ಸಿ.ಕೆ. ನಾಗರಾಜ
ಈಗ ಚಲನಚಿತ್ರ ಚಿತ್ರೀಕರಣಕ್ಕಾಗಿ ಬೆಂಗಳೂರಿಗೆ ಹೋಗಬೇಕಿದೆ. ಅಧಿಕ ವೆಚ್ಚವಾಗುತ್ತಿದೆ. ಕೆಲವು ನಿರ್ದೇಶಕರು ಖರ್ಚು-ವೆಚ್ಚದ ಲೆಕ್ಕಾಚಾರ ಹಾಕುತ್ತಿದ್ದಾರೆ. ಜತೆಗೆ ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಉಂಟುಮಾಡುತ್ತಿದೆ. ಹೀಗಾಗಿ ರಾಜ್ಯದ ಎರಡು ಕಡೆ ಸ್ಟುಡಿಯೋ ನಿರ್ಮಾಣಕ್ಕೆ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.
ಚಿತ್ರೀಕರಣಕ್ಕೆ ಅನುಕೂಲವಾಗುವಂತಹ ಎರಡು ಪ್ರದೇಶದಲ್ಲಿ ಕನಿಷ್ಠ 25 ಎಕರೆ ಜಮೀನು ನೀಡುವಂತೆ ಆಡಳಿತ ಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಮರಿಯಮ್ಮನಹಳ್ಳಿ ಸಮೀಪದ ಡಣಾಯನಕೆರೆ ಸಮೀಪದಲ್ಲಿ ಸರ್ಕಾರದ 25 ಎಕರೆ ಜಮೀನು ಗುರುತಿಸಲಾಗಿದೆ.ಚಿತ್ರೀಕರಣ ಸೌಲಭ್ಯ ಬೇರೆ ಜಿಲ್ಲೆಗಳಿಗೂ ವಿಸ್ತರಿಸುವುದರಿಂದ ಆ ಭಾಗದ ಕಲೆ, ಸಂಸ್ಕೃತಿ, ಕಲಾವಿದರಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮರಿಯಮ್ಮನಹಳ್ಳಿ ಸೂಕ್ತ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಕಲಾವಿದರು ಹೆಚ್ಚಿದ್ದಾರೆ. ಅವರಿಗೂ ಚಲನಚಿತ್ರಗಳಲ್ಲಿ ನಟಿಸಲು ಅವಕಾಶ ದೊರೆಯಲಿದೆ.
ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪನೆಯಾಗುವ ಸ್ಟುಡಿಯೋದಲ್ಲಿ ಚಿತ್ರೀಕರಣ, ರೆಕಾರ್ಡಿಂಗ್ ಮತ್ತು ಲ್ಯಾಬ್ ಡೆವಲಪ್ಮೆಂಟ್ನಂತಹ ಆಧುನಿಕ ತಂತ್ರಜ್ಞಾನದ ಸೌಲಭ್ಯ ಕಲ್ಪಿಸಲಾಗುವುದು. ಚಿತ್ರದ ಸಂಪೂರ್ಣ ಕೆಲಸಗಳು ಒಂದೇ ಸೂರಿನಡಿ ನಡೆಯಲು ಸಾಧ್ಯವಾಗುತ್ತದೆ. ಸ್ಥಳೀಯರಿಗೆ ಉದ್ಯೋಗವಕಾಶ ದೊರೆಯಲಿವೆ.
ವಿಜಯನಗರ ಶಿವಮೊಗ್ಗದಲ್ಲಿ ಸ್ಟುಡಿಯೋ: ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ 60 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ವಜ್ರಮಹೋತ್ಸವದ ನೆನಪಿಗಾಗಿ ಈ ವಿಸ್ತರಣಾ ಯೋಜನೆ ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕ ಪ್ರದೇಶವಾದ ವಿಜಯನಗರ ಜಿಲ್ಲೆ ಮತ್ತು ಮಲೆನಾಡು ಪ್ರದೇಶವಾದ ಶಿವಮೊಗ್ಗ ಪ್ರದೇಶದಲ್ಲಿ ಕಂಠೀರವ ಸ್ಟುಡಿಯೋಸ್ ನಿರ್ಮಾಣಕ್ಕೆ ಮುಂದಾಗಿದೆ ಎಂದು ಕಂಠೀರವ ಸ್ಟುಡಿಯೋಸ್ ಅಧ್ಯಕ್ಷ ಮೊಹಬೂಬ್ ಪಾಷಾ ಹೇಳಿದರು.