಂದು ಬೆಳಗ್ಗೆ ೧೦ ಗಂಟೆಗೆ ಚಳ್ಳಕೆರೆ ನಗರಕ್ಕೆ ಆಗಮಿಸಲಿದ್ದು, ಶಾಸಕ ಟಿ.ರಘುಮೂರ್ತಿ ಮೆರವಣಿಗೆಗೆ ಚಾಲನೆ ನೀಡುವರು ಎಂದು ತಹಶೀಲ್ಧಾರ್ ರೇಹಾನ್ಪಾಷ ತಿಳಿಸಿದರು.
ಅವರು, ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಕರ್ನಾಟಕ ಸಂಭ್ರಮ-೫೦ ವಿಶೇಷ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲಾ ಹಂತದ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ರಾಜಕೀಯ ಪಕ್ಷದ ನೇತಾರರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಪ್ಪದೆ ಭಾಗವಹಿಸಬೇಕು. ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು, ವಿವಿಧ ಕನ್ನಡ ಪರ ಸಂಘಟನೆ, ಸಂಸ್ಥೆಗಳ ಪ್ರತಿನಿಧಿಗಳು, ಚುನಾಯಿತ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಬೇಕು ಎಂದರು.ಕಸಾಪ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಮಾತನಾಡಿ, ನಗರ ಮಟ್ಟದಲ್ಲಿ ಎಲ್ಲಾ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಸೂಚನೆ ನೀಡಿ ಎಲ್ಲರೂ ಈ ಕನ್ನಡ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕಿದೆ. ನಗರದಲ್ಲಿರುವ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ನಾವೆಲ್ಲರೂ ಸೇರಿ ಕನ್ನಡ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.
ಪೂರ್ವಭಾವಿ ಸಭೆಯಲ್ಲಿ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಪಾಲಯ್ಯ, ಪಶುವೈದ್ಯಾಧಿಕಾರಿ ರೇವಣ್ಣ, ಎಇಇ ಎನ್.ಕಾವ್ಯ, ಪಿಎಸ್ಐ ಧರೆಪ್ಪಬಾಳಪ್ಪದೊಡ್ಡಮನಿ, ಕಂದಾಯಾಧಿಕಾರಿ ಲಿಂಗೇಗೌಡ, ನಗರಸಭೆ ಆರೋಗ್ಯ ನಿರೀಕ್ಷರಾದ ಗಣೇಶ್, ಸುನೀಲ್, ಪ್ರಾಧ್ಯಾಪಕ ನರಸಿಂಹಮೂರ್ತಿ, ತಿಪ್ಪೇಸ್ವಾಮಿ, ಡಿ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.
ಪೋಟೋ: ಸಿಎಲ್ಕೆ೧