ಸೆಪ್ಟಂಬರ್‌ 19ರಂದು ಕೆಎಲ್‌ಇ ವೈದ್ಯಕೀಯ ಮಹಾ ಕ್ಯಾಂಪಸ್‌ ಲೋಕಾರ್ಪಣೆ

KannadaprabhaNewsNetwork |  
Published : Sep 17, 2026, 02:00 AM IST
ಹುಬ್ಬಳ್ಳಿ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ ಕೆಎಲ್‌ಇ ಜೆಜಿಎಂಎಂಎಂಸಿ ಕಾಲೇಜಿನಲ್ಲಿನ ವೈದ್ಯಕೀಯ ಸೌಲಭ್ಯಗಳ ಕುರಿತು ಡಾ. ಪ್ರಭಾಕರ ಬಿ. ಕೋರೆ ಮಾಹಿತಿ ಪಡೆದುಕೊಂಡರು. | Kannada Prabha

ಸಾರಾಂಶ

ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ಕೆಎಲ್‌ಇ ಜ. ಗಂಗಾಧರ ಮಹಾಸ್ವಾಮೀಜಿ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ (ಜೆಜಿಎಂಎಂಎಂಸಿ) ಮತ್ತು 1,200 ಹಾಸಿಗೆಗಳ ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ (ಕೆಎಲ್‌ಇ-ಎಚ್‌ಎಂಆರ್‌ಸಿ)ದ ಲೋಕಾರ್ಪಣೆ ಕಾರ್ಯಕ್ರಮ ಸೆ. 19ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಹುಬ್ಬಳ್ಳಿ:

ಉತ್ತರ ಕರ್ನಾಟಕದ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವಾ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ಇಲ್ಲಿನ ಗಬ್ಬೂರು ಕ್ರಾಸ್‌ನಲ್ಲಿ ಕೆಎಲ್‌ಇ ಜ. ಗಂಗಾಧರ ಮಹಾಸ್ವಾಮೀಜಿ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ (ಜೆಜಿಎಂಎಂಎಂಸಿ) ಮತ್ತು 1,200 ಹಾಸಿಗೆಗಳ ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ (ಕೆಎಲ್‌ಇ-ಎಚ್‌ಎಂಆರ್‌ಸಿ)ದ ಲೋಕಾರ್ಪಣೆ ಕಾರ್ಯಕ್ರಮ ಸೆ. 19ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉದ್ಘಾಟಿಸಲಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್‌ ಕುಲಪತಿ ಡಾ. ಪ್ರಭಾಕರ ಕೋರೆ, ಅಂದಿನ ಕಾರ್ಯಕ್ರಮಕ್ಕೆ ಮೂರುಸಾವಿರಮಠದ ಜ. ಗುರುಸಿದ್ದ ರಾಜಯೋಗೀಂದ್ರ ಶ್ರೀ ಸಾನ್ನಿಧ್ಯ ವಹಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಂಸದರಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಎಂ.ಆರ್‌. ಪಾಟೀಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

50 ಎಕರೆ ವಿಸ್ತೀರ್ಣ, 30 ಲಕ್ಷ ಚದರ ಅಡಿಗೂ ಅಧಿಕ ನಿರ್ಮಿತ ಪ್ರದೇಶ ಹಾಗೂ ಸುಮಾರು ₹700 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕ್ಯಾಂಪಸ್‌, ಕೇವಲ ವೈದ್ಯಕೀಯ ಕಾಲೇಜು ಅಥವಾ ಬೋಧನಾ ಆಸ್ಪತ್ರೆಯಾಗಿರದೆ, ವೈದ್ಯಕೀಯ ಶಿಕ್ಷಣ, ಅತ್ಯಾಧುನಿಕ ಚಿಕಿತ್ಸೆ, ಸಂಶೋಧನೆ, ತಂತ್ರಜ್ಞಾನ ಮತ್ತು ಸಮುದಾಯ ಸೇವೆಗಳನ್ನು ಒಂದೇ ಸೂರಿನಡಿ ಒಗ್ಗೂಡಿಸುವ ಸಮಗ್ರ ಶೈಕ್ಷಣಿಕ ವೈದ್ಯಕೀಯ ಕೇಂದ್ರವಾಗಿ ರೂಪುಗೊಂಡಿದೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂಬ ಮೂರುಸಾವಿರಮಠದ ಜಗದ್ಗುರುಗಳ ಆಶಯದ ಹಿನ್ನೆಲೆಯಲ್ಲಿ ದಾನವಾಗಿ ನೀಡಿದ ಭೂಮಿಯಲ್ಲಿ ಈ ಯೋಜನೆ ರೂಪುಗೊಂಡಿದೆ. ಹಲವು ಸವಾಲುಗಳ ನಡುವೆಯೂ ಕ್ಯಾಂಪಸ್‌ ನಿರ್ಮಾಣ ಪೂರ್ಣಗೊಂಡಿದ್ದು, ಇದೀಗ ವೈದ್ಯಕೀಯ ಶಿಕ್ಷಣ ಮತ್ತು ಚಿಕಿತ್ಸಾ ಸೇವೆಗೆ ಸಮರ್ಪಣೆಯಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಎಲ್‌ಇ ನಿರ್ದೇಶಕ ಮಂಡಳಿ ಸದಸ್ಯ ಶಂಕರಣ್ಣ ಮುನವಳ್ಳಿ, ಕೆಎಲ್‌ಇ ವಿವಿಯ ಕುಲಪತಿ ಡಾ. ಸಂದೀಪ ಶ್ರೀವಾಸ್ತವ್, ಬೆಳಗಾವಿ ಕೆಎಲ್‌ಇ ವಿವಿಯ ಕುಲಸಚಿವ ಡಾ. ವಿಶ್ವನಾಥ ಪಟ್ಟಣಶೆಟ್ಟಿ, ಮಂಜುನಾಥ ಮುನವಳ್ಳಿ, ಡಾ ವಿ.ಡಿ. ಪಾಟೀಲ, ಪ್ರಾಂಶುಪಾಲರಾದ ಬಾಬಾಜಿ ಕೆವಡೆ, ಡಾ. ಎಂ.ಜಿ. ಹಿರೇಮಠ, ಆಡಳಿತಾಧಿಕಾರಿ ಎಸ್‌.ಸಿ. ಧಾರವಾಡ ಸೇರಿದಂತೆ ಹಲವರಿದ್ದರು.₹700 ಕೋಟಿ ವೆಚ್ಚದ ವೈದ್ಯಕೀಯ ಕ್ಯಾಂಪಸ್‌: ಡಾ. ಕೋರೆ

ಹುಬ್ಬಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಬೇಕು ಎಂಬ ಮೂರುಸಾವಿರಮಠದ ಜಗದ್ಗುರುಗಳ ಬಹುದಿನಗಳ ಆಶಯ ಇದೀಗ ಸಾಕಾರಗೊಂಡಿದೆ. ಇಲ್ಲಿನ ಗಬ್ಬೂರ ಕ್ರಾಸ್‌ ಬಳಿ ಶ್ರೀಗಳ ದಾನದಿಂದ ದೊರೆತ ಭೂಮಿಯಲ್ಲಿ 50 ಎಕರೆ ಪ್ರದೇಶದಲ್ಲಿ ಸುಮಾರು ₹700 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ 1,200 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಿದೆ ಎಂದು ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್‌ ಕುಲಪತಿ ಡಾ. ಪ್ರಭಾಕರ ಬಿ. ಕೋರೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ, ಸಂಶೋಧನೆ ಮತ್ತು ತಂತ್ರಜ್ಞಾನವನ್ನು ಸಮನ್ವಯಗೊಳಿಸಿ ಸಮಗ್ರ ಕ್ಯಾಂಪಸ್‌ ರೂಪಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಆಧುನಿಕ ತರಗತಿ ಕೊಠಡಿ, ಸಿಮ್ಯುಲೇಷನ್‌ ಮತ್ತು ಸ್ಕಿಲ್‌ ಲ್ಯಾಬ್‌, ಪ್ರಯೋಗಾಲಯ, ಗ್ರಂಥಾಲಯ ಹಾಗೂ ಡಿಜಿಟಲ್‌ ಕಲಿಕಾ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು ₹35 ಕೋಟಿ ವೆಚ್ಚದಲ್ಲಿ ಎಐ ಆಧಾರಿತ ಸ್ಕಿಲ್‌ ಲ್ಯಾಬ್‌ ನಿರ್ಮಿಸಲಾಗಿದೆ ಎಂದರು.

ಆಸ್ಪತ್ರೆ ಈಗಾಗಲೇ ಸೇವೆ ಆರಂಭಿಸಿದ್ದು, ದಿನಕ್ಕೆ ಸಾವಿರಕ್ಕೂ ಅಧಿಕ ಹೊರರೋಗಿಗಳು ಬರುತ್ತಿದ್ದಾರೆ. 200ಕ್ಕೂ ಅಧಿಕ ಹೆರಿಗೆಗಳು ನಡೆದಿವೆ. ಕಾರ್ಡಿಯಾಲಜಿ, ಆಂಕಾಲಜಿ, ಅಂಗಾಂಗ ಕಸಿ ಸೇರಿದಂತೆ ಸೂಪರ್‌ ಸ್ಪೆಷಾಲಿಟಿ ಸೇವೆಗಳನ್ನು ಹಂತ-ಹಂತವಾಗಿ ಆರಂಭಿಸಲಾಗುವುದು. ಆಸ್ಪತ್ರೆಯಲ್ಲಿ 300 ಹಾಸಿಗೆಗಳನ್ನು ಉಚಿತ ಚಿಕಿತ್ಸೆಗೆ ಮೀಸಲಿಡಲಾಗಿದೆ. ಹೊರರೋಗಿಗಳ ನೋಂದಣಿಗೆ ₹10 ಶುಲ್ಕ ನಿಗದಿಪಡಿಸಲಾಗಿದೆ ಎಂದು ಹೇಳಿದರು.ಪ್ರಸ್ತುತ ಸುಮಾರು 800 ಎಂಬಿಬಿಎಸ್‌ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪ್ರವೇಶ ಸಾಮರ್ಥ್ಯವನ್ನು 250ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ 20 ವಿಭಾಗಗಳಲ್ಲಿ ಸ್ನಾತಕೋತ್ತರ ಕೋರ್ಸ್‌ ಆರಂಭಿಸಲು ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್‌ಎಸ್‌ಎಸ್‌ ಎಂದರೆ ಗೃಹಮಂತ್ರಿಗೆ ಚೇಳು ಕಡಿದಂಗಾಗುತ್ತೆ
ಮಳೆಗಾಲದಲ್ಲೇ ಬರಿದಾಗುತ್ತಿದೆ ಐತಿಹಾಸಿಕ ಭೀಷ್ಮ ಕೆರೆ!