ಕಾಸರಗೋಡು: ಶಾಲಾ ಕಲೋತ್ಸವದಲ್ಲಿ ಕನ್ನಡವೇ ಇಲ್ಲ!

KannadaprabhaNewsNetwork |  
Published : Dec 02, 2024, 01:16 AM IST
ಕೇವಲ ಒಂದೇ ಒಂದು ಬೋರ್ಡ್‌ನಲ್ಲಿ ಕನ್ನಡದ ಪದಬಳಕೆ ಮಾಡಿರುವುದು.  | Kannada Prabha

ಸಾರಾಂಶ

ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ ಮತ್ತೆ ಮುಂದುವರಿದಿದೆ. ಕಾಸರಗೋಡಿನ ಹೊಸದುರ್ಗದ ಉದಿನೂರಿನಲ್ಲಿ ನಡೆದ 3 ದಿನಗಳ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ ಮತ್ತೆ ಮುಂದುವರಿದಿದೆ. ಕಾಸರಗೋಡಿನ ಹೊಸದುರ್ಗದ ಉದಿನೂರಿನಲ್ಲಿ ನಡೆದ 3 ದಿನಗಳ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈಗಾಗಲೇ ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರ ನೇಮಕ, ಕಚೇರಿಗಳಲ್ಲಿ ಕನ್ನಡ ಬದಲು ಮಲಯಾಳಿ ಭಾಷೆಯಲ್ಲಿ ಕಡತ ವಿಲೇವಾರಿ ಮಾಡುತ್ತಿರುವ ಆರೋಪಗಳು ವ್ಯಕ್ತವಾಗುತ್ತಿರುವ ನಡುವೆಯೇ ಈಗ ಕಲೋತ್ಸವಗಳಲ್ಲೂ ಕನ್ನಡದ ಕಡೆಗಣನೆ ಆರೋಪ ಸೇರ್ಪಡೆಯಾಗಿದೆ.

ಒಟ್ಟು 12 ವೇದಿಕೆಗಳಲ್ಲಿ ಕಾರ್ಯಕ್ರಮಗಳು ನಡೆದಿದ್ದು, ಯಾವುದೇ ವೇದಿಕೆಯಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಸ್ಥಾಪಿಸಿರಲಿಲ್ಲ. ಕನ್ನಡದ ಸ್ಪರ್ಧೆ ನಡೆಯುವ ಕೇವಲ ಒಂದೆಡೆ ಮಾತ್ರ ವೇದಿಕೆ ಸಮೀಪ ‘ಪ್ಲಾಸ್ಟಿಕ್ ಮುಕ್ತ ಆವರಣವೇ ಉದಿನೂರಿಗೆ ಸ್ವರ್ಣಾಭರಣ’ ಎಂದು ಬರೆದಿರುವುದನ್ನು ಹೊರತುಪಡಿಸಿದರೆ, ಬೇರೆಲ್ಲೂ ಕನ್ನಡ ಭಾಷೆ ಕಂಡುಬಂದಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಕಾಸರಗೋಡು ಜಿಲ್ಲೆಯ ಒಟ್ಟು 7 ಉಪ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಈ ಪೈಕಿ ಕಾಸರಗೋಡು, ಕುಂಬಳೆ, ಮಂಜೇಶ್ವರ ಉಪಜಿಲ್ಲೆಗಳಿಂದ ಭಾಗವಹಿಸುವ ವಿದ್ಯಾರ್ಥಿಗಳ ಪೈಕಿ ಬಹುಪಾಲು ಕನ್ನಡ ಭಾಷಿಕ ಮಕ್ಕಳೇ ಆಗಿದ್ದಾರೆ. ಹಾಗಿರುವಾಗ ಯಾವುದಾದರೂ ವೇದಿಕೆಗೆ ಕನ್ನಡ ಭಾಷೆಯಲ್ಲಿ ಹೆಸರಿಡಲು ಅಥವಾ ಸೂಚನೆಗಳನ್ನು ಮಲೆಯಾಳಂ ಜತೆಗೆ ಕನ್ನಡದಲ್ಲೂ ಬರೆಯಲು ಸಂಬಂಧಪಟ್ಟವರು ಆಸಕ್ತಿ ವಹಿಸಿಲ್ಲ ಎಂಬುದು ಕನ್ನಡಿಗರ ಆರೋಪ.

ಮಕ್ಕಳ ಹಕ್ಕು ಆಯೋಗಕ್ಕೂ ದೂರು:

2 ವರ್ಷಗಳ ಹಿಂದೆ ಕನ್ನಡದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡದ ಕಾರಣ ಕನ್ನಡ ಅಧ್ಯಾಪಕರ ಸಂಘಟನೆ ನೇತೃತ್ವದಲ್ಲಿ ಕೇರಳದ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿತ್ತು. ಆಯೋಗದ ಅಧ್ಯಕ್ಷರು ಜಿಲ್ಲಾ ವಿದ್ಯಾಂಗ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ನಡೆಸಿದ್ದರು. ಬಳಿಕ ಅಲ್ಪಸಂಖ್ಯಾತರಾಗಿರುವ ಕನ್ನಡಿಗರಿಗೆ ಕನ್ನಡದಲ್ಲೇ ಕಾರ್ಯಕ್ರಮ ನಡೆಸಲು ಅವಕಾಶ ನೀಡಬೇಕು. ಈ ಬಗ್ಗೆ ಯಾವುದೇ ಅಡ್ಡಿ ಆತಂಕ ಸಲ್ಲದು ಎಂದಿತ್ತು.

ರಾಜ್ಯ ಮಟ್ಟದ ಕಲೋತ್ಸವದಲ್ಲಿ ಕಾವ್ಯಾಲಾಪನೆ ಕಂಠಪಾಠ ಮತ್ತು ಕವಿತಾ ರಚನೆ ಈ 2 ವಿಭಾಗದಲ್ಲಿ ಮಾತ್ರ ಕನ್ನಡ ಭಾಷೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸೀಮಿತ ವಿಭಾಗದ ಯಾವುದೇ ಕಟ್ಟುಪಾಡು ಇಲ್ಲ. ಆದರೆ ಕಾಸರಗೋಡು ಹಾಗೂ ಮಂಜೇಶ್ವರ ಹೊರತುಪಡಿಸಿ ಬೇರೆ ಕಂದಾಯ ವಿಭಾಗಗಳಲ್ಲಿ ನಡೆಯುವ ಕಲೋತ್ಸವಗಳಲ್ಲಿ ಮಲಯಾಳಿ ಭಾಷೆಗೆ ಒತ್ತು ನೀಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಕನ್ನಡಿಗರ ಸಂಖ್ಯೆ ತೀರಾ ವಿರಳ. ಇದನ್ನೇ ವಿದ್ಯಾಂಗ ಇಲಾಖೆ ಅಧಿಕಾರಿಗಳು ಮಲಯಾಳಿ ಭಾಷೆ ಪ್ರಸರಣ ಉಪಯೋಗಕ್ಕೆ ಬಳಕೆ ಮಾಡುತ್ತವೆ ಎನ್ನುವುದು ಕನ್ನಡಿಗರ ಆರೋಪವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಯಿ ಕಟ್ಟಿ ಜಾತ್ರೆಗೆ ಚಾಲನೆ
ಇಸ್ಲಾಂ ಅಥ೯ ಮಾಡಿಕೊಂಡರೆ ಶ್ರೇಷ್ಠ ಮಾನವ