ಕನ್ನಡಪ್ರಭ ವಾರ್ತೆ, ತುಮಕೂರು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ತುಮಕೂರು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಿ ಮತ್ತು ಬಹಿರಂಗ ಚರ್ಚೆಗೆ ಬರಲಿ ಎಂದು ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಸವಾಲುಹಾಕಿದರು.ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್ಎಸ್ ಪಕ್ಷಕ್ಕೆ ಸರಿಯಾದ ಮಾಹಿತಿ ಇಲ್ಲ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇವೆಂದು ಸಚಿವರು ಹೇಳಿದ್ದಾರೆ. ಸಾರ್ವಜನಿಕರ ಮುಂದೆ ದಾಖಲೆಗಳೊಂದಿಗೆ ಚರ್ಚೆ ನಡೆಸಲಿ. ತುಮಕೂರಿನ ಅಭಿವೃದ್ಧಿ ಬಗ್ಗೆ ಬಾಯಿಮಾತಿನಲ್ಲಿ ಹೇಳುವುದರಿಂದ ಸಾಲದು. ಅಂಕಿ ಅಂಶಗಳೊಂದಿಗೆ ನೀವೇ ದಿನಾಂಕ ಮತ್ತು ಸ್ಥಳ ನಿಗದಿಪಡಿಸಿ ನೀವು ಜಿಲ್ಲೆಗೆ ಏನು ಮಾಡಿದ್ದೀರಿ ಎಂದು ಜನರಿಗೆ ತಿಳಿಸಿ. ನಾವು ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ದಾಖಲೆಗಳೊಂದಿಗೆ ಜನರ ಮುಂದೆ ಇಡುತ್ತೇವೆ ಎಂದು ಹೇಳಿದರು. ಜಿಲ್ಲಾಧಿಕಾರಿಯ ಡಿಜಿಟಲ್ ಸಹಿಯ ದುರ್ಬಳಕೆ ಪ್ರಕರಣದಲ್ಲಿ ಇನ್ನೂ ಕ್ರಿಮಿನಲ್ ಪ್ರಕರಣ ದಾಖಲಿಸದಿರುವುದು. ಸಾರ್ವಜನಿಕ ಪ್ರತಿಭಟನೆಗಳಿಗೆ ನಿರ್ಬಂಧ ಹಾಕಿ ಅವರ ಹಕ್ಕುಗಳನ್ನು ಕಸಿದುಕೊಂಡಿದ್ದಾರೆ. ಸರ್ಕಾರಿ ವಾಹನ ದುರ್ಬಳಕೆ ಆರೋಪಕ್ಕೆ ಡಿಸಿ ಸ್ಪಷ್ಟನೆ ನೀಡದಿರುವುದು ಸೇರಿದಂತೆ ಆಡಳಿತ ವೈಫಲ್ಯಕ್ಕೆ ಅನೇಕ ಉದಾಹರಣೆಗಳು ನಮ್ಮ ಬಳಿ ಇವೆ. 2023ರಲ್ಲಿ ಜಿಲ್ಲೆಗೆ ಆಗಮಿಸಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಆಡಳಿತ ಅವಧಿಯಲ್ಲಿ ನಡೆದ ವಿವಿಧ ಬೆಳವಣಿಗೆಗಳ ಕುರಿತು ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು. ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಂಡಿಲ್ಲ. ಲಂಚದ ಆರೋಪದ ವಿಡಿಯೋಗಳಿದ್ದರೂ ಕ್ರಮ ಜರುಗಿಸಿಲ್ಲ ಹಾಗೂ ಹಲವು ಪ್ರಕರಣಗಳಲ್ಲಿ ನಿರ್ಲಕ್ಷ್ಯ ತೋರಲಾಗಿದೆ. ನಿಮ್ಮ ಕೆಲಸಕ್ಕೆ ಒತ್ತಡವಿದ್ದರೆ ರಾಜೀನಾಮೆ ನೀಡಿ ಎಂದು ಎಸ್ಪಿಗೆ ಒತ್ತಾಯಿಸಿದರು. ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯವೈಖರಿಯಿಂದ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದರು.