ಶಿವಮೊಗ್ಗ: ನಾಡಪ್ರಭು ಕೆಂಪೇಗೌಡರು ತಮ್ಮ ದೂರದೃಷ್ಟಿ ಮತ್ತು ಸಾಮೂಹಿಕ ಆಲೋಚನೆಯ ಮೂಲಕ ರಾಜ್ಯವನ್ನು ಕಟ್ಟುವ ಮತ್ತು ಅಭಿವೃದ್ಧಿಪಡಿಸುವ ಉತ್ತಮ ಮಾದರಿಯನ್ನು ನೀಡಿದ್ದು, ನಾವೆಲ್ಲರೂ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.ನಗರದ ಕುವೆಂಪು ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ 516ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೆಂಪೇಗೌಡರು ನಾಗರಿಕ ಸಮಾಜಕ್ಕೆ ಏನು ಬೇಕು, ಏನು ಬೇಡ ಎಂಬುದನ್ನು ಅರಿತ್ತಿದ್ದರು. ಆ ದೃಷ್ಟಿಯಿಂದ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದರು. ನಾಗರಿಕರಿಗೆ ಅನುಕೂಲ ಮಾಡಿಕೊಟ್ಟರು. ಕೆಂಪೇಗೌಡರು ರಾಜ್ಯದ ನಾಗರಿಕರಲ್ಲಿ ಸಾಮಾಜಿಕ ಸಾಮರಸ್ಯದ ಆಲೋಚನೆಯನ್ನು ಮೂಡಿಸಿದ್ದರು. ಇಂತಹ ಮಹನೀಯರ ಜೀವನ ಶೈಲಿಯನ್ನು ವರ್ತಮಾನದಲ್ಲಿ ನಾವೆಲ್ಲಾ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಕೆಂಪೇಗೌಡರು ನಡೆಸಿದ ಉತ್ತಮ ಆಡಳಿತ ಈಗಿನ ಜನಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ, ತಾಲೂಕು ಒಕ್ಕಲಿಗ ಸಂಘದ ಎ.ಎಸ್.ಚಂದ್ರಕಾಂತ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಭೂಮರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಉಮೇಶ್ ಉಪಸ್ಥಿತರಿದ್ದರು.