ಹೂವಿನಹಡಗಲಿ: ತಾಲೂಕಿನಲ್ಲಿರುವ 500 ಎಕರೆ ಕೃಷಿ ಭೂಮಿಯಲ್ಲಿ ಸೋಲಾರ್ ಅಳವಡಿಸಲು ಖಾಸಗಿ ಕಂಪನಿಗಳು ಹುನ್ನಾರ ನಡೆಸಿದ್ದು, ಇದರ ವಿರುದ್ಧ ಜನಜಾಗೃತಿ ಮೂಡಿಸುವುದು ಅಗತ್ಯವಿದೆ ಎಂದು ಹಿಂದುಳಿದ ಜಾತಿಗಳ ಜಿಲ್ಲಾಧ್ಯಕ್ಷ ಬುಡ್ಡಿ ಬಸವರಾಜ ಹೇಳಿದರು.
ಪಟ್ಟಣ, ನಗರ ಪ್ರದೇಶಗಳ ಸ್ವಚ್ಛತೆ ಕಾಪಾಡುವಲ್ಲಿ ತಮ್ಮದೇ ಕೊಡುಗೆ ನೀಡುವ ಎಲ್ಲ ಪೌರ ಕಾರ್ಮಿಕರನ್ನು ಗೌರವಿಸುತ್ತಿರುವ, ಕಾರ್ಯ ಶ್ಲಾಘನೀಯ. ಹಳ್ಳಿಯ ಜನತೆ ತಮ್ಮ ಹಳ್ಳಿಗಳಲ್ಲಿ ದೇವರ ಗುಡಿ ಅಭಿವೃದ್ಧಿ ಬಗ್ಗೆ ಯೋಚಿಸದೇ ಶಾಲೆ ಗುಡಿ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು. ಜ್ಞಾನಾರ್ಜನೆಗೆ ಅವಕಾಶ ಕಲ್ಪಿಸಿಕೊಟ್ಟರೆ ಮುಂದಿನ ಪೀಳಿಗೆ ಸದೃಢಗೊಳ್ಳುತ್ತದೆ ಎಂದರು.
ಸಾನಿಧ್ಯ ವಹಿಸಿದ್ದ ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ ಮಾತನಾಡಿ, ಎಲ್ಲರೂ ನಿದ್ದೆಯಿಂದ ಎಚ್ಚರಗೊಳ್ಳುವ ಮೊದಲೇ ಪಟ್ಟಣವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರು, ಜನರ ಆರೋಗ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಪೌರ ಕಾರ್ಮಿಕರನ್ನು ಸನ್ಮಾನಿಸುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.ಚೌಕಿಮಠದ ಸದ್ಗುರು ಗಾಡಿತಾತಾ ಮಾತನಾಡಿ, ದೇವಸ್ಥಾನಕ್ಕೆ ಕಳಸ ಆಗುವುದಕ್ಕಿಂತ ಕಸಬರಿಗೆ ಆಗುವುದು ಮುಖ್ಯ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಠ, ಮಾನ್ಯಗಳು ಮಾಡುವ ಕೆಲಸವನ್ನು ಈ ಸಂಸ್ಥೆ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಸಾರ್ವಜನಿಕ ಸೇವಾ ಸಂಘದ ಅಧ್ಯಕ್ಷ ಎಚ್.ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ರೈತ ಸಂಘದ ಎಂ.ಶಿವರಾಜ್, ಗೌರವ ಅಧ್ಯಕ್ಷ ಎಚ್.ಸಿದ್ದಪ್ಪ, ಪಾಂಡುರಂಗ, ಅಂಜಿನಪ್ಪ, ಸುಭಾನ್ ಸಾಬ್ ಇದ್ದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 120ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸಲಾಯಿತು.