91 ಶಾಲೆಗಳ ಪ್ರದರ್ಶನದಲ್ಲಿ 2805 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗಿ
ಇಲ್ಲಿನ ಯಕ್ಷಶಿಕ್ಷಣ ಟ್ರಸ್ಟ್ ನ.23ರಂದು ಬ್ರಹ್ಮಾವರದಲ್ಲಿ ಆರಂಭಿಸಿದ ಕಿಶೋರ ಯಕ್ಷಗಾನ ಸಂಭ್ರಮವು ಜ.3ರಂದು ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಕ್ತಾಯಗೊಂಡಿತು. ಈ 42 ದಿನಗಳ ಕಾಲ, 11 ಕಡೆಗಳಲ್ಲಿ ನಡೆದ 91 ಶಾಲೆಗಳ ಪ್ರದರ್ಶನದಲ್ಲಿ 2805 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಇದೊಂದು ಸಮಷ್ಟಿ ಪ್ರಯತ್ನ, ಇದರ ಯಶಸ್ಸಿನಲ್ಲಿ ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ನೊಂದಿಗೆ ಯಕ್ಷಗಾನ ಕಲಾರಂಗದ ಕಾರ್ಯಕರ್ತರ ನಿಸ್ವಾರ್ಥ ದುಡಿಮೆ ಗಮನಾರ್ಹ. ಮುಂದೆಯೂ ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಪಾಲಕರು ಸಹಕರಿಸಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆ ಉಪಾಧ್ಯಕ್ಷೆ ವನಿತಾ ಎಸ್. ಬಿಲ್ಲವ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರದ ಅಧ್ಯಕ್ಷ ಡಾ. ನಾಗೇಶ್, ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ಉದ್ಯಮಿ ವಾಸುದೇವ ಹಂದೆ, ಗುತ್ತಿಗೆದಾರ ಸೂರ್ಯಕಾಂತ್ ದಪೇದಾರ್, ಕುಂದಾಪುರ ಅಮೆಚೂರು ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ವಿಠಲವಾಡಿಯ ಗುಣರತ್ನ ರಾಮ ಪೂಜಾರಿ ಅಭ್ಯಾಗತರಾಗಿ ಭಾಗವಹಿಸಿದ್ದರು.
ಯಕ್ಷಗಾನ ಕಲಾರಂಗದ ಟ್ರಸ್ಟಿಗಳಾದ ಯು.ಎಸ್. ರಾಜಗೋಪಾಲ ಆಚಾರ್ಯ, ಎಸ್.ವಿ. ಭಟ್, ಎಚ್.ಎನ್. ಶೃಂಗೇಶ್ವರ, ಗಣೇಶ ಬ್ರಹ್ಮಾವರ, ನಾಗರಾಜ ಹೆಗಡೆ ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು.