ಜ್ಞಾನವೇ ವ್ಯಕ್ತಿಯ ನಿಜವಾದ ಆಸ್ತಿ: ಸುಬ್ರಮಣ್ಯ ಎಚ್.ಎನ್.

KannadaprabhaNewsNetwork |  
Published : May 17, 2026, 02:30 AM IST
ಫೋಟೋವಿವರ- (16ಎಚ್‌ಪಿಟಿ6) ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ಮಾಹಿತಿಹಕ್ಕು ಕಾಯ್ದೆ​ 2005 ರ ಜಾಗೃತಿ ಮತ್ತು ತರಬೇತಿ ಕಾರ್ಯಾಗಾರದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಸುಬ್ರಮಣ್ಯ ಎಚ್.ಎನ್ ಮಾತನಾಡಿದರು | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ನಮಗೆ ಅಗತ್ಯವಾದ ಮಾಹಿತಿಯು ಬಹುಪಾಲು ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗುತ್ತಿದೆ.

ಹೊಸಪೇಟೆ: ಜ್ಞಾನವೇ ವ್ಯಕ್ತಿಯ ನಿಜವಾದ ಆಸ್ತಿ. ಮಾಹಿತಿ ಜ್ಞಾನವಾಗಿ, ಜ್ಞಾನ ತಿಳಿವಳಿಕೆಯಾಗಿ ಪರಿವರ್ತನೆಯಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಸುಬ್ರಮಣ್ಯ ಎಚ್.ಎನ್. ಹೇಳಿದರು.ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಗುರುವಾರ ಮಾಹಿತಿಹಕ್ಕು ಕಾಯ್ದೆ​ 2005 ರ ಜಾಗೃತಿ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಮಗೆ ಅಗತ್ಯವಾದ ಮಾಹಿತಿಯು ಬಹುಪಾಲು ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗುತ್ತಿದೆ. ಮಾಹಿತಿಯನ್ನು ಯಾವ ಸಂದರ್ಭದಲ್ಲಿ, ಯಾವ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂಬ ಅರಿವು ಸಹ ನಮಗಿರಬೇಕಾಗುತ್ತದೆ. ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಮಾಹಿತಿಯನ್ನು ಕೇಳಿದಾಗ ಅದನ್ನು ನಿಖರವಾಗಿ ನೀಡಬೇಕು. ಇಲ್ಲಿ ಕಥೆ ಹೇಳಲು ಅಥವಾ ಅನಗತ್ಯ ವಿವರಣೆ ನೀಡಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.

ವಿಶೇಷವಾಗಿ ತನಿಖೆ ಹಾಗೂ ವಿಚಾರಣೆಯಲ್ಲಿರುವ ಮಾಹಿತಿಯನ್ನು ನೀಡುವ ಸಂದರ್ಭದಲ್ಲಿ ಎಚ್ಚರಿಕೆ ಅಗತ್ಯ ಎಂದರು.

ಹಂಪಿ ವಿವಿಯ ಕುಲಸಚಿವ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ,ಇಂದಿನ ಕಾಲಘಟ್ಟದಲ್ಲಿ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅತ್ಯಂತ ಅಗತ್ಯವಾಗಿದೆ. ಸರಳವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಾಗೂ ಮುಂದೆ ಸಂಭವಿಸಬಹುದಾದ ದೊಡ್ಡ ಅನಾಹುತಗಳನ್ನು ತಪ್ಪಿಸಲು ಕಾನೂನಿನ ಕುರಿತು ಸಮಗ್ರ ತಿಳುವಳಿಕೆ ಇರಬೇಕು ಎಂದರು.

ಸರ್ಕಾರಿ ನೌಕರರು ತಮ್ಮ ಸೇವಾ ಸವಲತ್ತುಗಳು, ಸೇವಾ ಭಡ್ತಿ ಹಾಗೂ ಆಡಳಿತಾತ್ಮಕ ನಿಯಮಗಳಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಅರಿವು ಹೊಂದಿರಬೇಕು. ಕೆಲವು ಸಂದರ್ಭಗಳಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಳಕೆ ಆಗುತ್ತಿದೆ. ಯಾವುದೇ ಸಂದರ್ಭದಲ್ಲಿ ಮಾಹಿತಿಯನ್ನು ಕೇಳಿದರೂ ಅದನ್ನು ನೀಡಲು ಸದಾ ಸಿದ್ಧರಾಗಿರಬೇಕು ಎಂದು ಸಲಹೆ ನೀಡಿದರು.

ಯುಜಿಸಿ ಹಾಗೂ ಉನ್ನತ ಶಿಕ್ಷಣ ಇಲಾಖೆಯ ನಿಯಮಗಳನ್ನು ಸಮರ್ಪಕವಾಗಿ ಅಳವಡಿಸಿಕೊಂಡು ಆಡಳಿತವನ್ನು ಸರಾಗವಾಗಿ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಒಬ್ಬ ವ್ಯಕ್ತಿ ತನ್ನ ವೈಯಕ್ತಿಕ ಬೆಳವಣಿಗೆಯ ಜೊತೆಗೆ ಸಂಸ್ಥೆಯ ಹಿತವನ್ನೂ ಗಮನದಲ್ಲಿಟ್ಟುಕೊಳ್ಳಬೇಕು. ಹಾಗೆ ಮಾಹಿತಿ ಹಕ್ಕು ಕಾಯ್ದೆಯ ಅರಿವಿನಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಈ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.

ಮಾಹಿತಿ ಕೇಂದ್ರದ ಮುಖ್ಯಸ್ಥೆ ಶಕುಂತಲಾ ಚೌಡನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಕುಲಸಚಿವ ಬಿ. ಗುರುಬಸಪ್ಪ ಸ್ವಾಗತಿಸಿದರು. ಆರ್.ವಿ.ದೇಶಪಾಂಡೆ ನಿರೂಪಿಸಿದರು. ಸಹಾಯಕ ಕುಲಸಚಿವ ಎಚ್. ಶ್ರೀನಿವಾಸ ವಂದಿಸಿದರು.

ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಮರಗಳ ಕಡಿತ: ಪ್ರಕರಣ ದಾಖಲು
ಶನೈಶ್ಚರ ದೇವರ ಪ್ರತಿಮೆಗೆ ತೈಲಾಭಿಷೇಕ