ಮುಂದಿನ ವರ್ಷ ತಳಗವಾದಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ದಿಲೀಪ್

KannadaprabhaNewsNetwork |  
Published : Oct 24, 2024, 12:40 AM IST
23ಕೆಎಂಎನ್ ಡಿ13 | Kannada Prabha

ಸಾರಾಂಶ

ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳ ಮೂಲಕ ಅನುದಾನ ನೀಡಿದ್ದಾರೆ. ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದಿದ್ದ ವೇಳೆಯೂ ಸಹ ಶಿಕ್ಷಣಕ್ಕೆ ಹೆಚ್ಚಿನ ನೆರವು ಬಯಸಿರುವುದೇ ಅವರ ಕಾಯಕಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಳಗವಾದಿ ಗ್ರಾಮದಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆಸಕ್ತಿಯ ಫಲವಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕ ಪಬ್ಲಿಕ್ ಶಾಲೆ ಆರಂಭವಾಗಲಿದೆ ಎಂದು ಎಪಿಎಂಸಿ ಮಾಜಿ ಸದಸ್ಯ ದಿಲೀಪ್ ಕುಮಾರ್(ವಿಶ್ವ) ಹೇಳಿದರು.

ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಮಾತನಾಡಿದರು.

ತಾಲೂಕಿನ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಹಲವು ಯೋಜನೆಗಳನ್ನು ಹೊಂದಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಆರಂಭಿಸಲು ಮುನ್ನುಡಿ ಬರೆದಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್ ಶಾಲೆಯು ಕಾರ್ಯಾರಂಭ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮೀಣ ಭಾಗದ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳ ಮೂಲಕ ಅನುದಾನ ನೀಡಿದ್ದಾರೆ. ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದಿದ್ದ ವೇಳೆಯೂ ಸಹ ಶಿಕ್ಷಣಕ್ಕೆ ಹೆಚ್ಚಿನ ನೆರವು ಬಯಸಿರುವುದೇ ಅವರ ಕಾಯಕಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಣ್ಣಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಪನಿರ್ದೇಶಕ ಸಿ.ಚಲುವಯ್ಯ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಗಮನ ಹರಿಸುತ್ತಿದ್ದು, ಇದರ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಕೂಡ ಹೆಚ್ಚು ಗಮನ ನೀಡಲಾಗುತ್ತಿದೆ ಎಂದರು.

ಪಠ್ಯದ ಚಟುವಟಿಕೆಗಳ ಜತೆಗೆ ಪಠ್ಯೇತರಗಳಲ್ಲೂ ಆಸಕ್ತಿ ಹೊಂದುವ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಗೆ ಅಡಿಪಾಯ ಹಾಕಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು- ಗೆಲುವಿನಲ್ಲೂ ಕ್ರೀಡಾ ಮನೋಭಾವನೆಯನ್ನು ರೂಢಿಸಿಕೊಂಡು, ನಿರಂತರತೆಯ ಜತೆಗೆ ಜಿಲ್ಲಾ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಹೇಳಿದರು.

ಪಠ್ಯದೊಂದಿಗೆ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಅನೇಕ ವಲಯಗಳಲ್ಲಿ ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಅವರ ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಣ ಕೊಟ್ಟಾಗ ಮಾತ್ರ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಎನ್.ಸುಮಿತ್ರಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಕ್ರೀಡಾಸ್ಫೂರ್ತಿ ತೋರಿ ಮಾದರಿಯಾಗಲಿ ಎಂದು ಶುಭಕೋರಿದರು.

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ನೋಡಲ್ ಅಧಿಕಾರಿ ಪಿ.ಕಾವೇರಿ, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನಟರಾಜು, ಉಪನ್ಯಾಸಕರ ಸಂಘದ ಅಧ್ಯಕ್ಷ ಚನ್ನಕೃಷ್ಣಯ್ಯ, ತಾಲೂಕು ಸಂಘದ ಅಧ್ಯಕ್ಷ ಎಚ್.ವಿ.ನಿಂಗರಾಜು, ಹಿರಿಯ ಉಪನ್ಯಾಸಕ ಹನುಮಂತಯ್ಯ, ವಿವಿಧ ಕಾಲೇಜುಗಳ ಪ್ರಾಂಶುಪಾಲರಾದ ಮಂಜುನಾಥ್, ಅನಿತಾ, ಸಿದ್ದಯ್ಯ, ಶಿವಕುಮಾರ್, ಚೇತನಾ, ಶಿಕ್ಷಕ ಬಿ.ಟಿ.ರಾಮಲಿಂಗಯ್ಯ, ಡೇರಿ ಅಧ್ಯಕ್ಷ ಪಿ.ಬಸವರಾಜು, ಮಾರೇಹಳ್ಳಿ ಆದರ್ಶ ವಿದ್ಯಾಲಯ ಎಸ್ಡಿಎಂಸಿ ಅಧ್ಯಕ್ಷ ಟಿ.ಎಂ.ಪ್ರಕಾಶ್, ಎಸ್ಡಿಎಂಸಿ ಅಧ್ಯಕ್ಷ ಟಿ.ಎಚ್.ಆಂಜನಪ್ಪ, ಮುಖಂಡರಾದ ರೈತ ಸಂಘದ ಚೌಡಯ್ಯ, ರಾಮಣ್ಣ, ಮಾನಸ, ನಾಗರತ್ನ, ಪಟೇಲ್ ರಾಮಣ್ಣ, ಅನಿಲ್ ಕುಮಾರ್, ರಾಮಣ್ಣ, ಮಹೇಂದ್ರ, ಮಮತಾ, ಕೆಂಪಯ್ಯ, ಜಯರಾಮು ಇದ್ದರು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ