
ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ । ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿಕನ್ನಡಪ್ರಭ ವಾರ್ತೆ ಕಾರವಾರ
ಯಾವುದೇ ಕಾರಣಕ್ಕೂ ನೆರೆ ರಾಜ್ಯಕ್ಕೆ ನೀರು ಬಿಡಬಾರದು ಎಂದು ಸರ್ಕಾರವನ್ನು ಆಗ್ರಹಿಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕರವೇ ಜಿಲ್ಲಾಧ್ಯಕ್ಷ ಅಕ್ಷಯ ನಾಗೇಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದು ಹಾಗೂ ತೋಳಿಗೆ ಕಪ್ಪು ಪಟ್ಟಿ ಧರಿಸಿ ಜಮಾಯಿಸಿದ ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು, ಸರ್ಕಾರದ ವಿರುದ್ಧ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಯ ವಿರುದ್ಧ ಘೋಷಣೆ ಕೂಗಿದರು.ರಾಜ್ಯದ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಕನ್ನಡಿಗರಿಗೆ ಮಾಡುವ ದ್ರೋಹವಾಗಿದೆ. ಒಂದು ವೇಳೆ ಸರ್ಕಾರ ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಟ್ಟು ತಮಿಳುನಾಡಿಗೆ 15 ದಿನಗಳ ಕಾಲ ದಿನಕ್ಕೆ 3500 ಕ್ಯೂಸೆಕ್ ನೀರು ಹರಿಸಿದ್ದೇ ಆದಲ್ಲಿ, ಮುಂದಿನ ದಿನಗಳಲ್ಲಿ ಇಡೀ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಮುಖಂಡ ಅಕ್ಷಯ ನಾಗೇಕರ್ ಎಚ್ಚರಿಕೆ ನೀಡಿದರು.
ಇದರೊಂದಿಗೆ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರಾಜ್ಯದ ನೈಜ ಭೀಕರ ಪರಿಸ್ಥಿತಿಯನ್ನು ಅತ್ಯಂತ ಸಮರ್ಥವಾಗಿ ಮಂಡಿಸಬೇಕಿದೆ. ವಿಳಂಬ ಮಾಡದೆ ತಕ್ಷಣವೇ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು. ತಮಿಳುನಾಡು ಸರ್ಕಾರದ ಅಥವಾ ಕೇಂದ್ರ ಸರ್ಕಾರದ ಯಾವುದೇ ರೀತಿಯ ರಾಜಕೀಯ ಒತ್ತಡಗಳಿಗೆ ರಾಜ್ಯ ಸರ್ಕಾರವು ಶರಣಾಗಬಾರದು. ಕನ್ನಡಿಗರ ಹಿತರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿಗೆ ಆಸ್ಪದ ನೀಡದೆ ದೃಢ ನಿಲುವು ತಳೆಯಬೇಕು ಎಂದು ಕರವೇ ಕಾರ್ಯಕರ್ತರು ಮನವಿಯಲ್ಲಿ ಸ್ಪಷ್ಟಪಡಿಸಿದ್ದಾರೆ.