ಕೋಲಾರ ಜಿಲ್ಲಾಧಿಕಾರಿ ಡಾ..ಎಂ.ಆರ್.ರವಿ ಸೇವೆಗೆ ವಿದಾಯ

KannadaprabhaNewsNetwork |  
Published : Jul 29, 2026, 01:15 AM IST
೨೮ಕೆಎಲ್‌ಆರ್-೩ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ. | Kannada Prabha

ಸಾರಾಂಶ

ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ೨೨ ಎಕರೆ ಜಾಗ ಗುರುತಿಸಲಾಗಿದ್ದು, ಡಿಪಿಆರ್ ಸಿದ್ಧವಾಗಿದೆ ಹಾಗೂ ಅರಣ್ಯ ಇಲಾಖೆಯ ಅನುಮತಿ ಮಾತ್ರ ಬಾಕಿ ಇದೆ ಎಂದರು.

ಕನ್ನಡಪ್ರಭ ವಾರ್ತೆ ಕೋಲಾರ

ಜಿಲ್ಲೆಯಲ್ಲಿ ಕಳೆದ ೧೯ ತಿಂಗಳುಗಳಿಂದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಹಾಗೂ ಆಡಳಿತವನ್ನು ಜನಮುಖಿ ಮತ್ತು ಜನಸ್ನೇಹಿಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ೧೯೯೨ರ ಡಿಸೆಂಬರ್ ೨೬ರಂದು ಚಿಂತಾಮಣಿಯ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ ತಾವು, ಕಾಕತಾಳೀಯವೆಂಬಂತೆ ಕೋಲಾರದಲ್ಲಿಯೇ ಜಿಲ್ಲಾಧಿಕಾರಿಯಾಗಿ ತಮ್ಮ ಸೇವೆ ಪೂರ್ಣಗೊಳಿಸುತ್ತಿರುವುದು ವಿಶೇಷವಾಗಿದೆ ಎಂದು ಸ್ಮರಿಸಿದರು.

ತಮ್ಮ ಆಡಳಿತಾವಧಿಯಲ್ಲಿ ಸಹಕರಿಸಿದ ಜಿಲ್ಲೆಯ ಜನತೆ, ರಾಜ್ಯ ಸರ್ಕಾರ, ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಜು.೩೧ರಂದು ತಮ್ಮ ಸೇವಾ ಅವಧಿ ಮುಗಿಯುತ್ತಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ತಾವು ರಾಜಕೀಯಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ತಮಗೆ ರಾಜಕೀಯದ ಒಲವಿಲ್ಲ. ನಿವೃತ್ತಿಯ ನಂತರ ಮೈಸೂರಿನಲ್ಲಿ ನೆಲೆಸಲಿದ್ದು, ಓದು, ಬರಹ, ಪ್ರವಾಸ ಹಾಗೂ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದರು.

ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ೨೨ ಎಕರೆ ಜಾಗ ಗುರುತಿಸಲಾಗಿದ್ದು, ಡಿಪಿಆರ್ ಸಿದ್ಧವಾಗಿದೆ ಹಾಗೂ ಅರಣ್ಯ ಇಲಾಖೆಯ ಅನುಮತಿ ಮಾತ್ರ ಬಾಕಿ ಇದೆ ಎಂದರು.

ಕೃಷಿ ಆಧಾರಿತ ಸಂಸ್ಕರಣಾ ಕೈಗಾರಿಕಾ ವಸಾಹತು ಸ್ಥಾಪನೆಗೆ ೧೦೦ ಎಕರೆ ಜಾಗ ಮೀಸಲಿಡುವ ಪ್ರಸ್ತಾವನೆ, ಎಪಿಎಂಸಿಗೆ ೬೦ ಎಕರೆ ಜಾಗ ಮತ್ತು ಹೆದ್ದಾರಿಯಲ್ಲಿ ಅಪಘಾತಗಳ ತ್ವರಿತ ಚಿಕಿತ್ಸೆಗಾಗಿ ಟ್ರಾಮಾ ಸೆಂಟರ್ ಸ್ಥಾಪನೆಯಂತಹ ಯೋಜನೆಗಳು ಶೀಘ್ರದಲ್ಲೇ ಈಡೇರುವ ವಿಶ್ವಾಸ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರಿಗೈಲಿ ಮಲಗುಂಡಿ ಸ್ವಚ್ಛತೆ: ಕ್ರಮಕ್ಕೆ ಡಿಎಸ್ಸೆಸ್ ಒತ್ತಾಯ
ಕೌಶಲ್ಯಾಧಾರಿತ, ಗುಣಮಟ್ಟದ ಶಿಕ್ಷಣಕ್ಕೆ ದಾವಿವಿ ಒತ್ತು