ನ. 11ರಂದು ಕನ್ನಡ ಕಂಠ ಗಾಯನ ಕಾರ್ಯಕ್ರಮ

KannadaprabhaNewsNetwork | Published : Oct 20, 2024 1:47 AM

ಸಾರಾಂಶ

ನ. 11ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ಕನ್ನಡದ ಕಹಳೆ ಮೊಳಗಿಸಲು ನಿರ್ಧರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ- 50 ಹಾಗೂ 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 11 ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ ಮೂಲಕ ಕನ್ನಡದ ಕಹಳೆಯನ್ನು ಮೊಳಗಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ನವೆಂಬರ್ 11 ರಂದು ಕುಶಾಲನಗರ ಪಟ್ಟಣದ ರಥಬೀದಿ ಹಾಗೂ ಪ್ರವಾಸಿ ಮಂದಿರ ರಸ್ತೆಯಲ್ಲಿ ಎಲ್ಲರೂ ಜತೆಗೂಡಿ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.

ಉದ್ದೇಶಿತ ಕಂಠ ಗಾಯನ ಕಾರ್ಯಕ್ರಮದ ಯಶಸ್ಸಿಗೆ ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು , ಶಾಲಾ- ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರ ಸಹಭಾಗಿತ್ವದಲ್ಲಿ ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ವಿನೂತನವಾಗಿ ಕನ್ನಡ ಕಂಠ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಸಂಘಟಿಸುವ

ಕುರಿತು ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಂಡು ಕಂಠ ಗಾಯನವನ್ನು ಯಶಸ್ವಿಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು.

ಶಾಸಕ ಡಾ ಮಂತರ್ ಗೌಡ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ಐದು ಸಹಸ್ರ ಮಂದಿ ಒಂದೆಡೆ ಸೇರಿ ಕಂಠ ಗಾಯನ ಹಾಡುವ ಇಂತಹ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವ ಮೂಲಕ ಕನ್ನಡದ ಕಹಳೆಯನ್ನು ಮೊಳಗಿಸಬೇಕು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕನ್ನಡ ಭಾಷೆ, ನಾಡು- ನುಡಿ, ಕಲೆ, ಸಂಸ್ಕೃತಿ, ಸಾಹಿತ್ಯ- ಪರಂಪರೆಯನ್ನು ಎತ್ತಿಹಿಡಿಯುವ ಕೆಲಸಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು.‌ ತಾವು ಈ ಕಾರ್ಯಕ್ರಮದ ಯಶಸ್ಸಿಗೆ

ಸಹಕರಿಸುವುದಾಗಿ ತಿಳಿಸಿದರು.

ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಎಲ್ಲ ಸಂಘ- ಸಂಸ್ಥೆಗಳು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಮತ್ತು ನಾಗರಿಕರು ಕೈಜೋಡಿಸಬೇಕು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರನ್ನು ಆಹ್ವಾನಿಸಲಾಗುವುದು.

ಈ ಸಂಬಂಧ ತಕ್ಷಣದಲ್ಲೇ ಅಧಿಕಾರಿಗಳು ಹಾಗೂ ಸಂಘ- ಸಂಸ್ಥೆಗಳ ಸಭೆ‌ ನಡೆಸಿ ಕಾರ್ಯಕ್ರಮದ ಅಂತಿಮ ರೂಪುರೇಷೆ ಕುರಿತು ಚರ್ಚಿಸಲಾಗುವುದು ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.

ಕಂಠ ಗಾಯನ ಕಾರ್ಯಕ್ರಮದ ಸಂಘಟನೆ ಹಾಗೂ ರೂಪುರೇಷೆ ಕುರಿತು ವಿಷಯ ಮಂಡಿಸಿದ ಕುಶಾಲನಗರ ತಾಲೂಕು ಕ.ಸಾ.ಪ.ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಕ.ಸಾ.ಪ.ವತಿಯಿಂದ ನ.11 ರಂದು ಹಮ್ಮಿಕೊಂಡಿರುವ ಕಂಠ ಗಾಯನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.

ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕಂಠ ಗಾಯನದ ಮೂಲಕ ಎಲ್ಲೆಡೆ ಕನ್ನಡದ ಕಂಪು ಹರಡಿಸುವ ಮೂಲಕ ಎಲ್ಲರೂ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಕುರಿತು ಮಾಹಿತಿ ನೀಡಿದ ಜಿಲ್ಲಾ ಕ.ಸಾ.ಪ.ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಎಲ್ಲರೂ ಶಿಸ್ತುಬದ್ಧವಾಗಿ

ಕನ್ನಡ ಬಾವುಟ ಹಿಡಿದು ಕನ್ನಡದ ಕಂಪನ್ನು ಮೂಡಿಸುವ ಮೂಲಕ ಕಾರ್ಯಕ್ರಮದ ಯಶಸ್ವಿ ಸಂಘಟನೆಗೆ ವಿವಿಧ ಉಪ ಸಮಿತಿಗಳಿಗೆ ಜವಾಬ್ದಾರಿ ಕೆಲಸ ಹಂಚಿಕೆ ಮಾಡುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಕಾರ್ಯಕ್ರಮದ ಯಶಸ್ಸು ಸಾಧ್ಯ ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಂಠ ಗಾಯನ ಕಾರ್ಯಕ್ರಮವು ವಿನೂತನ ಪ್ರಯೋಗವಾಗಿದ್ದು, ಇದೊಂದು ಸಂಗೀತ ಕ್ಷೇತ್ರದಲ್ಲಿ ಕ್ರಾಂತಿಕಾರಿ ಮೈಲಿಗಲ್ಲಾಗಲಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಕುರಿತು ತಹಸೀಲ್ದಾರ್ ಕಿರಣ್ ಗೌರಯ್ಯ ಹಾಗೂ ಉದ್ಯಮಿ ಎಂ.ಕೆ.ದಿನೇಶ್ ಮಾಹಿತಿ ನೀಡಿದರು.

ಜಿಲ್ಲಾ ಕ.ಸಾ.ಪ. ಸಮಿತಿಯ ಸದಸ್ಯೆ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ತಾಲೂಕು ಕ.ಸಾ.ಪ.ಕಾರ್ಯದರ್ಶಿಗಳಾದ ಟಿ.ವಿ.ಶೈಲಾ, ಎಸ್.ನಾಗರಾಜ್, ಕೋಶಾಧಿಕಾರಿ ಕೆ.ವಿ.ಉಮೇಶ್, ಸಮಿತಿಯ ಪ್ರಮುಖರು, ವಿವಿಧ ಸಂಸ್ಥೆಗಳ ಪ್ರಮುಖರು ಇದ್ದರು.

Share this article