ಉಡುಪಿ: ಕೇಂದ್ರ ಸರ್ಕಾರದ ಜಾರಿಗೊಳಿಸಿರುವ ಕಸ್ತೂರಿರಂಗನ್ ವರದಿಯ ಅಧಿಸೂಚನೆಯಿಂದ ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಉಂಟಾಗಿರುವ ಆತಂಕವನ್ನು ಆಲಿಸಲು ಖುದ್ದು ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 18ರಂದು ಹೆಬ್ರಿಗೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಹೇಳಿದರು.
ಮುಖ್ಯಮಂತ್ರಿ ಅವರ ಜನ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಾದಿತ ಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಭೂಹಕ್ಕಿನ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಮುನಿಯಾಲು ಮನವಿ ಮಾಡಿದರು.ತುಳು ಭಾಷಾ ಮಾನ್ಯತೆ ಬೇಡಿಕೆ: ಅಲ್ಲದೇ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಹಾಗೂ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು, ತುಳು ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉದ್ಯೋಗಾವಕಾಶ ಹೆಚ್ಚಿಸಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಎಂಬ ಬೇಡಿಕೆಗಳನ್ನೂ ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.
ಕರಾವಳಿಯ ಬಂದರು, ವಿಮಾನ ನಿಲ್ದಾಣ, ರೈಲು ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಇರುವ ಮೂಲಸೌಕರ್ಯವನ್ನು ಬಳಸಿಕೊಂಡು ಕರಾವಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆಯೊಂದನ್ನು ರೂಪಿಸಬೇಕು ಎಂದೂ ಒತ್ತಾಯಿಸಲಾಗುತ್ತದೆ ಎಂದವರು ಹೇಳಿದರು.ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾಂಗ್ರೆಸ್ ಮುಖಂಡರಾದ ಪ್ರದೀಪ್ ಬೇಲಾಡಿ, ಭಾನು ಭಾಸ್ಕರ್ ಪೂಜಾರಿ, ಅಜಿತ್ ಹೆಗ್ಡೆ, ಅನಿಲ್ ಪೂಜಾರಿ ಮಾಳ, ಯೋಗೀಶ, ನಯನಾ ಇನ್ನಾ ಉಪಸ್ಥಿತರಿದ್ದರು.