ಪಾಲಿಕೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಕರವೇ ಕಾರ್ಯಕರ್ತರು; ಪೊಲೀಸ್‌ ವಶಕ್ಕೆ

KannadaprabhaNewsNetwork |  
Published : Jan 10, 2025, 12:49 AM IST
ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು | Kannada Prabha

ಸಾರಾಂಶ

ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಮಹಾರಾಷ್ಟ್ರ ಸಚಿವ ಶಿವೇಂದ್ರ ರಾಜೇ ಬೋಸಲೆ ಜೈ ಮಹಾರಾಷ್ಟ್ರ ಘೋಷಣೆ ಕೂಗಿದರೂ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ ಸೇರಿ ಇತರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಮಹಾರಾಷ್ಟ್ರ ಸಚಿವ ಶಿವೇಂದ್ರ ರಾಜೇ ಬೋಸಲೆ ಜೈ ಮಹಾರಾಷ್ಟ್ರ ಘೋಷಣೆ ಕೂಗಿದರೂ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ ಸೇರಿ ಇತರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಅಲ್ಲಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ ವಿರುದ್ಧ ಘೋಷಣೆ ಕೂಗಿದರು.

ಅನಗೋಳ ಪ್ರದೇಶದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಅನುದಾನದಿಂದ ಧರ್ಮವೀರ ಸಂಭಾಜಿ ಮಹಾರಾಜರ ಮೂರ್ತಿಯನ್ನು ಅನಾವರಣ ಮಾಡಲು ಛತ್ರಪತಿ ಶಿವಾಜಿ ಮಹಾರಾಜರ ವಂಶಜ ಶಿವೇಂದ್ರರಾಜೆ ಭೋಸಲೇ ಅವರನ್ನು ಆಮಂತ್ರಿಸಿದ್ದು, ಅವರು ಕನ್ನಡದ ನೆಲದಲ್ಲಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗುವ ಮೂಲಕ ಕನ್ನಡ ನಾಡಿಗೆ ದ್ರೋಹ ಬಗೆದಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿದ ಶಾಸಕ ಅಭಯ ಪಾಟೀಲ ಕನ್ನಡದ ನೆಲಕ್ಕೆ ಅಪಮಾನ ಮಾಡಿದ್ದಾರೆ. ಜಿಲ್ಲಾಡಳಿತದಿಂದ ಅಧಿಕೃತವಾಗಿ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿ ಈ ಕಾರ್ಯಕ್ರಮದಲ್ಲೇ ಪುಂಡಾಟಿಕೆ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ , ಮೇಯರ್‌ ಸವಿತಾ ಕಾಂಬಳೆ , ಉಪಮೇಯರ್‌ ಆನಂದ ಚವ್ಹಾಣ ಹಾಗೂ ಬಿಜೆಪಿ ನಗರ ಸೇವಕರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಬೆಳಗಾವಿ ಮಹಾನಗರ ಪಾಲಿಕೆಯನ್ನು ಸರ್ಕಾರ ತಕ್ಷಣ ವಜಾ ಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ್ ಗವನ್ನವರ, ಗಣೇಶ ರೋಖಡೆ, ರಾಜು ನಾಶಿಪುಡಿ, ದಶರಥ ಬನೋಶಿ, ಬಾಳು ಜಡಗಿ,

ಕೃಷ್ಣಾ ಖಾನಪ್ಪಣ್ಣವರ, ಬಸವರಾಜ ಅವರೊಳ್ಳಿ, ಮಹೇಶ್ ಹಟ್ಟಿಹೋಳಿ, ಆರೋಗ್ಯಪ್ಪಾ ಪಾದನಕಟ್ಟಿ, ಸುಧೀರ ಪಾಟೀಲ, ಸತೀಶ ಗುಡದವರ. ಉದಯ ಚಿಕ್ಕಣ್ಣವರ, ವಿಠಲ ಕಡಕೋಳ, ರುದ್ರಗೌಡ ಪಾಟೀಲ, ಸುರೇಶ ಮರಗೋಡ ಮೊದಲಾದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!