ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಕನ್ನಡ ಸಾಹಿತ್ಯವನ್ನು ಬೆಳೆಸುವ ಕೆಲಸವನ್ನು ಕನ್ನಡಿಗರು ಮಾಡಬೇಕು. ಜಗತ್ತಿನ ಪ್ರತಿ ಮೂಲೆಯಲ್ಲಿಯೂ ಕನ್ನಡದ ಡಿಂಡಿಮ ಬಾರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಹೇಳಿದರು.ಪಟ್ಟಣದ ಕೃಷ್ಣ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ 111ನೇ ಸಂಸ್ಥಾಪನಾ ದಿನವನ್ನು ಉದ್ಘಾಟಿಸಿ ಮಾತನಾಡಿ, ಮಾತೃಭಾಷೆ ತಾಯಿ ಸಮಾನ. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಭಾಷಾ ಪ್ರೇಮ ಬೆಳೆಸಿಕೊಳ್ಳಬೇಕು ಎಂದರು.
ಇಂದು ಜಗತ್ತು ವಿಶಾಲವಾಗಿದೆ. ಉದ್ಯೋಗಕ್ಕಾಗಿ ಕಲಿಯಬೇಕಾದ ಭಾಷೆ ಬಳಸಿ ಜೊತೆಗೆ ಮಾತೃಭಾಷೆಯನ್ನು ಗೌರವಿಸಬೇಕು. ಭಾಷಾ ಶುದ್ದಿಗಾಗಿ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ. ಇದನ್ನು ಅರ್ಥಮಾಡಿಕೊಂಡು ಭವಿಷ್ಯ ಯುವಕರು ನಾಡು ನುಡಿಗಾಗಿ ಶ್ರಮಿಸಿ ಎಂದು ಕರೆ ನೀಡಿದರು.ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪದ್ಮೇಶ್ ಮಾತನಾಡಿ, ಕಸಾಪ ಕನ್ನಡಿಗರನ್ನು ಒಗ್ಗೂಡಿಸಿ ಕನ್ನಡ ಸಾಹಿತ್ಯದ ಬಗ್ಗೆ ಯುವ ಜನರು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ರ್ಯಾಂಕ್ಗಳನ್ನು ಪಡೆದ ಜೆ.ಧೃತಿ, ಗೀತಾಂಜಲಿ, ಸ್ವಪ್ನ ಮತ್ತು ಕಾವ್ಯ ಅವರನ್ನು ಪರಿಷತ್ತಿನ ಪರವಾಗಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೆ.ಆರ್.ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷ ಎಚ್.ಆರ್. ಪೂರ್ಣಚಂದ್ರತೇಜಸ್ವಿ, ಮಾಜಿ ಅಧ್ಯಕ್ಷರಾದ ಕೆ.ಎಸ್.ಸೋಮಶೇಖರ್, ಕೆ.ಕಾಳೇಗೌಡ, ಕೆ.ಆರ್.ನೀಲಕಂಠ, ಮಾಜಿ ಕಾರ್ಯಾಧ್ಯಕ್ಷ ಬಳ್ಳೇಕೆರೆ ಮಂಜುನಾಥ್, ಕಾರ್ಯದರ್ಶಿ ಕಟ್ಟೆ ಮಹೇಶ್, ಶೀಳನೆರೆ ಹೋಬಳಿ ಘಟಕದ ಅಧ್ಯಕ್ಷ ಶಿವಕುಮಾರ್, ಸಂತೆಬಾಚಹಳ್ಳಿ ಹೋಬಳಿ ಅಧ್ಯಕ್ಷ ನಾಗರಾಜು, ಉಪನ್ಯಾಸಕ ಡಿಂಕಾ ಮಹೇಶ್ ಭಾಗವಹಿಸಿದ್ದರು.