ಮಡಿಕೇರಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ರಾಜಕೀಯ ಭೇದ ಮರೆತು ಹೋರಾಟ ತೀವ್ರಗೊಳಿಸಲು ನಗರದ ಕ್ರಿಸ್ಟಲ್ ಕೋರ್ಟ ಹೋಟೆಲ್ನಲ್ಲಿ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಶುಕ್ರವಾರ ನಡೆದ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.ವರದಿಯಿಂದ ಪ್ರಭಾವಿತವಾಗಲಿರುವ ಹಳ್ಳಿಗಳಲ್ಲಿ ಹಂತ ಹಂತವಾಗಿ ಗ್ರಾಮಸಭೆ ಆಯೋಜಿಸಿ, ರೈತರು ಮತ್ತು ಸ್ಥಳೀಯ ನಿವಾಸಿಗಳಿಂದ ಲಿಖಿತ ಆಕ್ಷೇಪಣೆ ಪಡೆಯುವುದು ಹಾಗೂ ಅವುಗಳನ್ನು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ರವಾನಿಸಿ ಜಿಲ್ಲೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡುವುದು ಸಭೆಯ ಪ್ರಮುಖ ತೀರ್ಮಾನವಾಗಿದೆ.
ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ವರದಿ ಬಾಧಿತ ೫೩ ಹಳ್ಳಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸುವಂತೆ ಆಡಳಿತಕ್ಕೆ ಸೂಚಿಸಲಾಗುವುದು. ವರದಿಯನ್ನು ಸಂಪೂರ್ಣ ತಿರಸ್ಕರಿಸಬೇಕೆಂಬುದೇ ತಮ್ಮ ನಿಲುವು ಎಂದರು.
ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೇರಳ ಮಾದರಿಯಲ್ಲಿ ಕೊಡಗಿನಲ್ಲೂ ವೈಜ್ಞಾನಿಕವಾಗಿ ಭೌತಿಕ ಸರ್ವೆ ನಡೆಸಿದರೆ ಸೂಕ್ಷ್ಮ ವಲಯದ ವ್ಯಾಪ್ತಿ ಕಡಿಮೆಯಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಬಲವಾಗಿ ಪ್ರಸ್ತಾಪಿಸುವಂತೆ ಶಾಸಕರಿಗೆ ಮನವಿ ಮಾಡಿದರು.ಸಮಿತಿ ಅಧ್ಯಕ್ಷ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರ ಭೇಟಿಗೆ ದಿನಾಂಕ ನಿಗದಿಪಡಿಸಲಾಗುವುದು. ಸಿ ಮತ್ತು ಡಿ ಜಮೀನು ಹಾಗೂ ಸೆಕ್ಷನ್ ೪ ಸಮಸ್ಯೆಗಳನ್ನೂ ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುವುದು. ಅರಣ್ಯ ಇಲಾಖೆಗಿಂತ ಪರಿಸರವಾದಿಗಳ ಹಸ್ತಕ್ಷೇಪದಿಂದಲೇ ರೈತರಿಗೆ ಹೆಚ್ಚಿನ ತೊಂದರೆ ಆಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.