ಹರಪನಹಳ್ಳಿ: ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರ ಸಬಲೀಕರಣದ ಸಂಕೇತದಿಂದ ಗುರುತಿಸಲ್ಪಡುತ್ತಾರೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ ಹೇಳಿದ್ದಾರೆ.ಅವರು ಪಟ್ಟಣದ ತಾಪಂ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಗುರುವಾರ ಮಾತನಾಡಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಅನೇಕ ಮಹನೀಯರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು. ಆ ರೀತಿ ಜಾತಿಗೆ ಸೀಮಿತಗೊಳಿಸಿದರೆ ನಾವು ಸಣ್ಣತನಕ್ಕೆ ಇಳಿದಂತಾಗುತ್ತದೆ ಎಂದರು.
ವೀರಶೈವ ಲಿಂಗಾಯುತ ಪಂಚಮಸಾಲಿ ಸಂಘದ ತಾಲೂಕು ಘಟಕದ ಅಧ್ಯಕ್ಷ ಪಟೇಲ್ ಬೆಟ್ಟನಮಗೌಡ ಮಾತನಾಡಿ ರಾಣಿ ಚೆನ್ನಮ್ಮ ಮಹಿಳೆಯರಿಗೆ ಸಮಾನತೆಯ ಸಂದೇಶ ನೀಡಿದರು, ಅವರ ಒಳ್ಳೆಯ ವಿಚಾರ, ಸಾಧನೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.ಹರಪನಹಳ್ಳಿ ಪಟ್ಟಣದಲ್ಲಿ ಯಾವುದಾದರೂ ಒಂದು ವೃತ್ತಕ್ಕೆ ಕಿತ್ತೂರು ರಾಣಿ ಚೆನ್ನಮ್ಮನ ಹೆಸರನ್ನು ನಾಮಕರಣ ಮಾಡಬೇಕೆಂದು ಮನವಿ ಮಾಡಿದರು.
ಉಪನ್ಯಾಸ ನೀಡಿದ ಶಿಕ್ಷಕ ಬಸವರಾಜ ಕುರುವಿನ ಅವರು ಭಾರತದ ಇತಿಹಾಸದಲ್ಲಿ ಯಾವುದೇ ಒಪ್ಪಂದವಿಲ್ಲದೆ ಮೊಟ್ಟ ಮೊದಲ ಬಾರಿಗೆ ಬ್ರಿಟೀಷರನ್ನು ಸೋಲಿಸಿದ್ದು ಕಿತ್ತೂರು ರಾಣಿ ಚೆನ್ನಮ್ಮನವರು, ಅವರ ಆದರ್ಶಗಳು ಎಂದೆಂದಿಗೂ ಪ್ರಸ್ತುತ ಎಂದು ನುಡಿದರು.