ಕಾರವಾರ: ಮಳೆಗಾಲದಲ್ಲಿ ಪದೇಪದೇ ನೀರು ನುಗ್ಗುತ್ತಿರುವ ಹಿನ್ನೆಲೆ ಕಾರವಾರ ಸಾರಿಗೆ ಘಟಕವನ್ನು ಅಂಕೋಲಾಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಘಟಕಕ್ಕೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರದ ಹಬ್ಬುವಾಡ ರಸ್ತೆಯಲ್ಲಿರುವ ಸಾರಿಗೆ ಘಟಕಕ್ಕೆ ಪ್ರತಿ ಮಳೆಗಾಲದಲ್ಲಿ ನೀರು ನುಗ್ಗಿ ಹಳ್ಳದಂತಾಗುತ್ತಿದ್ದು, ಇದರಿಂದ ಬಸ್ಸುಗಳು, ಇಂಧನ ಘಟಕ ಹಾಗೂ ಕಚೇರಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆ ಕಾರವಾರ ಡಿಪೋವನ್ನು ತಾತ್ಕಾಲಿಕವಾಗಿ ಅಂಕೋಲಾಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಸ್ಥಳ ಪರಿಶೀಲನೆ ನಡೆಸಿದರು.
ಇನ್ನು ಕಾರವಾರ ಡಿಪೋವನ್ನು ನೂತನವಾಗಿ ನಿರ್ಮಿಸಲು ಸರ್ಕಾರದಿಂದ ಮೊದಲ ಹಂತವಾಗಿ ₹4 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಕಾಮಗಾರಿಯೂ ಆರಂಭವಾಗಿದೆ. ಮೊದಲು ಬಸ್ ರಿಪೇರಿ ಶೆಡ್ ಕಾಮಗಾರಿ ಕೈಗೊಳ್ಳಬೇಕಿದ್ದು, ಆಡಳಿತ ಕಚೇರಿ ಕಟ್ಟಡದ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಜೂನ್ ವೇಳೆಗೆ ಮುಕ್ತಾಯಗೊಳ್ಳಬೇಕಿದ್ದ ಕಾಮಗಾರಿ ಕಾರಣಾಂತರಗಳಿಂದ ಇದುವರೆಗೂ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಕ್ಕೆ ಸೂಚನೆ ನೀಡುವುದಾಗಿ ತಿಳಿಸಿದರು.
ಕೆಎಸ್ಆರ್ಟಿಸಿ ಡಿಸಿ ಬಸವರಾಜ ಹಮ್ಮಣ್ಣನವರ್, ತಹಶೀಲ್ದಾರ್ ಎನ್.ಎಸ್. ನರೋನಾ, ನಗರಸಭೆ ಆಯುಕ್ತರಾದ ಜಗದೀಶ ಹುಲಿಗೆಜ್ಜಿ ಸೇರಿ ಹಲವರು ಇದ್ದರು.