ಕನ್ನಡಪ್ರಭ ವಾರ್ತೆ ನವದೆಹಲಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಲು ಬೀದರ್ ಶಾಸಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ದೆಹಲಿಯಲ್ಲಿ ಬುಧವಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸದಲ್ಲಿ ಈ ಮಾತುಕತೆ ನಡೆಯಿತು.ಭೇಟಿ ಬಳಿಕ, ಸುದ್ದಿಗಾರರ ಜೊತೆ ಮಾತನಾಡಿದ ಖೂಬಾ, ನನಗೆ ಬೀದರ್ನಿಂದ ಟಿಕೆಟ್ ನೀಡಲು ಶಾಸಕರ ವಿರೋಧ ಇಲ್ಲ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ. ಎಲ್ಲಾ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಾಗಿದೆ. ಆದರೆ, ನನಗೆ ಟಿಕೆಟ್ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಟಿಕೆಟ್ ವಿಚಾರಕ್ಕೆ ಸಂಬಂಧಪಟ್ಟಂತೆಯೂ ಯಡಿಯೂರಪ್ಪ ಜೊತೆ ಚರ್ಚೆ ಮಾಡಿದ್ದೇನೆ ಎಂದರು.ಬೆಂಗಳೂರು ಗ್ರಾಮಾಂತರಕ್ಕೆ ಅಭ್ಯರ್ಥಿ ಕೊರತೆ ಇಲ್ಲ: ಸಿ.ಪಿ.ಯೋಗೇಶ್ವರ್ಬೆಂಗಳೂರು ಗ್ರಾಮಾಂತರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಬಿಜೆಪಿಯಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ. ಅಶ್ವಥ್ ನಾರಾಯಣ್ ಅವರು ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದ್ದವರು. ಇನ್ನು, ಆರ್. ಅಶೋಕ್ ಅವರು ಪ್ರತಿಪಕ್ಷದ ನಾಯಕರು, ಅವರು ಕೂಡ ಸ್ಪರ್ಧಿಸಲು ಸಮರ್ಥರಿದ್ದಾರೆ ಎಂದರು. ಮಂಗಳವಾರದ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಎರಡು ದಿನಗಳಲ್ಲಿ ಅಭ್ಯರ್ಥಿ ಯಾರು ಎಂಬುದು ಗೊತ್ತಾಗಲಿದೆ. ನಾನು, ಮಂಜುನಾಥ್ ಅವರನ್ನು ಒಪ್ಪಿಸುವ ಕೆಲಸ ಮಾಡಿದ್ದೇನೆ. ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕು. ಮುಂಬರುವ ಲೋಕಸಭಾ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕರಿಸಿದ್ದೇವೆ ಎಂದರು. ತಮ್ಮ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿ, ‘ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಅಂತ ಅನ್ಕೊಂಡಿದ್ದೀನಿ. ಅಂತಿಮವಾಗಿ ಪಕ್ಷದ ನಾಯಕರು ಏನು ತೀರ್ಮಾನ ಮಾಡುತ್ತಾರೆಯೋ ಅದಕ್ಕೆ ಬದ್ಧ’ ಎಂದರು.