ಕಾರ್ಕಳ: ಕಾರ್ಕಳ ಬಾಹುಬಲಿ ಮಹಾಮಸ್ತಕಾಭೀಷೇಕವು ಕಾರ್ಕಳದ ಇತಿಹಾಸ ಹಾಗೂ ಸಾಂಸ್ಕೃತಿಕ ಮಹತ್ವವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ಮಹತ್ವದ ಮಹೋತ್ಸವವಾಗಿದೆ. ಮಹೋತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ, ಕಾರ್ಕಳದ ಪ್ರಮುಖ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು, ವಿದ್ಯುತ್, ಶೌಚಾಲಯ, ಪಾರ್ಕಿಂಗ್ ಸೇರಿದಂತೆ ಮೂಲಸೌಕರ್ಯ ಸೌಲಭ್ಯಗಳ ಅಭಿವೃದ್ಧಿಗೆ ಸುಮಾರು 70 ಕೋಟಿ ರು. ಮೊತ್ತದ ಸಮಗ್ರ ಯೋಜನೆ ಸಿದ್ಧಪಡಿಸಲಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಮಹೋತ್ಸವದ ಯಶಸ್ಸಿಗಾಗಿ ಈಗಾಗಲೇ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಸ್ವಯಂಸೇವಕರ ಸಮಿತಿ ರಚನೆಗೆ ಸೂಚನೆ ನೀಡಿದರು.ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಮಹಾಮಸ್ತಕಾಭೀಷೇಕ ಮಹೋತ್ಸವವನ್ನು ಅತ್ಯಂತ ಭವ್ಯ ಹಾಗೂ ಸುವ್ಯವಸ್ಥಿತವಾಗಿ ಆಯೋಜಿಸಬೇಕು. ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಒದಗಿಸುವಂತೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಅನಂತರಾಜ್ ಪೂವಣಿ, ಪುಷ್ಪರಾಜ ಜೈನ್, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ರತ್ನಾಕರ ರಾಜ್ ಅರಸು, ಜೀವಂಧರ್ ಬಳ್ಳಾಲ್, ಸೂರಜ್ ಕುಮಾರ್, ಶಿವಪ್ರಸಾದ್ ಅಜಿಲ, ಬ್ರಹ್ಮದೇವ ಕಲಶ, ಅಜಿತ್ ಕೊಕ್ರಾಡಿ, ಮೋಹನ್ ಪಡಿವಾಳ ಮತ್ತಿತರರಿದ್ದರು.