ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ: ಗೃಹ ಸಚಿವ ಡಾ.ಜಿ.ಪಮೇಶ್ವರ್‌

KannadaprabhaNewsNetwork |  
Published : Oct 27, 2024, 02:34 AM IST
ಪೊಟೋ: 26ಎಸ್‌ಎಂಜಿಕೆಪಿ09ಶಿವಮೊಗ್ಗ ನಗರದ ಡಿ.ಆರ್‌.ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಶಿವಮೊಗ್ಗ ಜಿಲ್ಲಾ ವಿಮರ್ಶನಾ ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿದರು. | Kannada Prabha

ಸಾರಾಂಶ

ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಪೊಲೀಸರಿಗೆ ತಾಕೀತು ಮಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಪೊಲೀಸರಿಗೆ ತಾಕೀತು ಮಾಡಿದರು.

ನಗರದಲ್ಲಿ ಪೊಲೀಸ್ ಇಲಾಖೆಯು ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ಭವನವನ್ನು ಉದ್ಘಾಟಿಸಿದ ಬಳಿಕ ಶಿವಮೊಗ್ಗ ಜಿಲ್ಲಾ ವಿಮರ್ಶನಾ ಸಭೆಯಲ್ಲಿ ಅವರು ಮಾತನಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮಕ್ಕಳ ಓದಿಗಾಗಿ ಗ್ರಂಥಾಲಯಗಳಲ್ಲಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವರಿಗೆ ವಿವಿಧ ವಿಷಯಗಳ ಅವಶ್ಯಕ ಪುಸ್ತಕಗಳನ್ನು ಒದಗಿಸಿ. ಪೊಲೀಸ್ ಇಲಾಖೆ ಸರ್ಕಾರದ ಮುಖ. ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಿ, ಅಪರಾಧ ಪ್ರಕರಣಗಳನ್ನು ನಿಯಂತ್ರಣಕ್ಕೆ ತಂದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಇಲಾಖೆಯ ಮೇಲೆ ಹೆಚ್ಚು ಜವಾಬ್ಧಾರಿ ಇದೆ ಎಂದು ತಿಳಿಸಿದರು.

ಬಡವರ ಪರ ಸರ್ಕಾರ ನಮ್ಮದು.‌ ಸಮಾಜದಲ್ಲಿ ಬಡವರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲಸವಾಗಬೇಕು. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ‌ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆ ಇದೆ. ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿ, ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕು. ಶಿಕ್ಷೆ ಆಗುವ ನಿಟ್ಟಿ‌ಲ್ಲಿ ಕೆಲಸ‌ ಮಾಡಬೇಕು. ಕೊಪ್ಪಳದಲ್ಲಿ ನಡೆದಿದ್ದ ಘಟನೆಯಲ್ಲಿ ಒಂದೇ ಪ್ರಕರಣದಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯಾಗಿರುವ ಪ್ರಕರಣವನ್ನು ಮಾದರಿಯಾಗಿ ತೆಗೆದುಕೊಂಡು ಕರ್ತವ್ಯನಿರ್ವಹಿಸಿ ಎಂದರು.

ಬಹುತೇಕ ಪ್ರಕರಣಗಳು ಬಂದಾಗ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಪೊಲೀಸರು ದೂರುಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಿತಿದಿನ ಸಾರ್ವಜನಿಕರು ನನ್ನ ಬಳಿಗೆ ದೂರು ತೆಗೆದುಕೊಂಡು ಬರುತ್ತಿದ್ದಾರೆ. ಇದು ಮುಂದುವರಿದರೆ ಸಹಿಸುವುದಿಲ್ಲ. ಠಾಣೆಗೆ ಬರುವ ಜನರ ಸಮಸ್ಯೆಗಳನ್ನು ಆಲಿಸಿ, ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಶಿವಮೊಗ್ಗ ಪ್ರವಾಸದ್ಯೋಮ ಜಿಲ್ಲೆಯಾಗಿರುವುದರಿಂದ ಸಾಕಷ್ಟು ಜನರು ವಿವಿಧೆಡೆಯಿಂದ ಪ್ರವಾಸಕ್ಕೆ ಬರುತ್ತಾರೆ. ಕಿಡಿಗೇಡಿಗಳು ಪ್ರವಾಸಿಗರಿಗೆ ತೊಂದರೆ ಉಂಟು ಮಾಡುತ್ತಿರುತ್ತಾರೆ. ಈ ಬಗ್ಗೆ ಹೆಚ್ಚು ನಿಗಾವಹಿಸಿ ಬಿಸಿ ಮುಟ್ಟಿಸಬೇಕು. ವಿವಿಧ ಆಚರಣೆಗಳ ಸಂದರ್ಭದಲ್ಲಿ ವಿವಾದಾತ್ಮಕ ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುತ್ತಿದ್ದಾರೆ.‌ ಈ ಬಗ್ಗೆ ನಿಗಾವಹಿಸಬೇಕು. ಸಂಬಂಧಪಟ್ಟವರಿಗೆ ಎಚ್ಚರಿಸಿ ಕ್ರಮ ತೆಗೆದುಕೊಂಡರೆ ವಿವಾದಗಳು ಸೃಷ್ಟಿಯಾಗುವುದಿಲ್ಲ ಎಂದು ತಿಳಿಸಿದರು.ಸೈಬರ್ ಕ್ರೈಂ, ಡ್ರಗ್ಸ್ ಪ್ರಕರಣಗಳು ಪೊಲೀಸ್ ಇಲಾಖೆಗೆ ಸವಲಾಗಿ ಪರಿಣಮಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಿಬ್ಬಂದಿಗಳನ್ನು ನೀಡಿ ಸಿಇಎನ್ ಠಾಣೆಗಳ ಬಲವರ್ಧಿಸಲಾಗುವುದು. ಮಾದಕ ದ್ರವ್ಯ ವ್ಯಸನಿಗಳು ಸಿಂಥೆಟಿಕ್ ಡ್ರಗ್ ಮೊರೆ ಹೋಗುತ್ತಿದ್ದಾರೆ. ಮೆಡಿಕಲ್‌ಗಳಲ್ಲಿ ಸಿಗುವ ಕೆಲ ಮಾತ್ರೆಗಳನ್ನು ಬಳಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕಿದೆ. ಅಂತಹ ಔಷಧಗಳನ್ನು ವೈದ್ಯರ ಸಲಹೆ ಇಲ್ಲದೆ ಮಾರಾಟ ಮಾರಾಟಬಾರದು‌ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ, ಎಸ್.ಎನ್.ಚೆನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯರಾದ ಬಲ್ಕೀಶ್ ಭಾನು, ಡಿ.ಎಸ್.ಅರುಣ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಅವರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ