ಬಳ್ಳಾರಿ: ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕೆರೆ ನಿರ್ಮಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಡಿವೈಎಫ್ಐ ನೇತೃತ್ವದಲ್ಲಿ ಬುಧವಾರ ಅನಿರ್ದಿಷ್ಟ ಧರಣಿ ಆರಂಭಗೊಂಡಿತು.
ಗ್ರಾಮದಲ್ಲಿ ಸುಮಾರು 300 ಅಧಿಕ ಕುಟುಂಬಗಳು ಆಶ್ರಯವಿಲ್ಲದೆ ಒದ್ದಾಡುತ್ತಿವೆ. ಚಿಕ್ಕ ಗುಡಿಸಲುಗಳಲ್ಲಿಯೇ ಮೂರ್ನಾಲ್ಕು ಕುಟುಂಬಗಳು ವಾಸ ಮಾಡುವಂತಾಗಿದೆ. ಆದರೆ, ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗಿಲ್ಲ. ಗ್ರಾಮದಿಂದ ಅಲ್ಲೀಪುರಕ್ಕೆ ಸಾಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ರಸ್ತೆ ನಿರ್ಮಾಣಕ್ಕೆ ಮುಂದಾಗಿಲ್ಲ. ಶೌಚಾಲಯಗಳು ಇಲ್ಲದೆ ಮಹಿಳೆಯರು ಪರದಾಡುವಂತಾಗಿದೆ. ಹೀಗಿದ್ದರೂ ಸ್ಥಳೀಯ ಗ್ರಾಮ ಪಂಚಾಯಿತಿ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲ ಸಮಸ್ಯೆಗಳ ಕುರಿತು ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿಕೊಂಡರೂ ಸೌಜನ್ಯಕ್ಕಾದರೂ ಭೇಟಿ ನೀಡಿಲ್ಲ ಎಂದು ದೂರಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಡಿವೈಎಫ್ಐ ಜಿಲ್ಲಾಧ್ಯಕ್ಷ ಯು. ಎರಿಸ್ವಾಮಿ ಮಾತನಾಡಿ, ಗ್ರಾಮದಲ್ಲಿ 15ರಿಂದ 20 ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕಲುಷಿತ ನೀರು ಪೂರೈಕೆಯಿಂದ ಜನರು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ತೀವ್ರಗೊಂಡು ಜನರು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.
ಕೂಡಲೇ ಶಾಸಕರು ಹಾಗೂ ಸಂಸದರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಸಮರ್ಪಕ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.ಸಿಐಟಿಯು ಮುಖಂಡ ಜೆ. ಸತ್ಯಬಾಬು, ಎಚ್. ಎರಿಸ್ವಾಮಿ, ಮಸ್ತಾನ್ಸಾಬ್, ಉಳ್ಳೂರು ಶ್ರೀನಿವಾಸ್, ತಿಪ್ಪೇಸ್ವಾಮಿ, ಶಿವಾನಂದ, ಸೀನಪ್ಪ, ತಿಪ್ಪಣ್ಣ ಸೇರಿದಂತೆ ಡಾ. ಅಂಬೇಡ್ಕರ್ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಕನ್ನಡಪರ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. .