ಏ. 29, 30ರಂದು ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ

KannadaprabhaNewsNetwork |  
Published : Mar 25, 2026, 02:45 AM IST
ಪೋಟೋ 5 : ತ್ಯಾಮಗೊಂಡ್ಲು ಹೋಬಳಿಯ ಮುದ್ದಲಿಂಗನಹಳ್ಳಿ ಹಾಲಿನ ಡೇರಿಯ 25 ನೇ ವರ್ಷದ ರಜತ ಮಹೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಅಧಿಕ ಹಾಲು ಕರೆಯುವ ಸ್ಪರ್ದೆ, ಬರಡು ರಾಸುಗಳ ಚಿಕಿತ್ಸೆ, ವಿಶ್ರ ತಳಿ ಕರುಗಳ ಪ್ರದರ್ಶನ, ಹೈನುಗಾರರಿಗೆ ಬೆಳ್ಳಿ ನಾಣ್ಯ ವಿತರಣೆ, ರಾಸುಗಳಿಗೆ ಔಷಧೋಪಚಾರ ವಿತರಣೆ ಕಾರ್ಯಕ್ರಮವನ್ನು ಬಮೂಲ್ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ನಾಗರಾಜು, ಭವಾನಿ ಶಂಕರ್ ಬೈರೇಗೌಡ ಉದ್ಘಾಟಿಸಿದರು. | Kannada Prabha

ಸಾರಾಂಶ

ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ. 29, 30ರಂದು ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಲಿದೆ.

ಸುಂಟಿಕೊಪ್ಪ: ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ. 29, 30ರಂದು ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಲಿದೆ.

ಮಂಗಳವಾರ ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ್ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಸಾಹಿತ್ಯ ಸಮ್ಮೇಳನ ಯಶಸ್ನ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹೊಂದಿರುವ ಸುಂಟಿಕೊಪ್ಪ ಹೋಬಳಿಯಲ್ಲಿ ಈ ಸಾಲಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತಿರ್ಮಾನಿಸಲಾಗಿದೆ. ಸಮ್ಮೇಳನವು 2 ದಿನ ಕಾಲ ನಡೆಯಲಿದ್ದು, 29ರಂದು ಸಂಜೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮತ್ತು 30ರಂದು ಸಮ್ಮೇಳನದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಸಮ್ಮೇಳನಕ್ಕೆ ಅಂದಾಜು 18 ರಿಂದ19 ಲಕ್ಷ ರು. ವೆಚ್ಚ ತಗುಲಲಿದ್ದು, ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು 11 ಉಪ ಸಮಿತಿಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಕನ್ನಡ ಭಾಷೆ ಮತ್ತು ಸಾಹಿತ್ಯದ ಒಂದೇ ದೃಷ್ಟಿಕೋನದಿಂದ ಒಂದಾಗಿ ದುಡಿಯೋಣ ಎಂದು ಕರೆ ನೀಡಿದರು.

5 ಲಕ್ಷ ರು. ಅನುದಾನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನೀಡುತ್ತದೆ. ಆದರೆ ಈಗಾಗಲೇ ಸರಕಾರದ ನೀತಿ ನಿಯಮಗಳಿಗೆ ಅನುಗುಣವಾಗಿ ಅರ್ಥಿಕ ವರ್ಷ ಮುಗಿದಿದ್ದು, ಏ. 30ರೊಳಗೆ ಲೆಕ್ಕಪತ್ರ ಮಂಡಿಸಬೇಕಾದ ಹಿನ್ನೆಲೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲೇ ಸಮ್ಮೇಳನ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಮಾತನಾಡಿದ ಶಾಲಾ ಶಿಕ್ಷಕ ಶಿಕ್ಷಕಿಯರು ಎಸ್ಸೆಸ್ಸೆಲ್ಸಿ ಪರೀಕ್ಷೆ, ಪಿಯುಸಿ ಪರೀಕ್ಷೆ ಮೌಲ್ಯಮಾಪನ, 1 ತಿಂಗಳ ಕಾಲ ನಡೆಯುವ ಜನಗಣತಿ ಕುರಿತು ಮಾಹಿತಿ ನೀಡಿದರಲ್ಲದೆ ಸಮ್ಮೇಳನದ ಯಶಸ್ವಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಸಾಧ್ಯ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಶಿಕ್ಷಣ ಇಲಾಖೆ ಮೂಲಕ ಸಮ್ಮೇಳನ ನಡೆಯುವ 2 ದಿನಗಳ ಮಟ್ಟಿಗೆ ಅನುಮತಿ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ..ಲೋಕೇಶ್ ಕುಮಾರ್ ಭರವಸೆ ನೀಡಿದ್ದಾರೆ ಎಂದು ಟಿ.ಪಿ. ರಮೇಶ್ ಮಾಹಿತಿ ನೀಡಿದರು. ಇದೇ ಸಂದರ್ಭ ಸಮ್ಮೇಳನದ ಯಶಸ್ವಿಗಾಗಿ ವಿವಿಧ ಉಪ ಸಮಿತಿ ರಚಿಸಲಾಯಿತು. ವೇದಿಕೆಯಲ್ಲಿ ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸೆಬಾಸ್ಟೀನ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ನಾಗೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಎ. ಮುನೀರ್ ಆಹ್ಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್‌ ಕುಮಾರ್, ಸುಂಟಿಕೊಪ್ಪ ಗ್ರಾಪಂ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್‌ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್. ದೇವರಾಜ್, ಸುಂಟಿಕೊಪ್ಪ ಹೋಬಳಿ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಅನಿಲ್‌ ಕುಮಾರ್, ಮಹಿಳಾ ಕಾರ್ಯದರ್ಶಿ ಲೀಲಾ ಮೇದಪ್ಪ, ನಿಕಟಪೂರ್ವ ಎಂ.ಎಸ್. ಸುನಿಲ್, ಪಿಡಿಒಗಳಾದ ವಿ.ಜಿ. ಲೋಕೇಶ್, ನಂದೀಶ್, ರವೀಶ್, ನಾಕೂರು ಶಿರಂಗಾಲ ಗ್ರಾಪಂ ಕಾರ್ಯದರ್ಶಿ ಚಂದ್ರಶೇಖರ್, ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋ ಚಾಲಕರ ಸಂಘದ ಅಧ್ಯಕ್ಷ ಕೆ.ಎಚ್. ಶರೀಫ್, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಕಸಾಪ ವಿವಿಧ ಪದಾಧಿಕಾರಿಗಳು ಕಸಾಪ ಸದಸ್ಯರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಿಕೆ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ
ಆಧುನಿಕತೆಯಿಂದ ಗ್ರಾಮೀಣ ಕ್ರೀಡೆಗಳು ಕಣ್ಮರೆ