ಕಾರ್ಕಳ: ಸ್ವರ್ಣ ಕಾರ್ಕಳ ಕಲ್ಪನೆಯಡಿ ಪ್ರವಾಸೋದ್ಯಮ, ಸಾಹಿತ್ಯ, ಸಾಂಸ್ಕೃತಿಕ ಹೀಗೆ ಎಲ್ಲ ಆಯಾಮಗಳಲ್ಲಿ ಕ್ಷೇತ್ರದ ಪ್ರತಿಯೊಬ್ಬ ಪುರುಷ ಮತ್ತು ಮಹಿಳೆಯರು ಆರ್ಥಿಕವಾಗಿ ವೃದ್ಧಿಯಾಗಬೇಕು. ಕ್ಷೇತ್ರದ ಕಟ್ಟ ಕಡೆಯ ವ್ಯಕ್ತಿಯೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎನ್ನುವುದೇ ನಮ್ಮ ಆಶಯ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.ಅವರು ಶಾಸಕರ ವಿಕಾಸ ಕಚೇರಿಯಲ್ಲಿ ಭಾನುವಾರ ಬೋಳಾಸ್ ಆಗ್ರೋ ಪ್ರೈವೆಟ್ ಲಿಮಿಟೆಡ್ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಕಳ ಮತ್ತು ಹೆಬ್ರಿ ಸಂಜೀವಿನಿ ಒಕ್ಕೂಟದ ಮಹಿಳೆಯರ ತಂಡದ ಸ್ವಾವಲಂಬಿ ಬದುಕಿನ ಆಸರೆಗಾಗಿ ಉಚಿತ ಹೊಲಿಗೆ ಯಂತ್ರ ಹಾಗೂ ಸಂಜೀವಿನಿ ಬಳಗಕ್ಕೆ ಚೆಂಡೆ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಕಾಸ ಸಂಸ್ಥೆಯು ಕಳೆದ 20 ವರ್ಷಗಳಿಂದ ನೂರಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದೆ. ಇಂದು 5 ಲಕ್ಷ ರು. ಮೊತ್ತದ 25 ಉಚಿತ ಹೊಲಿಗೆ ಯಂತ್ರ ಹಾಗೂ ಚೆಂಡೆ ವಿತರಣೆ ಮಾಡಲಾಗಿದೆ. ಉದ್ಯಮದ ಜೊತೆಗೆ ಸಮಾಜಕ್ಕೂ ಅಪಾರ ಕೊಡುಗೆ ನೀಡುತ್ತಿರುವ ಬೋಳಾಸ್ ಆಗ್ರೋ ಸಂಸ್ಥೆಯನ್ನು ಶ್ಲಾಘಿಸಿದ ಶಾಸಕರು, ಬೋಳಾಸ್ ಸಂಸ್ಥೆಯು ಸಮಾಜಕ್ಕೆ ಅಗತ್ಯ ಅನಿಸಿದ್ದನ್ನು ಕೊಡುವ ಕಲ್ಪವೃಕ್ಷದಂತಿದೆ. ನರ್ಸಿಂಗ್ ಕಾಲೇಜಿಗೆ 75 ಲಕ್ಷ ರು. ಧನಸಹಾಯ ಹಾಗೂ ಬೋಳದಲ್ಲಿ ಸಾರ್ವಜನಿಕ ಸೇವೆಗಾಗಿ ಅಂಬುಲೆನ್ಸ್ ನೀಡುವ ಮೂಲಕ ಸಂಸ್ಥೆಯು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ 25 ಮಂದಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 25 ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಹಾಗೆಯೇ ಸಂಜೀವಿನಿ ಮಹಿಳಾ ತಂಡಕ್ಕೆ ಕರಾವಳಿಯ ಹೆಮ್ಮೆಯ ಕಲೆಯಾದ ಚೆಂಡೆಗಳನ್ನು ವಿತರಿಸಲಾಗಿದ್ದು, ಶಾಸಕ ವಿ. ಸುನಿಲ್ ಕುಮಾರ್ ಅವರು ತಾವೇ ಸ್ವತಃ ವಿಶಿಷ್ಟ ಶೈಲಿಯಲ್ಲಿ ಚೆಂಡೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಅತ್ಯಂತ ಆಕರ್ಷಕವಾಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ವ್ಯವಸ್ಥಾಪಕಿ ಉಮಾ, ಪ್ರಮುಖರಾದ ಮಹಾವೀರ ಹೆಗ್ಡೆ, ಮಾಲಿನಿ ರೈ, ಹಾಗೂ ರವೀಂದ್ರ ಮಡಿವಾಳ ಉಪಸ್ಥಿತರಿದ್ದರು. ಕರುಣಾಕರ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಜಾತ ಪ್ರಾಸ್ತಾವಿಕವಾಗಿ ಮಾತನಾಡಿದರು.