-ತಹಸೀಲ್ದಾರ್ ನಿಸರ್ಗ ಪ್ರಿಯ ಅಭಿಮತ-----ಕನ್ನಡಪ್ರಭ ವಾರ್ತೆ ರಾವಂದೂರು
ಖಾಸಗಿ ಶಾಲೆಗಳಿಗಿಂತಲೂ ಸರ್ಕಾರಿ ಶಾಲೆಗಳಲ್ಲಿ ಒಳ್ಳೆಯ ಗುಣಾತ್ಮಕ ಸಂಸ್ಕಾರಯುತ ಶಿಕ್ಷಣ ದೊರೆಯುತ್ತದೆ ಎಂದು ತಹಸೀಲ್ದಾರ್ ನಿಸರ್ಗ ಪ್ರಿಯ ಹೇಳಿದ್ದರು.ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸರ್ಕಾರಿ ಶಾಲೆಗಳಲ್ಲಿ ಉತ್ತಮ ಬೋಧಕರಿದ್ದು ಹಾಗೂ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಂಡು ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಅದರಲ್ಲೂ ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಉತ್ತಮ ಕಲಿಕೆಯ ಜೊತೆಗೆ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆಯುತ್ತದೆ ಹಾಗೂ ಮಕ್ಕಳ ಕಲಿಕೆಗೆ ಪೂರಕ ವಾತಾವರಣವಿದ್ದು ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ಶಾಲೆಗೆ ಮಕ್ಕಳನ್ನು ಸೇರಿಸುವಂತೆ ತಿಳಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಆರ್.ವಿ. ವಿಶ್ವನಾಥ್ ಮಾತನಾಡಿ, ತಮ್ಮ ಮಕ್ಕಳನ್ನ ಶಾಲೆಗೆ ಸೇರಿಸಿದ ಮೇಲೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ತಮ್ಮ ಮಕ್ಕಳ ಕಲಿಕೆಯ ಪ್ರಗತಿ ಯಾವ ರೀತಿ ಇರುತ್ತದೆ ಎಂಬುದನ್ನು ತಿಳಿಯಲು ಪ್ರತಿ ತಿಂಗಳು ಶಿಕ್ಷಕರು ಕರೆದಾಗ ಶಾಲೆಗೆ ಬಂದು ತಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಅವರು ತಿಳಿಸಿದರು. ಮದುಮಗನಂತೆ ಸಿಂಗಾರಗೊಂಡ ಶಾಲೆಶಾಲಾ ಪ್ರಾರಂಭೋತ್ಸವದ ಮೊದಲ ದಿನವಾದ ಇಂದು ಶಾಲೆಯಲ್ಲಿ ಹಸಿರು ತೋರಣ ಚಪ್ಪರದೊಂದಿಗೆ ಶಾಲೆಯನ್ನು ಸಿಂಗರಿಸಿ ರಸ್ತೆ ಉದ್ದಕ್ಕೂ ಮಕ್ಕಳ ಮೇಲೆ ಹೂವನ್ನ ಎರಚುವ ಹಾಗೂ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಮಕ್ಕಳನ್ನು ಸ್ವಾಗತಿಸಲಾಯಿತು ಹಾಗೂ ಮಕ್ಕಳಿಗೆ ಬಿಸಿ ಊಟದಲ್ಲಿ ಬಾತ್ ಪಾಯಸ ಬೂಂದಿ ಸಹ ನೀಡಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ, ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್, ಪ್ರಾಂಶುಪಾಲ ವೆಂಕಟೇಶ್, ಉಪ ತಹಸೀಲ್ದಾರ್ ಕೆ. ಶುಭ, ಮುಖ್ಯೋಪಾಧ್ಯಾಯಿನಿ ಲಿಲ್ಲಿಮೇರಿ, ಉಪನ್ಯಾಸಕರಾದ ಲಕ್ಷ್ಮಿಕಾಂತ್ , ಸುಭಾಷ್, ರವಿ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಲೇಂದ್ರ, ರಾಜೇಂದ್ರ, ದಿನೇಶ್, ಹುಚ್ಚೇಗೌಡ, ತೇಜಸ್ವಿನಿ, ಗೌರಮ್ಮ, ಸುರೇಶ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಇದ್ದರು.