ಹುಬ್ಬಳ್ಳಿ:
ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗಿದ್ದು, ಚೊಂಬು ತೋರಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ಚುನಾವಣೆಯಲ್ಲಿ ಜನತೆಯೇ ರಾಹುಲ್ ಗಾಂಧಿ ಅವರಿಗೆ ಚೊಂಬು ಕೊಡಲಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಹೇಳಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಜಾಹೀರಾತು ನೀಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ. 10 ಕೆಜಿ ಅಕ್ಕಿ ಎಲ್ಲಿದೆ? ಯುವನಿಧಿ 7 ತಿಂಗಳು ಬಿಟ್ಟು ನೀಡಿದರು. ಬೆಲೆ ಏರಿಕೆ ಒಂದೆಡೆ, ಇನ್ನೊಂದೆಡೆ ಉಚಿತ ಹೆಸರಿನಲ್ಲಿ ಏನನ್ನೂ ಕೊಡುತ್ತಿಲ್ಲ ಎಂದ ಅವರು, ಐದರಲ್ಲಿ ರೈತರ ಗ್ಯಾರಂಟಿ ಇಲ್ಲವೇ ಇಲ್ಲ. ಬೀಜ, ಗೊಬ್ಬರಕ್ಕೆ ಇವರ ಬಳಿ ಹಣವಿಲ್ಲ. ಬರೀ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿರುವುದು ಏಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಸೈ ಎಂದಿದ್ದಾರೆ. ಹೀಗಾಗಿ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ 28 ಸ್ಥಾನವನ್ನು ಪಡೆದುಕೊಳ್ಳಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಅಭಿವೃದ್ಧಿ ಕಾರ್ಯಕ್ರಮಗಳನ್ನು ಗಮನಿಸಿ ರಾಜ್ಯ ಹಾಗೂ ದೇಶದ ಜನತೆ ಮತ್ತೊಂದು ಬಾರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಬೇಕು. ಈ ಮೂಲಕ ಧಾರವಾಡ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ಅವರಿಗೆ ಶಕ್ತಿ ನೀಡಬೇಕು. ಕುರುಬ ಸಮಾಜವು ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಈಶ್ವರಪ್ಪ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಅವರಿಗೆ ಬಿಜೆಪಿಯಲ್ಲಿ ಅಗ್ರಸ್ಥಾನವಿದೆ. ಈಚೆಗೆ ಅವರು ದುಡುಕಿನ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂದರು.