ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾಡುವ ಸಂಕಲ್ಪ ಅಭಿಯಾನದ ಅಂಗವಾಗಿ ಮಕ್ಕಳ ಸಂರಕ್ಷಣೆ ಮತ್ತು ಕಾನೂನು ಕುರಿತು ಬೃಹತ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುವಜನತೆ ದೇಶಕ್ಕೆ ಪ್ರೇರಣೆಯಾಗಬೇಕೇ ಹೊರತು ಮಾದಕ ವಸ್ತುಗಳಿಗೆ ದಾಸರಾಗಬಾರದು. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಡ್ರಗ್ಸ್ ಸೇವನೆ ಹೆಚ್ಚಾಗಿದೆ. ಪೋಷಕರು ಮತ್ತು ಅಧಿಕಾರಿಗಳು ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಆನ್ಲೈನ್ ಗೇಮ್ಸ್ಗಳಿಗೆ ಒಳಗಾಗದಂತೆ ಮಕ್ಕಳನ್ನು ರಕ್ಷಣೆ ಮಾಡಬೇಕು ಎಂದು ಹೇಳಿದರು.ಸಾರ್ವಜನಿಕರಲ್ಲಿ ಕಾನೂನಿನ ಅರಿವಿನ ಬಗ್ಗೆ ಮಾಹಿತಿ, ಕಾನೂನಿನ ಜ್ಞಾನ ಬಹಳ ಮುಖ್ಯ. ವಾಹನ ಚಲಾಯಿಸುವಾಗ ಹೆಲ್ಮೆಟ್, ಚಾಲನಾ ಪರವಾನಗಿ, ವಾಹನದ ಭದ್ರತಾ ವಿಮೆಯನ್ನು ಹೊಂದಿರಬೇಕು ಎಂದು ಹೇಳಿದ ಅವರು, ಮಕ್ಕಳ ಮೇಲೆ ದೌರ್ಜನ್ಯ ನಡೆದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ದೇಶದಲ್ಲಿ ಶೇ.೪೩ರಷ್ಟು ಸಣ್ಣ ಹುಡುಗರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಆದ್ದರಿಂದ ಪೋಷಕರು ಮಕ್ಕಳ ಮೇಲೆ ಹೆಚ್ಚು ಗಮನಹರಿಸಬೇಕು ಎಂದು ಹೇಳಿದರು.
ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪೋಷಕರ ಪಾತ್ರ ಬಹಳ ಮುಖ್ಯ. ಮಕ್ಕಳನ್ನು ದೇಶದ ಸಂಪತ್ತನ್ನಾಗಿ ಮಾಡಬೇಕೇ ಹೊರತು ಮಕ್ಕಳ ಆಸೆ, ಆಕಾಂಕ್ಷೆ, ಭಾವನೆಯನ್ನು ಮೊಟಕುಗೊಳಿಸಬಾರದು. ಮಕ್ಕಳನ್ನು ಸಾಮಾಜಿಕ ಪಿಡುಗಿನಿಂದ ಹೊರತರಲು ಆಶಾ ಕಾರ್ಯಕರ್ತೆಯರ ಮಹತ್ವ ಬಹಳ ಮುಖ್ಯವಾಗಿದೆ. ಹಿರಿಯರು, ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು ಮತ್ತು ಗೌರವಿಸಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿ ಡಾ.ಕುಮಾರ್ ಅಧ್ಯಕತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿವೆ. ಕಳೆದ ವರ್ಷ ಕೇವಲ ೧೪ ಪ್ರಕರಣಗಳು ಮಾತ್ರ ದಾಖಲಾಗಿವೆ. ಜಿಲ್ಲೆಯಲ್ಲಿ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸರ್ಕಾರ, ಸಂಘ- ಸಂಸ್ಥೆ, ಅಧಿಕಾರಿಗಳು, ಎಲ್ಲರೂ ಸಾರ್ವಜನಿಕರು ಜೊತೆಯಾಗಿ ಬಾಲ್ಯ ವಿವಾಹವನ್ನು ತೊಡೆದು ಹಾಕಬೇಕು ಎಂದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯ. ಸಾಮಾಜಿಕ, ಆರ್ಥಿಕ, ಧಾರ್ಮಿಕವಾಗಿ ಜಿಲ್ಲೆಯು ಶ್ರೀಮಂತ ಜಿಲ್ಲೆಯಾಗಿದೆ. ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಬೇಕು, ಪೋಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಬೇಕು. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಹೇಳಿದರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿರ್ದೇಶನಾಲಯ ಜಂಟಿ ನಿರ್ದೇಶಕರಾದ ಬಿ.ಎಚ್.ನಿಶ್ಚಲ್, ಮಕ್ಕಳ ರಕ್ಷಣಾ ನಿರ್ದೇಶನಾಲಯ ನಿರ್ದೇಶಕ ಡಾ.ಸಿ.ವಿ.ಸ್ನೇಹ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕಿ ಆಶಾ, ರಶ್ಮಿ ಇತರರಿದ್ದರು.