ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಹೋರಾಟ
ಉರ್ದು ಬಲ್ಲವರ ಸಂಖ್ಯೆ ಹೆಚ್ಚಿರುವ ಕಡೆಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಅದೇ ಸಮುದಾಯದವರನ್ನು ನೇಮಕ ಮಾಡಬೇಕು ಎನ್ನುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕನ್ನಡ ಸೇನೆ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕನ್ನಡಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ. ರಾಜೇಗೌಡ, ಕರ್ನಾಟಕದಲ್ಲಿ ಜಾತಿ, ಜನಾಂಗ ಯಾವುದೇ ಇರಲೀ, ಕನ್ನಡ ಭಾಷೆ ಕಲಿತವರಾಗಿರಬೇಕು. ಹೀಗಾಗಿ ಶೇ.75 ಭಾಗ ಕನ್ನಡಿಗರಿಗೆ ರಾಜ್ಯದಲ್ಲಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಲು ಉರ್ದು ಕಲಿತರಿಗೆ ಅವಕಾಶ ಕಲ್ಪಿಸಿರುವುದು ಖಂಡನೀಯ. ರಾಜ್ಯದಲ್ಲಿ ಕನ್ನಡ ಪ್ರಥಮ ಭಾಷೆಯಾಗಿ ಕಲಿತಿರುವ ಶೇ.25 ಇತರೆ ಭಾಷಿಗರಿಗೆ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ಮುಖಂಡರಾದ ಸತೀಶ್, ಟೋನಿ, ನಿಲೇಶ್, ಅಶೋಕ್, ಪಾಪಣ್ಣ, ಚೈತ್ರ, ಪುಷ್ಪ, ಯೋಗೀಶ್, ಹರೀಶ್, ಹುಣಸೇಮಕ್ಕಿ ಲಕ್ಷ್ಮಣ್, ಪದ್ಮಾವತಿ, ಸತೀಶ್ ಇದ್ದರು.