ಬೆಂಗಳೂರಲ್ಲಿ ಐಪಿಎಲ್‌ ನಡೆಸಲು ಸಂಪುಟ ಅಸ್ತು

KannadaprabhaNewsNetwork |  
Published : Dec 12, 2025, 02:00 AM IST
ಕ್ರಿಕೆಟ್‌ | Kannada Prabha

ಸಾರಾಂಶ

 ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ನೇ ಸಾಲಿನ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಪಂದ್ಯಾವಳಿ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ಕ್ರಮಗಳು  ಸಿದ್ಧಪಡಿಸುವ ಹೊಣೆಗಾರಿಕೆಯನ್ನು  ಡಾ.ಜಿ.ಪರಮೇಶ್ವರ್‌  ಹೆಗಲಿಗೆ ವಹಿಸಲಾಗಿದೆ.

  ಸುವರ್ಣ ವಿಧಾನಸೌಧ :  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ನೇ ಸಾಲಿನ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ, ಪಂದ್ಯಾವಳಿ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ಕ್ರಮಗಳು, ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳು, ಷರತ್ತುಗಳನ್ನು ಒಳಗೊಂಡಂತೆ ಸ್ಪಷ್ಟ ಮಾರ್ಗಸೂಚಿಯನ್ನು ಕುನ್ಹಾ ವರದಿ ಆಧರಿಸಿ ಸಿದ್ಧಪಡಿಸುವ ಹೊಣೆಗಾರಿಕೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಹೆಗಲಿಗೆ ವಹಿಸಲಾಗಿದೆ.

ನ್ಯಾ.ಕುನ್ಹಾ ವರದಿಯ ಶಿಫಾರಸಿನಂತೆ ಕಟ್ಟುನಿಟ್ಟಿನ ಮಾರ್ಗಸೂಚಿ

ನ್ಯಾ.ಕುನ್ಹಾ ವರದಿಯ ಶಿಫಾರಸಿನಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಅವುಗಳನ್ನು ಚಾಚೂತಪ್ಪದೆ ಅನುಸರಿಸಬೇಕೆಂಬ ಕಟ್ಟಾಜ್ಞೆ ವಿಧಿಸಬೇಕು, ಮಾರ್ಗಸೂಚಿ ಉಲ್ಲಂಘನೆಯಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳೇನು ಎನ್ನುವ ಬಗ್ಗೆ ವಿವರವಾದ ನಿಯಮಗಳನ್ನು ರೂಪಿಸಿ ಐಪಿಎಲ್‌ ಪಂದ್ಯಾವಳಿಗಳಿಗೆ ಅನುಮತಿ ನೀಡಬೇಕು ಸಂಪುಟ ಸಭೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

11 ಮಂದಿ ಅಸುನೀಗಿದ ಘಟನೆ ಬಳಿಕ ಎಚ್ಚೆತ್ತ ಸರ್ಕಾರ

ಈ ಹಿಂದೆ ಆರ್‌ಸಿಬಿ ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಅಸುನೀಗಿದ ಘಟನೆ ಬಳಿಕ ಎಚ್ಚೆತ್ತ ಸರ್ಕಾರ ಇದರ ತನಿಖೆಗೆ ನ್ಯಾ.ಕುನ್ಹಾ ಸಮಿತಿ ರಚಿಸಿತ್ತು. ಸಮಿತಿ ತನ್ನ ವರದಿಯಲ್ಲಿ ಮುಂದೆ ಇಂಥ ಘಟನೆ ಜರುಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ವಿವರವಾದ ಶಿಫಾರಸುಗಳನ್ನು ನೀಡಿತ್ತು.

ಆ ಶಿಫಾರಸುಗಳ ಅನುಸಾರ ಐಪಿಎಲ್‌ ಪಂದ್ಯಾವಳಿ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಶಿಯೇಷನ್‌(ಕೆಎಸ್‌ಸಿಎ), ಆರ್‌ಸಿಬಿ ಸೇರಿ ಕ್ರಿಕೆಟ್‌ ತಂಡಗಳು, ಪೊಲೀಸರು ಸೇರಿ ಸಂಬಂಧಪಟ್ಟ ಎಲ್ಲರ ಜವಾಬ್ದಾರಿಗಳನ್ನು ನಿಗದಿಪಡಿಸಿ ವಿವರವಾದ ಹಾಗೂ ಕಟ್ಟುನಿಟ್ಟಿನ ಮಾರ್ಗಸೂಚಿ ಸಿದ್ಧಪಡಿಸುವುದು, ಆ ಮಾರ್ಗಸೂಚಿ ಅನುಸರಿಸಲು ಒಪ್ಪಿದರಷ್ಟೇ ಐಪಿಎಲ್‌ ಪಂದ್ಯಾವಳಿಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಅನುಮತಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾರ್ಗಸೂಚಿ ಸಿದ್ಧಪಡಿಸುವುದು ಅವುಗಳ ಸಮರ್ಪಕ ಅನುಷ್ಠಾನದ ಹೊಣೆಯನ್ನು ಗೃಹ ಸಚಿವ ಪರಮೇಶ್ವರ್‌ ಅವರ ಹೆಗಲಿಗೆ ಹೊರಿಸಲಾಗಿದೆ ಎಂದು ತಿಳಿದು ಬಂದಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣದ ನಂತರ ಬೆಂಗಳೂರಿನ ಐಪಿಎಲ್‌ ಪದ್ಯಾವಳಿಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸಲಾಗಿತ್ತು. ಇದು ರಾಜ್ಯದ ಕ್ರಿಕೆಟ್‌ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿತ್ತು. ಈ ಮಧ್ಯೆ, ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇತ್ತೀಚೆಗೆ ಆರ್‌ಸಿಬಿ ಪಂದ್ಯಾವಳಿಗಳನ್ನು ಮತ್ತೆ ಬೆಂಗಳೂರಿನಲ್ಲಿ ನಡೆಸಲು ಅವಕಾಶ ನೀಡುವುದಾಗಿ ಘೋಷಿಸಿದ್ದರು. ಅಂತಾರಾಷ್ಟ್ರೀಯ ಪಂದ್ಯಾವಳಿಯನ್ನೂ ನಗರಕ್ಕೆ ತರಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಸಂಪುಟ ಸಭೆಯಲ್ಲಿ ಕ್ರಿಕೆಟ್‌ ಅಭಿಮಾನಿಗಳ ಪರವಾದ ನಿರ್ಧಾರ ತೆಗೆದುಕೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ