ಗದಗ: ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸುಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಕಿಟ್ ವಿತರಣೆ ಹಾಗೂ ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಸಮಾರಂಭವು ಜು. 6ರಂದು ಮಧ್ಯಾಹ್ನ 1ಕ್ಕೆ ನಗರದ ಶ್ರೀಕನಕ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಳಿದಾಸ, ಸಂಗೊಳ್ಳಿ ರಾಯಣ್ಣ ವಿದ್ಯಾರ್ಥಿ ನಿಲಯದ ಹಳೆ ವಿದ್ಯಾರ್ಥಿಗಳ ಸಂಘ ಬೆಂಗಳೂರ, ಕರ್ನಾಟಕ ಪ್ರದೇಶ ಕುರುಬರ ಸಂಘ ಗದಗ ಜಿಲ್ಲಾ ಶಾಖೆ, ರಾಕೇಶ ಸಿದ್ದರಾಮಯ್ಯ ಟ್ರಸ್ಟ ಗದಗ, ಕಾಳಿದಾಸ ಶಿಕ್ಷಣ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಕಾರ್ಯಕ್ರಮ ನಡೆಯಲಿದೆ ಎಂದರು. ಸಮಾರಂಭದಲ್ಲಿ 2023-24 ಮತ್ತು 2024-25ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಒಟ್ಟು 30 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ, 2023-24 ಮತ್ತು 2024-25ನೇ ಸಾಲಿನ ದ್ವಿತೀಯ ಪಿಯುಸಿ 75% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ, 2023-24 ಮತ್ತು 2024-25ನೇ ಸಾಲಿನ ಎಸ್ಎಸ್ಎಲ್ಸಿ 75% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಣೆ ಸೇರಿದಂತೆ ಒಟ್ಟು 300ಕ್ಕೂ ಹೆಚ್ಚು ಸಮಾಜದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.ಸ್ವತಂತ್ರ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸುಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಆಯ್ದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಬ್ಯೂಟೀಷಿಯನ್ ಕಿಟ್, ಕೌಶಲ್ಯಾಧಾರಿತ ಕಿಟ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.ಕಾರ್ಯಕ್ರಮವನ್ನು ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸುವರು. ಹಿರಿಯ ಮಾಜಿ ಶಾಸಕ ಡಿ.ಆರ್. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಪ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಬಿ.ಆರ್.ಯಾವಗಲ್, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಯುವ ಧುರೀಣ ಕೃಷ್ಣಗೌಡ ಪಾಟೀಲ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ನಟರಾಜ.ಜಿ.ಆರ್., ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ರಾಜ್ಯ ಸಂಘದ ನಿರ್ದೇಶಕರಾದ ಕಳಕನಗೌಡ ಗೌಡರ, ಚನ್ನಮ್ಮ ಹುಳಕಣ್ಣವರ ಸೇರಿದಂತೆ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಮಾಜದ ಗಣ್ಯ ಅಧಿಕಾರಿಗಳು ಉಪಸ್ಥಿತರಿರುವರು ಎಂದರು.ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಭಾವಿಕಟ್ಟಿ, ವೈ.ಡಿ. ಗುರಿಕಾರ, ಆರ್.ಎಂ. ನಿಂಬನಾಯ್ಕರ, ನಾಗಪ್ಪ ಗುಗ್ಗರಿ, ರಾಮಕೃಷ್ಣ ರೊಳ್ಳಿ, ನೀಲಕಂಠ ಮರಡಿ, ಶಿವಣ್ಣ ಸಿಂಗಟಾಲಕೇರಿ, ವೈ.ಡಿ. ಜಡದೆಲಿ, ಕೆ.ಬಿ. ಕಂಬಳಿ, ಎಸ್.ಎಸ್. ಕರಡಿ, ಬಿ.ಎಚ್. ಹ್ಯಾಟಿ, ಚನ್ನಮ್ಮ ಹುಳಕಣ್ಣವರ, ರೇಖಾ ಜಡಿ, ರವಿ ಹುಡೇದ, ಕುಮಾರ ಮಾರನಬಸರಿ, ರಾಮು ಜಡಿ ಸೇರಿದಂತೆ ಮುಂತಾದವರು ಉಪಸ್ಥಿರಿದ್ದರು.